ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ : ರಾಜ್ಯ ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟೆ

ಚಿಕ್ಕಬಳ್ಳಾಪುರ, ಸೆ.20: ಮಾಹಿತಿ ಹಕ್ಕು ಕಾಯ್ದೆಯಡಿಯ ದ್ವಿತೀಯ ಮೇಲ್ಮನವಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಜಿಲ್ಲಾ ಮಟ್ಟದಲ್ಲಿಯೇ ಅದಾಲತ್ ನಡೆಸುವ ಚಿಂತನೆಯನ್ನು ಆಯೋಗ ಹೊಂದಿದೆ ಎಂದು ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟೆ ಅವರು ತಿಳಿಸಿದ್ದಾರೆ.
ಅವರು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, 7 ತಿಂಗಳ ಹಿಂದೆ ರಾಜ್ಯ ಮಾಹಿತಿ ಆಯೋಗದಲ್ಲಿ ಸುಮಾರು 54 ಸಾವಿರಕ್ಕೂ ಹೆಚ್ಚು ಅರ್ಜಿಗಳು ವಿಲೇವಾರಿಗೆ ಬಾಕಿ ಇದ್ದವು. ಈ ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥ ಮಾಡಿ ಅರ್ಜಿದಾರರಿಗೆ ಮಾಹಿತಿ ತಲುಪಿಸುವ ಉದ್ದೇಶದಿಂದ ಹಲವು ಯುಕ್ತ ಕ್ರಮಗಳನ್ನು ಆಯೋಗ ತೆಗೆದುಕೊಂಡು 12,896 ಅರ್ಜಿಗಳನ್ನು ಇತ್ಯರ್ಥ ಪಡಿಸಲಾಗಿದೆ.
ಪ್ರಸ್ತುತ 41,104ಕ್ಕೆ ಮಾಹಿತಿ ಹಕ್ಕು ಅರ್ಜಿಗಳನ್ನು ಇಳಿಸಲಾಗಿದೆ. ಈ 41,104 ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸುವ ಉದ್ದೇಶದಿಂದ ಮಾಹಿತಿ ಆಯುಕ್ತರೇ ಜಿಲ್ಲಾ ಮಟ್ಟಕ್ಕೆ ಆಗಮಿಸಿ ಅದಾಲತ್ ತೆಗೆದುಕೊಂಡು ಸ್ಥಳದಲ್ಲೆ ಅರ್ಜಿದಾರರಿಗೆ ಮಾಹಿತಿ ತಲುಪಿಸುವ ಕಾರ್ಯ ಮುಂದಿನ ಕನ್ನಡ ರಾಜ್ಯೋತ್ಸವದ ವೇಳೆಗೆ ಆರಂಭವಾಗಬಹುದು ಎಂದು ಭರವಸೆ ನೀಡಿದರು.
ಮಾಹಿತಿ ಆಯುಕ್ತ ರಾಜಶೇಖರ .ಎಸ್. ಮಾತನಾಡಿ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಾಹಿತಿ ಹಕ್ಕು ಅರ್ಜಿಗಳ ವಿಲೆವಾರಿ ಉತ್ತಮವಾಗಿದೆ. ಕಳೆದ ಎಪ್ರಿಲ್ನಿಂದ ಈ ವರೆಗೆ 10,777 ಮಾಹಿತಿ ಹಕ್ಕು ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ 9,837ರಷ್ಟು ಅರ್ಜಿಗಳು ವಿಲೆವಾರಿಯಾಗಿ 772 ಅರ್ಜಿಗಳು ಮಾತ್ರ ಬಾಕಿ ಇವೆ. ಜಿಲ್ಲೆಯಲ್ಲಿ ಸ್ವೀಕಾರಗೊಂಡಿರುವ ಮಾಹಿತಿ ಅರ್ಜಿಗಳ ಪೈಕಿ ಪಂಚಾಯತ್ ರಾಜ್ ಇಲಾಖೆಯಡಿ 368, ಕಂದಾಯ ಇಲಾಖೆಯಡಿ 212, ಸಮಾಜ ಕಲ್ಯಾಣ ಇಲಾಖೆಯಡಿ 33, ನಾಗರಾಭಿವೃದ್ಧಿ ಇಲಾಖೆಯಡಿ 31, ಜಲ ಸಂಪನ್ಮೂಲ ಇಲಾಖೆಯಡಿ 21, ಕೃಷಿ ಇಲಾಖೆಯ 19, ಅರಣ್ಯ ಇಲಾಖೆಯಡಿ 18, ಲೋಕೋಪಯೋಗಿ ಇಲಾಖೆಯಡಿ 17 ಅರ್ಜಿಗಳಿವೆ ಹಾಗೂ ಇತರ ಇಲಾಖೆಗಳಲ್ಲಿ ಪ್ರಕರಣಗಳು ಬಾಕಿ ಇವೆ. ಈ ಎಲ್ಲಾ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥ ಪಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ವೈ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಡಾ.ಎನ್. ಭಾಸ್ಕರ್, ಉಪ ವಿಭಾಗಾಧಿಕಾರಿ ಡಿ.ಹೆಚ್ ಅಶ್ವಿನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತಿಕ್ ಪಾಷಾ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
10 ಕೋಟಿ ರೂ.ಗೂ ಹೆಚ್ಚು ದಂಡ
ರಾಜ್ಯದಲ್ಲಿ ಸರಿಯಾಗಿ ಮಾಹಿತಿ ನೀಡದ 10,699 ಸಾರ್ವಜನಿಕ ಮಾಹಿತಿಹಕ್ಕು ಅಧಿಕಾರಿಗಳಿಗೆ ಈವರೆಗೆ 10,08,46,450 ರೂ.ಯಷ್ಟು ದಂಡವನ್ನು ಆಯೋಗ ವಿಧಿಸಿದೆ. ಈ ಪೈಕಿ 2119 ಅಧಿಕಾರಿಗಳು 2.45 ಕೋಟಿ ರೂ. ದಂಡ ಪಾವತಿಸಿದ್ದು, ಉಳಿದ ಅಧಿಕಾರಿಗಳು ದಂಡ ಪಾವತಿ ಮಾಡುವಂತೆ ಸೂಚಿಸಿ ಸಂಬಂಧಪಟ್ಟ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ ಎಂದು ರುದ್ರಣ್ಣ ಹರ್ತಿಕೋಟೆ ಅವರು ಮಾಹಿತಿ ನೀಡಿದರು.







