ಕೆಎಂಎಫ್ ಮಾಜಿ ನಿರ್ದೇಶಕ ಸದಾಶಿವ ಬಿಜೆಪಿ ಸೇರ್ಪಡೆ

ಬೆಂಗಳೂರು : ಬೇರೆ ಪಕ್ಷಗಳಿಂದ ಬಿಜೆಪಿಗೆ ಸೇರ್ಪಡೆಯಾದ ಮುಖಂಡರಿಗೆ ಪಕ್ಷದಲ್ಲಿ ಉತ್ತಮ ಸ್ಥಾನ ನೀಡಿ ಗೌರವಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ರವಿವಾರ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬೆಳಗಾವಿ ಜಿಲ್ಲೆಯ ರಾಯಭಾಗ ಕ್ಷೇತ್ರದ ಮುಖಂಡ ಹಾಗೂ ಕೆಎಂಎಫ್ನ ಮಾಜಿ ನಿರ್ದೇಶಕ ಸದಾಶಿವ ವಸಂತ ದೇಶಿಂಗೆ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ತಾಲೂಕು ಪಂಚಾಯಿತಿ ಮಾಜಿ ಸದಸ್ಯರು, ರಾಯಣ್ಣ ಗೋಗ್ರೀನ್ ಫೌಂಡೇಷನ್ನ ಅಧ್ಯಕ್ಷ ದೇಶಿಂಗೆ ಅವರು, ಸಹಕಾರಿ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿರುವವರು. ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅವರ ಸೇರ್ಪಡೆಯಿಂದ ಉತ್ತರ ಕರ್ನಾಟಕ ಭಾಗಕ್ಕೆ ವಿಶೇಷವಾಗಿ ಕಿತ್ತೂರು ಕರ್ನಾಟಕ ಭಾಗಕ್ಕೆ ಆನೆ ಬಲ ಬಂದಂತಾಗಿದೆ ಎಂದರು.
ಈ ಹಿಂದೆ ಕರ್ನಾಟಕದಲ್ಲಿ ಬಿಜೆಪಿ ಸರಕಾರ ರಚಿಸಲು ಯಡಿಯೂರಪ್ಪ ಸಿಎಂ ಆಗಬೇಕೆಂದು ಬಯಸಿ ಕಾಂಗ್ರೆಸ್-ಜೆಡಿಎಸ್ ಮುಖಂಡರು ರಾಜೀನಾಮೆ ನೀಡಿ ಬಿಜೆಪಿಗೆ ಬಂದರು. ಬೈರತಿ ಬಸವರಾಜು, ಎಂಟಿಬಿ ನಾಗರಾಜು ಬಿಜೆಪಿಗೆ ಸೇರ್ಪಡೆಯಾದರು. ಮಂತ್ರಿಯಾಗಿದ್ದರೂ ತ್ಯಾಗ ಮಾಡಿ ನಮ್ಮ ಪಕ್ಷಕ್ಕೆ ಬಂದಿದ್ದರಿಂದ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಯಿತು. ಸಿ.ಎಚ್.ವಿಜಯಶಂಕರ್ ಅವರನ್ನು ಎಂಎಎಲ್ಸಿ ಮಾಡಿ ಸಚಿವ ಸ್ಥಾನ ನೀಡಿದ್ದು ಯಡಿಯೂರಪ್ಪ ಎಂದು ಸ್ಮರಿಸಿದರು.
ಕಾಂಗ್ರೆಸ್ ಪಕ್ಷವು ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಸಮಾಜದಲ್ಲಿ ವಿಷಬೀಜ ಬಿತ್ತುವ ಕೆಲಸವನ್ನು ಮಾಡುತ್ತಿದೆ. ಇತ್ತೀಚೆಗೆ ಹಾವೇರಿ ಘಟನೆಯ ನಂತರ ಸರಕಾರ ನಡೆಯನ್ನು ನೋಡಿದರೆ ನಾಚಿಕೆಯಾಗಬೇಕು. ಕ್ಷುಲ್ಲಕ ವಿಚಾರಕ್ಕೆ ಹಾವೇರಿಯಲ್ಲಿ ಗಲಾಟೆ ನಡೆಯಿತು. ಆದರೆ, ಸರಕಾರ ಬಡ ಕುಟುಂಬವನ್ನು ಮಾತನಾಡಿಸಿ ಧೈರ್ಯ ತುಂಬಲಿಲ್ಲ ಎಂದು ದೂರಿದರು.






