ಪೊಕ್ಸೊ ಪ್ರಕರಣ ; ವಚನಾನಂದ ಸ್ವಾಮೀಜಿಗೆ ಷರತ್ತುಬದ್ಧ ಜಾಮೀನು

ದಾವಣಗೆರೆ : ವಚನಾನಂದ ಸ್ವಾಮೀಜಿ ವಿರುದ್ಧದ ಪೊಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ವಿಶೇಷ ಪೊಕ್ಸೊ ನ್ಯಾಯಾಲಯ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಈ ಹಿಂದೆ ವಚನಾನಂದ ಸ್ವಾಮೀಜಿ ಅವರಿಗೆ ದೊರೆತಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಜಾಮೀನು ರದ್ದಾಗಿದ್ದ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯಕ್ಕೆ ರೆಗ್ಯುಲರ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ ಪೊಕ್ಸೊ ನ್ಯಾಯಾಲಯವು ಪ್ರಕರಣದ ವಿವರಗಳನ್ನು ಪರಿಶೀಲಿಸಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ರೆಗ್ಯೂಲರ್ ಜಾಮೀನು ಅರ್ಜಿಯ ವಿಚಾರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.3ರಂದು ಸ್ವಾಮೀಜಿಯವರ ಪರ ವಕೀಲರು ನ್ಯಾಯಾಲಯದಲ್ಲಿ ತಮ್ಮ ವಾದವನ್ನು ಮಂಡಿಸಿದ್ದರು. ಇದರ ಮುಂದುವರಿದ ಭಾಗವಾಗಿ, ಜು.4ರಂದು ಸರಕಾರದ ಪರವಾಗಿ ಸರಕಾರಿ ಅಭಿಯೋಜಕರು (ಪಿಪಿ) ಪ್ರಬಲ ವಾದ ಮಂಡಿಸಿದ್ದರು.
ಉಭಯ ಪಕ್ಷಗಳ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಜು.6ಕ್ಕೆ ಮುಂದೂಡಿತ್ತು. ಅಂದು ದೂರದಾರರ ಪರ ವಕೀಲರು ತಮ್ಮ ವಾದವನ್ನು ಮಂಡಿಸಿದ್ದರು. ಈ ಪ್ರಕರಣದ ಸುದೀರ್ಘ ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ಸೋಮವಾರ (ಜು.13)ಕ್ಕೆ ತನ್ನ ಅಂತಿಮ ಆದೇಶ ಕಾಯ್ದಿರಿಸಿತ್ತು.






