ಮಲ ತ್ಯಾಜ್ಯ ಸಂಸ್ಕರಣಾ ಘಟಕಗಳ ವಿನ್ಯಾಸ ಕಾರ್ಯಾಚರಣೆ ಕುರಿತು ರಾಜ್ಯಮಟ್ಟದ ಕಾರ್ಯಾಗಾರ

ಬೆಂಗಳೂರು : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸಿಡಿಡಿ ಇಂಡಿಯಾ ಸಂಸ್ಥೆಯ ಸಹಯೋಗದೊಂದಿಗೆ ‘ಮಲತ್ಯಾಜ್ಯ ಸಂಸ್ಕರಣಾ ಘಟಕಗಳ ವಿನ್ಯಾಸ ಮತ್ತು ಕಾರ್ಯಾಚರಣೆ’ಯ ಕುರಿತು ಬಿಡದಿಯಲ್ಲಿ ರಾಜ್ಯಮಟ್ಟದ ಕಾರ್ಯಾಗಾರ ನಡೆಸಲಾಯಿತು.
ಈ ವೇಳೆ ಮಾತನಾಡಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತೆ ಫೌಝಿಯಾ ತರನ್ನುಮ್ ಬಿ., ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಸಮಗ್ರ ನೈರ್ಮಲ್ಯ ವ್ಯವಸ್ಥೆಯನ್ನು ನಿರ್ಮಿಸುವಲ್ಲಿ ಮಲತ್ಯಾಜ್ಯ ಮತ್ತು ಬೂದುನೀರು ನಿರ್ವಹಣೆ ಅತ್ಯಂತ ಮಹತ್ವದ ಅಂಶವಾಗಿದೆ ಎಂದರು.
ಶೌಚಾಲಯ ನಿರ್ಮಾಣದೊಂದಿಗೆ ಮಲತ್ಯಾಜ್ಯದ ಸುರಕ್ಷಿತ ಸಂಗ್ರಹಣೆ, ಸಾಗಾಣಿಕೆ, ವೈಜ್ಞಾನಿಕ ಸಂಸ್ಕರಣೆ ಹಾಗೂ ಮರುಬಳಕೆಗೆ ಆದ್ಯತೆ ನೀಡಿದಾಗ ಮಾತ್ರ ಗ್ರಾಮೀಣ ನೈರ್ಮಲ್ಯ ವ್ಯವಸ್ಥೆ ಸಂಪೂರ್ಣವಾಗಲಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ತಾಂತ್ರಿಕ ಸಾಮಥ್ರ್ಯ ವೃದ್ಧಿ ಹಾಗೂ ಸುಸ್ಥಿರ ನಿರ್ವಹಣಾ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪಕಾರ್ಯದರ್ಶಿ ಜಾಫರ್ ಶರೀಫ್ ಸುತಾರ, ಯೋಜನಾಧಿಕಾರಿ ಸ್ನೇಹಲತಾ ಸೇರಿದಂತೆ ರಾಜ್ಯಮಟ್ಟದ ತಾಂತ್ರಿಕ ಸಮಾಲೋಚಕರು ಭಾಗವಹಿಸಿದ್ದರು.
ರಾಜ್ಯದಲ್ಲಿ 88 ಮಲ ತ್ಯಾಜ್ಯ ಸಂಸ್ಕರಣಾ ಘಟಕ ಕಾಮಗಾರಿ ಪೂರ್ಣ: ‘ಪ್ರಸ್ತುತ ರಾಜ್ಯದಲ್ಲಿ 88ಮಲ ತ್ಯಾಜ್ಯ ಸಂಸ್ಕರಣಾ ಘಟಕಗಳ ಕಾಮಗಾರಿ ಪೂರ್ಣಗೊಂಡಿದ್ದು, ಅವುಗಳಲ್ಲಿ 64ಘಟಕಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಇನ್ನೂ 75 ಘಟಕಗಳ ಕಾಮಗಾರಿ ಪ್ರಗತಿಯಲ್ಲಿದ್ದು, 24 ಘಟಕಗಳು ಟೆಂಡರ್ ಹಂತದಲ್ಲಿವೆ. 12 ಘಟಕಗಳಿಗೆ ಟೆಂಡರ್ ಪ್ರಕ್ರಿಯೆ ಆರಂಭಿಸಬೇಕಿದೆ. ಈ ಘಟಕಗಳ ಪೂರ್ಣ ಅನುಷ್ಠಾನದೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ಮಲತ್ಯಾಜ್ಯ ನಿರ್ವಹಣೆಗೆ ಸುಸ್ಥಿರ ಮೂಲಸೌಕರ್ಯ ನಿರ್ಮಾಣವಾಗಲಿದ್ದು, ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕ ಆರೋಗ್ಯ ರಕ್ಷಣೆಗೆ ಮಹತ್ವದ ಕೊಡುಗೆ ದೊರೆಯಲಿದೆ.






