ಸಹಕಾರ ಮಹಾ ಮಂಡಳದ ಅಧ್ಯಕ್ಷರಾಗಿ ಜಿ.ಟಿ.ದೇವೇಗೌಡ ಆಯ್ಕೆ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತದ ಅಧ್ಯಕ್ಷರಾಗಿ ಹಿರಿಯ ಶಾಸಕ ಜಿ.ಟಿ.ದೇವೇಗೌಡ, ಉಪಾಧ್ಯಕ್ಷರಾಗಿ ಬಿ.ಕೆ.ಶಿವಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶುಕ್ರವಾರ ಇಲ್ಲಿನ ರೇಸ್ಕೋರ್ಸ್ ರಸ್ತೆಯಲ್ಲಿನ ಸಹಕಾರ ಮಹಾಮಂಡಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿ.ಟಿ.ದೇವೇಗೌಡ, ಸಹಕಾರ ಮಹಾಮಂಡಳದ ಚುನಾವಣೆ ಸಂದರ್ಭದಲ್ಲಿ ನಿರ್ದೇಶಕರು ಎರಡು ಗುಂಪುಗಳಾಗಿ ವಿಭಜನೆಯಾಗುವ ಸ್ಥಿತಿ ನಿರ್ಮಾಣವಾಗಿತ್ತು. ಆದರೆ ಸಹಕಾರ ಕ್ಷೇತ್ರವು ಪಕ್ಷ ರಾಜಕಾರಣಕ್ಕೆ ಒಳಗಾಗಬಾರದು ಎಂಬ ಉದ್ದೇಶದಿಂದ ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಹಕಾರ ಸಚಿವರು ಎಲ್ಲರನ್ನು ಒಟ್ಟಾಗಿ ಕರೆದು ಮಾತುಕತೆ ನಡೆಸಿದರು ಎಂದು ತಿಳಿಸಿದರು.
ಸಹಕಾರ ಮಹಾಮಂಡಳ ಸಹಕಾರಿ ಕ್ಷೇತ್ರಕ್ಕೆ ಮಾತೃ ಸಂಸ್ಥೆಯಾಗಿರುವುದರಿಂದ ಅದರ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಡಿ.ಕೆ.ಶಿವಕುಮಾರ್ ಅವರು ಸಲಹೆ ನೀಡಿದರು. ಇದರ ಪರಿಣಾಮವಾಗಿ ನಿರ್ದೇಶಕರ ನಡುವೆ ಒಮ್ಮತ ಮೂಡಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರ ಆಯ್ಕೆ ಅವಿರೋಧವಾಗಿ ನಡೆಯಲು ಸಾಧ್ಯವಾಯಿತು ಎಂದು ಹೇಳಿದರು.
ಸಹಕಾರಿ ಸಂಸ್ಥೆಗಳ ಆಡಳಿತದಲ್ಲಿ ಅನಗತ್ಯ ರಾಜಕೀಯ ಹಸ್ತಕ್ಷೇಪ ಮಾಡಿದರೆ, ಸಂಸ್ಥೆಗಳ ಸ್ವಾಯತ್ತತೆ ಮಾತ್ರವಲ್ಲದೇ ರಾಜ್ಯದ ಆರ್ಥಿಕ ವ್ಯವಸ್ಥೆಯ ಮೇಲೆಯೂ ಪರಿಣಾಮ ಬೀರುವ ಸಾಧ್ಯತೆ ಇದೆ. ಸಹಕಾರಿ ಸಂಸ್ಥೆಗಳಲ್ಲಿ ಹಣಕಾಸಿನ ದುರುಪಯೋಗ ಅಥವಾ ಕಾನೂನು ಉಲ್ಲಂಘನೆ ನಡೆದರೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಆದರೆ ನಿಯಮಾನುಸಾರ ನಡೆಯುತ್ತಿರುವ ಸಂಸ್ಥೆಗಳ ಕಾರ್ಯನಿರ್ವಹಣೆಯಲ್ಲಿ ರಾಜಕೀಯ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದರು.
ಸಹಕಾರ ಕ್ಷೇತ್ರದಲ್ಲಿ ಪದವಿ, ಎಂ.ಎ. ಹಾಗೂ ಡಿಪ್ಲೊ ಮಾ ಸೇರಿದಂತೆ ವಿವಿಧ ಶಿಕ್ಷಣ ಪಡೆದಿರುವ ಯುವಜನರಿದ್ದಾರೆ. ಅಂತವರಿಗೆ ಸಹಕಾರಿ ಸಂಸ್ಥೆಗಳ ನೇಮಕಾತಿಯಲ್ಲಿ ಶೇ.3ರಷ್ಟು ಹೆಚ್ಚುವರಿ ಮೆರಿಟ್ ನೀಡುವ ವ್ಯವಸ್ಥೆ ಜಾರಿಗೆ ತರಬೇಕು. ಸಹಕಾರ ಕ್ಷೇತ್ರದ ಶಿಕ್ಷಣ ಪಡೆದ ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ವಿಶೇಷ ಆದ್ಯತೆ ನೀಡುವುದರಿಂದ ಸಹಕಾರಿ ಸಂಸ್ಥೆಗಳಿಗೆ ಕ್ಷೇತ್ರದ ಬಗ್ಗೆ ಪರಿಣತಿ ಹೊಂದಿರುವ ಮಾನವ ಸಂಪನ್ಮೂಲ ದೊರೆಯಲಿದೆ ಎಂದರು.
ಸಹಕಾರಿ ಮಹಾಮಂಡಳದಿಂದ ಈಗಾಗಲೇ ಸುಮಾರು 60ರಿಂದ 70 ಸಾವಿರ ಜನರಿಗೆ ಶಿಕ್ಷಣ ಮತ್ತು ತರಬೇತಿ ನೀಡಲಾಗಿದೆ. ರೈತರು, ವಿದ್ಯಾರ್ಥಿಗಳು ಸೇರಿದಂತೆ ವಿವಿಧ ವರ್ಗದ ಜನರಿಗೆ ಸಹಕಾರ ಕ್ಷೇತ್ರದ ಕುರಿತು ತರಬೇತಿ ನೀಡಲಾಗುತ್ತಿದೆ. ಕೇಂದ್ರ ಸರಕಾರದ ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೂ ತರಬೇತಿ ನೀಡುವ ಕಾರ್ಯ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಸಹಕಾರ ಮಹಾಮಂಡಳಕ್ಕೆ ಸೇರಿದ ಎಂಟು ತರಬೇತಿ ಕೇಂದ್ರಗಳಿದ್ದು, ಕಂಪ್ಯೂಟರ್ ತರಬೇತಿ ಸೇರಿದಂತೆ ವಿವಿಧ ಕೌಶಲ್ಯಾಧಾರಿತ ತರಬೇತಿಗಳನ್ನು ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ತರಬೇತಿ ವ್ಯವಸ್ಥೆಯನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶವಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತದ ಉಪಾಧ್ಯಕ್ಷ ಬಿ.ಕೆ.ಶಿವಕುಮಾರ್ ಮತ್ತಿತರರು ಹಾಜರಿದ್ದರು.






