ರಸ್ತೆ ಗುಂಡಿ ಕಾಮಗಾರಿಯಲ್ಲಿ ಬಹುಕೋಟಿ ಅಕ್ರಮ: ಸಚಿವರಿಗೆ 1,049 ಪುಟಗಳ ದಾಖಲೆ ಸಲ್ಲಿಸಿದ ಎನ್.ಆರ್.ರಮೇಶ್

ಬೆಂಗಳೂರು : ಮೂರು ವರ್ಷಗಳ ಅವಧಿಯಲ್ಲಿ ಬೆಂಗಳೂರಿನ ಪ್ರಮುಖ ರಸ್ತೆಗಳ ಅಭಿವೃದ್ಧಿ ಹಾಗೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಗಳಿಗೆ ಒಟ್ಟು 8,825.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದರೂ, ನಗರದ ರಸ್ತೆಗಳ ದುಸ್ಥಿತಿ ಮುಂದುವರಿದಿರುವ ಹಿನ್ನೆಲೆಯಲ್ಲಿ ಈ ಹಣದ ಬಳಕೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ 1049 ಪುಟಗಳ ದಾಖಲೆ ಸಮೇತ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರಿಗೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ದೂರು ಸಲ್ಲಿಸಿದ್ದಾರೆ.
ಮಂಗಳವಾರ ನಗರದಲ್ಲಿ ಸಚಿವ ಕೃಷ್ಣಭೈರೇಗೌಡ ಅವರನ್ನು ಭೇಟಿ ಮಾಡಿದ ಜೆಪಿ ಮುಖಂಡ ಎನ್.ಆರ್.ರಮೇಶ್, ಕಳೆದ ಮೂರು ವರ್ಷಗಳ ಅವಧಿಯಲ್ಲಿ ಪ್ರಮುಖ ರಸ್ತೆಗಳ ಅಭಿವೃದ್ಧಿಗೆ 8,230.52 ಕೋಟಿ ಹಾಗೂ ರಸ್ತೆ ಗುಂಡಿ ಗಳನ್ನು ಮುಚ್ಚಲು 594.58 ಕೋಟಿ ಸೇರಿದಂತೆ ಒಟ್ಟು 8,825.11 ಕೋಟಿ ವೆಚ್ಚಕ್ಕೆ ಅನುದಾನ ಬಿಡುಗಡೆ ಮಾಡ ಲಾಗಿದೆ. ಇಷ್ಟೊಂದು ದೊಡ್ಡ ಮೊತ್ತ ಖರ್ಚಾಗಿದ್ದರೆ ನಗರದ ರಸ್ತೆಗಳು ಕನಿಷ್ಠ ಹತ್ತು ವರ್ಷ ಬಾಳಿಕೆ ಬರುವಂತೆ ನಿರ್ಮಾಣವಾಗಬೇಕಿತ್ತು. ಆದರೆ ವಾಸ್ತವದಲ್ಲಿ ಹೊಸದಾಗಿ ಅಭಿವೃದ್ಧಿಪಡಿಸಿದ ರಸ್ತೆಗಳೂ ಕೆಲವೇ ತಿಂಗಳಲ್ಲಿ ಹಾಳಾಗುತ್ತಿವೆ.ಈ ಸಂಬಂಧ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕೋರಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎನ್.ಆರ್.ರಮೇಶ್, ಕಾಮಗಾರಿಗಳ ಟೆಂಡರ್ ಅನುಮೋದನೆಯಿಂದ ಹಿಡಿದು ಬಿಲ್ ಪಾವತಿವರೆಗಿನ ವಿವಿಧ ಹಂತಗಳಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಕಮಿಷನ್ ನೀಡುವ ಭ್ರಷ್ಟ ವ್ಯವಸ್ಥೆ ಇದೆ. ಇದರಿಂದ ಗುತ್ತಿಗೆದಾರರು ಕಡಿಮೆ ಗುಣಮಟ್ಟದ ಸಾಮಗ್ರಿಗಳನ್ನು ಬಳಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾಮಗಾರಿಗಳ ಗುಣಮಟ್ಟ ಕುಸಿದಿದೆ ಎಂದು ಆರೋಪಿಸಿದರು.




