ಕೇಂದ್ರದ ಕಾರ್ಮಿಕ, ರೈತ ವಿರೋಧಿ ನೀತಿಗಳ ರದ್ದತಿಗೆ ಆಗ್ರಹಿಸಿ ಮೇ 20ಕ್ಕೆ ಮುಷ್ಕರ

ಬೆಂಗಳೂರು : ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನಾಲ್ಕು ಕಾಯಿದೆಗಳ ಜಾರಿ ವಿರೋಧಿಸಿ, ರೈತ ವಿರೋಧಿ ನೀತಿಗಳನ್ನು ರದ್ದು ಮಾಡಲು ಆಗ್ರಹಿಸಿ ‘ಸಂಯುಕ್ತ ಕಿಸಾನ್ ಮೋರ್ಚಾ’ ಮತ್ತು ಜಾಯಿಂಟ್ ಕಮಿಟಿ ಆಫ್ ಟ್ರೇಡ್ ಯೂನಿಯನ್ ಕರೆ ಮೇರೆಗೆ ಮೇ 20ಕ್ಕೆ ರಾಜ್ಯಾದ್ಯಂತ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗಿದೆ.
ಶನಿವಾರ ನಗರದ ಗಾಂಧಿಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ಸಂಯೋಜಕರಾದ ಬಡಗಲಪುರ ನಾಗೇಂದ್ರ, ಕೆ.ವಿ.ಭಟ್, ನೂರ್ ಶ್ರೀಧರ್, ಟಿ.ಯಶವಂತ, ಕಾರ್ಮಿಕ ಸಂಘಟನೆ ನಾಯಕಿ ಎಸ್.ವರಲಕ್ಷ್ಮೀ, ಗ್ರಾಕೂಸ ಸಂಘಟನೆಯ ಪದಾಧಿಕಾರಿ ಗಾಯತ್ರಿ ಪಾಲ್ಗೊಂಡಿದ್ದರು.
ವರಲಕ್ಷ್ಮೀ ಮಾತನಾಡಿ, ‘ಕಾರ್ಮಿಕರಿಗೆ ಎಂಟು ಗಂಟೆ ಕೆಲಸದ ಅವಧಿ, ಖಾಯಂ ಕೆಲಸ, ಕೆಲಸಕ್ಕೆ ತಕ್ಕ ವೇತನ, ಸುರಕ್ಷತೆ, ಮುಷ್ಕರದ ಹಕ್ಕು, ಸಂಘ ಕಟ್ಟುವ ಹಕ್ಕು ಇನ್ನಿತರ ಹಕ್ಕುಗಳನ್ನು ಇಲ್ಲವಾಗಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸಲು ಕೇಂದ್ರದ ಕಾರ್ಪೊ ರೇಟ್ ಬಂಡವಾಳದ ಪರ ರೂಪಿಸಿರುವ ಕಾರ್ಮಿಕ ವಿರೋಧಿ ನಾಲ್ಕು ಸಂಹಿತೆಗಳನ್ನು ರದ್ದುಪಡಿಸಬೇಕು. ಬೆಲೆಗಳಿಗೆ ಅನುಗುಣವಾಗಿ ಎಲ್ಲ ಸಂಘಟಿತ, ಅಸಂಘಟಿತ, ಗುತ್ತಿಗೆ ಕಾರ್ಮಿಕರು ಮತ್ತು ಸ್ಕೀಂ ನೌಕರರಿಗೂ ರಾಷ್ಟ್ರವ್ಯಾಪಿ 26ಸಾವಿರ ರೂ. ಹಾಗೂ ರಾಜ್ಯವ್ಯಾಪಿ 36 ಸಾವಿರ ರೂ.ಕನಿಷ್ಟ ವೇತನ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.
ಗುತ್ತಿಗೆ, ಹೊರ ಗುತ್ತಿಗೆ ಹೆಸರಿನಲ್ಲಿ ಕಾರ್ಮಿಕರ ನೇಮಕ ನಿಲ್ಲಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿ ಮಾಡಬೇಕು. ಕಟ್ಟಡ ಕಾರ್ಮಿಕರು, ಗಿಗ್ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು ಇನ್ನಿತರೆ ಅಸಂಘಟಿತ ಕಾರ್ಮಿಕರಿಗೆ ಮಾಸಿಕ 9 ಸಾವಿರ ರೂ. ಪಿಂಚಣಿ ಹಾಗೂ ಸಾಮಾಜಿಕ ಭದ್ರತೆ ಖಾತ್ರಿಪಡಿಸಬೇಕು. ಇಎಸ್ಐ, ಪಿಎಫ್, ಬೋನಸ್ ಪಾವತಿಗಿರುವ ಎಲ್ಲ ವೇತನ ಮಿತಿಯನ್ನು ತೆಗೆಯಬೇಕು. ಗ್ರಾಚ್ಯೂಟಿ ಪರಿಹಾರ 90 ದಿನಕ್ಕೆ ಹೆಚ್ಚಿಸಬೇಕು ಎಂದು ವರಲಕ್ಷ್ಮೀ ಹೇಳಿದರು.
ಬಡಗಲಪುರ ನಾಗೇಂದ್ರ ಮಾತನಾಡಿ, ರಾಜ್ಯ ಸರಕಾರ ಕೊಟ್ಟ ಮಾತಿನಂತೆ ಬಿಜೆಪಿ ಸರಕಾರದ ಅವಧಿಯಲ್ಲಿ ಅನುಮೋದಿಸಲಾಗಿದ್ದ ಭೂ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಜಾನುವಾರು ತಿದ್ದುಪಡಿ ಕಾಯ್ದೆಗಳನ್ನು ಮತ್ತು ಕೃಷಿ ಉತ್ಪನ್ನಗಳ ಮಾರುಕಟ್ಟೆ ರಾಷ್ಟ್ರೀಯ ಚೌಕಟ್ಟು ನೀತಿಗಳನ್ನು ತಿರಸ್ಕರಿಸುವ ತೀರ್ಮಾನ ತೆಗೆದುಕೊಳ್ಳಬೇಕು. ಎಲ್ಲ ಕೃಷಿ ಉತ್ಪನ್ನಗಳಿಗೆ ಎಂಎಸ್ಪಿ ಸಿ2+50 ಅನುಪಾತದಲ್ಲಿ ಬೆಂಬಲ ಬೆಲೆ ಖಾತರಿಗೆ ಕಾನೂನು ರೂಪಿಸಬೇಕು. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಮತ್ತು ವಿದ್ಯುತ್ ಮೇಲಿನ ಸಬ್ಸಿಡಿ ಹೆಚ್ಚಿಸಬೇಕು ಎಂದರು.
ಸಾಲ ಮನ್ನಾ ಮತ್ತು ಬೆಳೆ ವಿಮೆ ಯೋಜನೆಗಳನ್ನು ಜಾರಿಗೆ ತರಬೇಕು. ಸಂಯುಕ್ತ ಕಿಸಾನ್ ಮೋರ್ಚ್ಗೆ ನೀಡಿದ ಲಿಖಿತ ಭರವಸೆಯನ್ನು ಕೇಂದ್ರ ಸರಕಾರ ಜಾರಿಗೊಳಿಸಬೇಕು. ವಿದ್ಯುತ್ ತಿದ್ದುಪಡಿ ಮಸೂದೆ ವಾಪಸ್ಸು ಪಡೆಯಬೇಕು. ವಿದ್ಯುತ್ ಖಾಸಗೀಕರಣ ಮತ್ತು ಸ್ಮಾರ್ಟ್ ಮೀಟರ್ ಅಳವಡಿಕೆ ನಿಲ್ಲಿಸಬೇಕು. ಬಗರ್ ಹುಕುಂ ರೈತರ ದೀರ್ಘ ಕಾಲಿನ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಲು ಕ್ರಮಕೈಗೊಳ್ಳಬೇಕು. ಈ ಜಟಿಲ ಸಮಸ್ಯೆಯನ್ನು ಬಗೆಹರಿಸಲು ಉನ್ನತ ಮಟ್ಟದ ಸಭೆ ಕರೆಯಬೇಕು ಮತ್ತು ತಜ್ಞರ ಸಮಿತಿಯನ್ನು ರಚಿಸಬೇಕು ಎಂದು ಬಡಗಲಪುರ ನಾಗೇಂದ್ರ ಒತ್ತಾಯಿಸಿದರು.
ಕೆ.ವಿ.ಭಟ್ ಮಾತನಾಡಿ, ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಆಹಾರ, ಔಷಧಿಗಳು, ಕೃಷಿ ಸಾಮಾಗ್ರಿ ಮುಂತಾದ ಅಗತ್ಯ ವಸ್ತುಗಳ ಮೇಲಿನ ಜಿಎಸ್ಟಿ ತೆಗೆಯಬೇಕು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮೇಲಿನ ಕೇಂದ್ರೀಯ ಅಬಕಾರಿ ಸುಂಕ ಇಳಿಸಬೇಕು. ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಾರ್ವತ್ರಿಕರಣಗೊಳಿಸಿ ಆಹಾರ ಭದ್ರತೆಯನ್ನು ಖಾತ್ರಿಪಡಿಸಬೇಕು. ಸಾರ್ವಜನಿಕ ಉದ್ದಿಮೆ, ನಿಗಮ ಮತ್ತು ಇಲಾಖೆಗಳನ್ನು ಖಾಸಗೀಕರಿಸುವ ‘ರಾಷ್ಟ್ರೀಯ ನಗದೀಕರಣ ಪೈಪ್ಲೈನ್ ಯೋಜನೆ'ಯನ್ನು ರದ್ದುಪಡಿಸಬೇಕು ಎಂದು ಹೇಳಿದರು.
ನೂರ್ ಶ್ರೀಧರ್ ಮಾತನಾಡಿ, ಉದ್ಯೋಗದ ಹಕ್ಕನ್ನು ಮೂಲಭೂತ ಹಕ್ಕಾಗಿಸಬೇಕು. ಖಾಲಿಯಿರುವ ಹುದ್ದೆಗಳ ಭರ್ತಿ ಮಾಡಬೇಕು. ಉದ್ಯೋಗ ಸೃಷ್ಟಿ ಮಾಡಬೇಕು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಾರ್ಷಿಕ 200 ದಿನ ಕೆಲಸ, ದಿನಕ್ಕೆ 600 ರೂ. ಕೂಲಿ ನಿಗದಿಪಡಿಸಿ, ನಗರ ಪ್ರದೇಶಕ್ಕೂ ವಿಸ್ತರಿಸಬೇಕು. ಶಿಕ್ಷಣದ ಹಕ್ಕು, ಆರೋಗ್ಯದ ಹಕ್ಕು, ನೀರು ಮತ್ತು ನೈರ್ಮಲ್ಯದ ಹಕ್ಕು ಹಾಗೂ ಎಲ್ಲರಿಗೂ ವಸತಿ ಖಾತ್ರಿಪಡಿಸಬೇಕು. ನೂತನ ಶಿಕ್ಷಣ ನೀತಿ-2020ನ್ನು ರದ್ದುಪಡಿಸಬೇಕು. ಸಂವಿಧಾನದ ಆಶಯಗಳ ಮೇಲಿನ ದಾಳಿ ನಿಲ್ಲಿಸಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯ, ಧಾರ್ಮಿಕ ಸ್ವಾತಂತ್ರ್ಯ, ವೈವಿಧ್ಯಮಯ ಸಂಸ್ಕೃತಿಗಳು, ಭಾಷೆಗಳು, ಸಮಾನತೆ ಮತ್ತು ಒಕ್ಕೂಟ ತತ್ವವನ್ನು ರಕ್ಷಿಸಬೇಕು ಎಂದರು.