ಚಿನ್ನಯ್ಯನಪಾಳ್ಯ ಸ್ಫೋಟ ಪ್ರಕರಣ: ಮೃತರ ಸಂಖ್ಯೆ 3ಕ್ಕೆ ಏರಿಕೆ

ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು, ಆ.19: ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಯ್ಯನಪಾಳ್ಯ ಕಾಲನಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 11 ಮಂದಿಯ ಪೈಕಿ ಮತ್ತಿಬ್ಬರು ಮೃತಪಟ್ಟಿದ್ದು, ಈ ಮೂಲಕ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ಮೃತರನ್ನು ತಮಿಳುನಾಡು ಮೂಲದ ಮನೆಗೆಲಸದ ಕಸ್ತೂರಮ್ಮ(30) ಮತ್ತು ಅವರ ಮಗಳು ಖಾಯಲ್ (8) ಎಂದು ಗುರುತಿಸಲಾಗಿದೆ. ಶೇ.35ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಬಾಲಕಿ ಖಾಯಲ್, ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಶೇ.40ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಬಾಲಕಿಯ ತಾಯಿ ಕಸ್ತೂರಮ್ಮ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಗಾಯಗೊಂಡ ಇತರರಲ್ಲಿ, ಸರಸಮ್ಮ ಎಂಬುವವರಿಗೆ ಇನ್ನೂ ಚಿಕಿತ್ಸೆ ಮುಂದುವರೆದಿದ್ದು, ಉಳಿದವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಆಡುಗೋಡಿ ಠಾಣಾ ಪೊಲೀಸರು ತನಿಖೆ ಮುಂದುವರೆಸಿರುವುದಾಗಿ ತಿಳಿಸಿದ್ದಾರೆ.





