ರಾಜ್ಯದಲ್ಲಿ ಶೇ.10ರಷ್ಟು ಸೈಬರ್ ಅಪರಾಧ ಪ್ರಕರಣ ದಾಖಲು: ಡಿಜಿಪಿ ಅಲೋಕ್ ಮೋಹನ್

ಬೆಂಗಳೂರು: ರಾಜ್ಯದಲ್ಲಿ ದಾಖಲಾದ ಎಲ್ಲ ಪ್ರಕರಣಗಳಲ್ಲಿ ಶೇ.10ರಷ್ಟು ಸೈಬರ್ ಅಪರಾಧ ಪ್ರಕರಣಗಳಾಗಿದ್ದು, ಬೆಂಗಳೂರಿನಲ್ಲಿ ಅದು ಶೇ.25 ಕ್ಕೆ ಏರಿಕೆಯಾಗಿದೆ ಎಂದು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ.
ನಗರದಲ್ಲಿ ಬೆಂಗಳೂರು ನಗರ ಪೊಲೀಸ್ನ ಹಿರಿಯ ಅಧಿಕಾರಿಗಳೊಂದಿಗೆ ಗುರುವಾರ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ವಾಸ್ತವವಾಗಿ, ಸೈಬರ್ ಅಪರಾಧಗಳ ಸಂಖ್ಯೆಯು ದೇಶಾದ್ಯಂತ ಮತ್ತು ಜಾಗತಿಕವಾಗಿ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ, ಹೆಚ್ಚುವರಿ ಡಿಸಿಪಿ ಮತ್ತು ಇತರ ಉನ್ನತ ಮಟ್ಟದ ಮೇಲ್ವಿಚಾರಣಾ ಹುದ್ದೆಗಳಿಗೆ ಹೊಸ ಹುದ್ದೆಗಳನ್ನು ಸೃಷ್ಟಿಸಲಾಗುವುದು ಎಂದರು.
ಮುಂದಿನ ಆರು ತಿಂಗಳಲ್ಲಿ ರಾಜ್ಯಾದ್ಯಂತ ಸೈಬರ್ ಅಪರಾಧ ಪ್ರಕರಣಗಳ ತನಿಖೆಗೆ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು. ಸೈಬರ್ ಅಪರಾಧಗಳ ಬಗ್ಗೆ ಇನ್ನು ಮುಂದೆ ಹೆಚ್ಚಿನ ಗಮನ ನೀಡಲಾಗುವುದು ಎಂದು ಅವರು ತಿಳಿಸಿದರು.
ಇನ್ಸ್ಪೆಕ್ಟರ್ ಗಳು ಮತ್ತು ಸಬ್ಇನ್ಸ್ಪೆಕ್ಟರ್ ಗಳಿಗೆ ತರಬೇತಿ ಕಾರ್ಯಕ್ರಮಗಳನ್ನು ನಿಯಮಿತವಾಗಿ ನಡೆಸಲಾಗುವುದು. ಜತೆಗೆ ಕರ್ನಾಟಕವನ್ನು ಡ್ರಗ್ಸ್ ಮುಕ್ತ ಮಾಡಲು ಪ್ರಯತ್ನಿಸಲಾಗುತ್ತಿದೆ. 2023ರಲ್ಲಿ ಎನ್ಡಿಪಿಎಸ್ ಅಡಿಯಲ್ಲಿ ಗರಿಷ್ಠ ಸಂಖ್ಯೆಯ ಪ್ರಕರಣಗಳು ದಾಖಲಾಗಿದ್ದವು. 125ಕೋಟಿ ರೂ.ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದ್ದು, 150 ವಿದೇಶಿ ಪ್ರಜೆಗಳು ಸೇರಿದಂತೆ 7ಸಾವಿರಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಅಲೋಕ್ ಮೋಹನ್ ಹೇಳಿದರು.







