1,100 ಮೆಟ್ರಿಕ್ ಟನ್ ʼನಂದಿನಿ ಉತ್ಪನ್ನʼ ಮಾರಾಟ : ಸಚಿವ ಕೆ.ವೆಂಕಟೇಶ್

ಸಾಂದರ್ಭಿಕ ಚಿತ್ರ | PC : kmfnandini
ಬೆಂಗಳೂರು, ಅ. 21: ಸರಣಿ ಹಬ್ಬಗಳ ಆಚರಣೆ ಹಿನ್ನೆಲೆ ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (ಕೆಎಂಎಫ್) ಸಂಸ್ಥೆಯು ಗುರಿ ಮೀರಿ 1,100 ಮೆಟ್ರಿಕ್ ಟನ್ ನಂದಿನಿ ಸಿಹಿ, ತಿಂಡಿ ಉತ್ಪನ್ನಗಳ ಮಾರಾಟ ಮಾಡಲಾಗಿದ್ದು, ಇತಿಹಾಸದಲ್ಲಿಯೇ ಇದು ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ವರ್ಷ ದಸರಾ ಮತ್ತು ದೀಪಾವಳಿ ಹಬ್ಬದ ಅವಧಿಯಲ್ಲಿ ಒಟ್ಟು 725 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿ 33.48 ಕೋಟಿ ರೂ. ವಹಿವಾಟು ದಾಖಲಿಸಲಾಗಿತ್ತು. ಈ ಬಾರಿ 2025ರ ಹಬ್ಬದ ಅವಧಿಗೆ 1,100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿದ್ದು, ಒಟ್ಟಾರೆ 46 ಕೋಟಿ ರೂಪಾಯಿಗಳ ದಾಖಲೆಯ ವಹಿವಾಟು ಸಾಧಿಸುವ ಮೂಲಕ ಒಂದು ಮಹತ್ವದ ಮೈಲಿಗಲ್ಲನ್ನು ನಿರ್ಮಿಸಲಾಗಿದೆ ಎಂದರು.
ಸುಮಾರು ಎರಡು ತಿಂಗಳುಗಳ ಮುಂಚಿತವಾಗಿ ಎಲ್ಲ ಸದಸ್ಯ ಹಾಲು ಒಕ್ಕೂಟಗಳ ಸಹಕಾರದೊಂದಿಗೆ ನಿಖರ ಯೋಜನೆ ರೂಪಿಸಿ 1,000 ಮೆಟ್ರಿಕ್ ಟನ್ ಮಾರಾಟ ಗುರಿ ನಿಗಿದಪಡಿಸಲಾಗಿತ್ತು. ಆದರೆ, ಈ ಗುರಿಯನ್ನು ಮೀರಿ ಈ ವರ್ಷ ಕೆಎಂಎಫ್ ಮತ್ತು ಸದಸ್ಯ ಹಾಲು ಒಕ್ಕೂಟಗಳು ಶೇ.38ರಷ್ಟು ವಹಿವಾಟು ಪ್ರಗತಿ ಸಾಧಿಸಿದ್ದು, ಇದು ಕೆಎಂಎಫ್ ಇತಿಹಾಸದಲ್ಲಿಯೇ ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಅವರು ತಿಳಿಸಿದರು.
ಈ ಸಾಧನೆ ‘ನಂದಿನಿ’ ಗುಣಮಟ್ಟ ಶುದ್ಧತೆ ಮತ್ತು ಗ್ರಾಹಕರ ವಿಶ್ವಾಸದ ಪ್ರತಿಫಲವಾಗಿದ್ದು, ರಾಜ್ಯದ ಹಾಲು ಉತ್ಪಾದಕರ ಶ್ರಮ ಮತ್ತು ಸಹಕಾರಿ ಬಲದ ದೃಢತೆಗೂ ಸಾಕ್ಷಿಯಾಗಿದೆ. ಜತೆಗೆ, ಈ ಹಬ್ಬದ ಅವಧಿಯಲ್ಲಿ ನಂದಿನಿಯ 40ಕ್ಕೂ ಹೆಚ್ಚು ಸಿಹಿ ಉತ್ಪನ್ನ ಮಾದರಿಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಕೆಎಂಎಫ್ ಮುಂಚಿತ ಸಿದ್ಧತೆ ಕೈಗೊಂಡಿತ್ತು ಎಂದು ಅವರು ತಿಳಿಸಿದರು.
ಕೆಎಂಎಫ್ ಸಂಸ್ಥೆಯು ಐದು ದಶಕಗಳಿಂದ ಹೈನುಗಾರಿಕೆ ಮತ್ತು ಸಹಕಾರ ಕ್ಷೇತ್ರದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದು, ಹಾಲು ಉತ್ಪಾದಕರ ರೈತರ ಹಿತದೃಷ್ಟಿಯಿಂದ ರಾಜ್ಯದ ಹೈನು ಸಹಕಾರಿ ಚಳವಳಿಯನ್ನು ಬಲಪಡಿಸುವಲ್ಲಿ ಮುಂಚೂಣಿಯಲ್ಲಿದೆ. ನಿತ್ಯ ರಾಜ್ಯದ ವಿವಿಧ ಹೈನುಗಾರರಿಂದ ಸರಾಸರಿ 1 ಕೋಟಿ ಲೀಟರ್ ಹಾಲು ಸಂಗ್ರಹಿಸಲಾಗುತ್ತಿದ್ದು, ಅದರಲ್ಲಿ ಸುಮಾರು 65 ಲಕ್ಷ ಲೀಟರ್ ಹಾಲು, ಮೊಸರು ಹಾಗೂ ಯುಎಚ್ ಹಾಲು ಉತ್ಪನ್ನಗಳನ್ನು ರಾಜ್ಯ ಮತ್ತು ಹೊರರಾಜ್ಯ ಮಾರುಕಟ್ಟೆಗಳಲ್ಲಿ ಗ್ರಾಹಕರಿಗೆ ತಲುಪಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
‘ನಂದಿನಿ’ ಅಡಿಯಲ್ಲಿ ಹಾಲಿನೊಂದಿಗೆ ತುಪ್ಪ ಬೆಣ್ಣೆ, ಪನೀರ್, ಸಿಹಿತಿನಿಸುಗಳು, ಹಾಲಿನ ಪುಡಿ, ಪಾನೀಯಗಳು ಸೇರಿದಂತೆ 175ಕ್ಕೂ ಅಧಿಕ ಬಗೆಯ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ರಾಜ್ಯ ನೆರೆರಾಜ್ಯಗಳು ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ, ಗೋವಾ, ಕೇರಳ ಹಾಗೂ ಹೊಸದಿಲ್ಲಿ, ಅಸ್ಸಾಂ ಮತ್ತು ಕೆಲ ಹೊರದೇಶಗಳ ಮಾರುಕಟ್ಟೆಗಳಲ್ಲಿ ಯಶಸ್ವಿಯಾಗಿ ಮಾರಾಟ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ಮಾತನಾಡಿ, ‘ನಂದಿನಿ ಉತ್ಪನ್ನಗಳಲ್ಲಿ ಯಾವುದೇ ರೀತಿಯ ಕಲಬೆರಕೆ ಇಲ್ಲ. ಇಡೀ ರಾಜ್ಯದಲ್ಲಿ 16 ನಂದಿನಿ ಘಟಕಗಳಿದ್ದು, 700 ಉತ್ಪನ್ನಗಳನ್ನು ನಾವು ಪರಿಶೀಲನೆ ಮಾಡಿಸಿದ್ದೇವೆ. ಆದರೆ, ಎಲ್ಲಿಯೂ ಕಲಬೆರೆಕೆ ಕಂಡುಬಂದಿಲ್ಲ’ ಎಂದು ಮಾಹಿತಿ ನೀಡಿದರು.







