ರಾಜ್ಯದಲ್ಲಿ 13 ಕಂಪೆನಿಗಳಿಂದ 27 ಸಾವಿರ ಕೋಟಿ ರೂ. ಹೂಡಿಕೆಗೆ ಅಸ್ತು: ಎಂ.ಬಿ.ಪಾಟೀಲ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂ. ಬಂಡವಾಳ ಹೂಡಿಕೆಗೆ ಒಪ್ಪಿಗೆ ಕೊಡಲಾಗಿದೆ. ಇದರಲ್ಲಿ 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವಗಳು ಸೇರಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಸಭೆಯ ಬಳಿಕ ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದ ಸಚಿವರು, ಒಟ್ಟು ಈ 13 ಯೋಜನೆಗಳಿಂದ 8,704 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು.
11 ಹೊಸ ಹೂಡಿಕೆ ಯೋಜನೆಗಳ ಪೈಕಿ ತೇಜಸ್ ನೆಟ್ವರ್ಕ್ಸ್ 542.19 ಕೋಟಿ ರೂ., ವಾಯು ಅಸೆಟ್ಸ್ 1,251 ಕೋಟಿ ರೂ., ಜಿಂದಾಲ್ ಸ್ಟೀಲ್ಸ್ 1,300.57 ಕೋಟಿ ರೂ., ಜಿಂದಾಲ್ ಇಲೆಕ್ಟ್ರಿಕಲ್ ಸ್ಟೀಲ್ 7,102 ಕೋಟಿ ರೂ,, ಗ್ರಾಸಿಂ ಇಂಡಸ್ಟ್ರೀಸ್ 1,386 ಕೋಟಿ ರೂ., ಎಸ್ಎಫ್ಎಕ್ಸ್ ಇಂಡಿಯಾ 9,298 ಕೋಟಿ ರೂ., ಸ್ನೀಡರ್ ಇಲೆಕ್ಟ್ರಿಕ್ ಐಟಿ ಬಿಝಿನೆಸ್, ಎಚ್ಎಸ್ಎಸ್ ಟೆಕ್ಸ್ಟೈಲ್ಸ್ 740 ಕೋಟಿ ರೂ., ಸ್ನೈಡರ್ ಇಲೆಕ್ಟ್ರಿಕ್ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ 1,520.75 ಕೋಟಿ ರೂ., ಕ್ಯೂಪಿಐಎಐ ಇಂಡಿಯಾ 1,136 ಕೋಟಿ ರೂ., ಟೊಯೋಟಾ ಇಂಡಸ್ಟ್ರೀಸ್ ಇಂಜಿನ್ ಇಂಡಿಯಾ ಲಿಮಿಟೆಡ್ 1,330 ಕೋಟಿ ರೂ. ಮತ್ತು ರಿಲಯನ್ಸ್ ಕನ್ಸೂಮರ್ ಪ್ರಾಡಕ್ಟ್ಸ್ 1,622 ಕೋಟಿ ರೂ. ಹೂಡಿಕೆ ಮಾಡಲಿವೆ. ಮಿಕ್ಕಂತೆ, ಎಂಬೆಸಿ ಇಂಡಸ್ಟ್ರಿಯಲ್ ಪಾರ್ಕ್ ಮತ್ತು ಬಾಲಾಜಿ ವೇಫರ್ಸ್ ಕಂಪೆನಿಗಳು ಕ್ರಮವಾಗಿ 80 ಮತ್ತು 298.75 ಕೋಟಿ ರೂ. ಹೆಚ್ಚುವರಿ ಬಂಡವಾಳ ತೊಡಗಿಸಲಿವೆ ಎಂದು ಸಚಿವರು ಹೇಳಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಇಂಧನ ಸಚಿವ ಕೆ.ಜೆ. ಜಾರ್ಜ್, ಕಾನೂನು ಸಚಿವ ಎಚ್.ಕೆ.ಪಾಟೀಲ್, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್, ಕಾರ್ಮಿಕ ಸಚಿವ ಸಂತೋಷ್ ಲಾಡ್ ಉಪಸ್ಥಿತರಿದ್ದರು.







