ಐದು ಹೊಸ ಕಮಿಷನರೇಟ್ಗಳಾಗಿ ವಿಭಜನೆಯಾಗಲಿರುವ ಬೆಂಗಳೂರು ನಗರ ಕಮಿಷನರೇಟ್; ಸರಕಾರಕ್ಕೆ ಪ್ರಸ್ತಾವ ಸಲ್ಲಿಕೆ

ಬೆಂಗಳೂರು : ಬೆಂಗಳೂರು ನಗರ ಕಮಿಷನರೇಟ್ ಅನ್ನು 5 ಹೊಸ ಕಮಿಷನರೇಟ್ ವಲಯಗಳಾಗಿ ವಿಭಜಿಸಲು ಮತ್ತು ಈ ವಲಯಗಳಲ್ಲಿ 6,633 ಹೊಸ ಹುದ್ದೆಗಳನ್ನು ಸೃಷ್ಟಿಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದಾರೆ. ವಿಭಜನೆಗೆ 7.5 ಸಾವಿರ ಕೋಟಿ ರೂ ಅಂದಾಜು ವೆಚ್ಚವಾಗಲಿದೆ.
ಪ್ರಸ್ತುತ ಇರುವ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮುಖ್ಯ ಆಯುಕ್ತರಾಗಲಿದ್ದು, ಉಳಿದಂತೆ ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ ಹಾಗೂ ದಕ್ಷಿಣ ಎಂಬ ಐದು ಕಮಿಷನರೇಟ್ ಸೃಷ್ಟಿಯಾಗಲಿವೆ. ಈ ಬದಲಾವಣೆಗೆ ಸುಮಾರು 7,648 ಕೋಟಿ ರೂ. ವೆಚ್ಚವಾಗಲಿದೆ ಎಂದು ಪ್ರಸ್ತಾವದಲ್ಲಿ ಉಲ್ಲೇಖಿಸಿದ್ದಾರೆ.
ಕೇಂದ್ರ ಕಮಿಷನರೇಟ್ ವ್ಯಾಪ್ತಿಗೆ ವಿಧಾನಸೌಧ ಮತ್ತು ವಿಕಾಸಸೌಧ, ಲೋಕಭವನ, ಹೈಕೋರ್ಟ್, ನ್ಯಾಯಾಂಗ ಸಮುಚ್ಚಯಗಳು, ಚಿನ್ನಸ್ವಾಮಿ ಹಾಗೂ ಫ್ರೀಡಂ ಪಾರ್ಕ್, ಬೈಯಪ್ಪನಹಳ್ಳಿ ಮೆಟ್ರೋ ಡಿಪೋ, ಕೆಎಸ್ಆರ್ಟಿಸಿ ರೈಲ್ವೆ ನಿಲ್ದಾಣ, ವಲಯ ಕಚೇರಿ ಮತ್ತು ಮೆಜೆಸ್ಟಿಕ್ ಬಸ್ ನಿಲ್ದಾಣ ಸೇರಿ ಇತರೆ ಸ್ಥಳಗಳು ಬರಲಿವೆ.
ಉತ್ತರ ವಿಭಾಗದ ಕಮಿಷನರೇಟ್ನಲ್ಲಿ ಹಾಲಿ ಉತ್ತರ ವಿಭಾಗ, ಈಶಾನ್ಯ ವಿಭಾಗಗಳ ಜತೆ ಹೊಸದಾಗಿ ಯಶವಂತಪುರ ರಚನೆಯಾಗಲಿದೆ. ಅದೇ ರೀತಿ ಅಮೃತಹಳ್ಳಿ ಉಪ ವಿಭಾಗ ನೂತನವಾಗಿ ಸ್ಥಾಪನೆಯಾಗಲಿದೆ. ಯಲಹಂಕ ಹಾಗೂ ಕೆ.ಜಿ.ಹಳ್ಳಿ ಉಪ ವಿಭಾಗ ಸಹ ಉತ್ತರಕ್ಕೆ ಸೇರ್ಪಡೆಯಾಗಲಿವೆ.
ಪೂರ್ವ ಕಮಿಷನರೇಟ್ನಲ್ಲಿ ವೈಟ್ಫೀಲ್ಡ್ ಹಾಗೂ ಪೂರ್ವ ವಿಭಾಗಗಳಲ್ಲಿ ಒಂದು ಸಂಚಾರ ಡಿಸಿಪಿ ವಿಭಾಗ ಹಾಗೂ ಸಶಸ್ತ್ರ ಮೀಸಲು ಪಡೆಯ ವಿಭಾಗದ ಡಿಸಿಪಿಗಳು ಇರಲಿದ್ದಾರೆ. ಈ ವಿಭಾಗಕ್ಕೆ ಹೊಸದಾಗಿ ಪೊಲೀಸ್ ಠಾಣೆಗಳು ಸಹ ರಚನೆಯಾಗಲಿವೆ.
ದಕ್ಷಿಣ ಕಮಿಷನರೇಟ್ನಲ್ಲಿ ದಕ್ಷಿಣ, ಆಗ್ನೇಯ, ಇಲೆಕ್ಟ್ರಾನಿಕ್ ಸಿಟಿ, ದಕ್ಷಿಣ ಸಂಚಾರ ಹಾಗೂ ಸಿಎಆರ್ಡಿಸಿಪಿ ವಿಭಾಗಗಳು ಸೇರಲಿವೆ. ಹೊಸದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ಉಪವಿಭಾಗ, ಠಾಣೆಗಳಾದ ಸರ್ಜಾಪುರ, ಸೂರ್ಯನಗರ, ಅತ್ತಿಬೆಲೆ, ಬನ್ನೇರುಘಟ್ಟ, ಆನೇಕಲ್, ಜಿಗಣಿ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ ಕಗ್ಗಲಿಪುರ ಠಾಣೆಗಳು ಸೇರ್ಪಡೆಯಾಗಲಿವೆ.
ಪಶ್ಚಿಮ ವಿಭಾಗದಲ್ಲಿ ತಾವರೆಕೆರೆ, ನೂತನವಾಗಿ ಆಂಧ್ರಹಳ್ಳಿ, ಕಡಬಗೆರೆ ಠಾಣೆಗಳು ರಚನೆಯಾಗಲಿವೆ. ಸಿಸಿಬಿ ಯಾವುದೇ ವಿಘಟನೆ ಇಲ್ಲದೆ ಯಥಾಸ್ಥಿತಿಯಲ್ಲಿ ಮುಂದುವರಿಯಲಿದ್ದು ಮುಖ್ಯ ಆಯುಕ್ತರ ಅಧೀನದಲ್ಲಿ ಸಿಸಿಬಿ ಕಾರ್ಯನಿರ್ವಹಿಸಲಿದೆ. ಅದೇ ರೀತಿ ಸಂಚಾರ ವಿಭಾಗವು ಸಹ ಮುಖ್ಯ ಆಯುಕ್ತರ ಅಧೀನದಲ್ಲೇ ಕಾರ್ಯನಿರ್ವಹಿಸಲಿದೆ ಎಂದು ಪ್ರಸ್ತಾವದಲ್ಲಿ ಉಲ್ಲೇಖವಾಗಿದೆ.






