ಬೆಂಗಳೂರು | ಬಾಂಗ್ಲಾದೇಶ ಮಹಿಳೆ ಮೇಲೆ ಅತ್ಯಾಚಾರಗೈದು ಹತ್ಯೆ

ಸಾಂದರ್ಭಿಕ ಚಿತ್ರ
ಬೆಂಗಳೂರು : ಬಾಂಗ್ಲಾದೇಶ ಮೂಲದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವ ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ರಾಮಮೂರ್ತಿ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇಲ್ಲಿನ ಕಲ್ಕೆರೆ ಲೇಕ್ ಬಳಿ ನಿರ್ಜನ ಪ್ರದೇಶದಲ್ಲಿ ಬಾಂಗ್ಲಾದೇಶ ಮೂಲದ 28 ವರ್ಷದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿರುವ ಸ್ಥಿತಿಯಲ್ಲಿರುವ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಆರು ವರ್ಷಗಳಿಂದಲೂ ಮೂವರು ಮಕ್ಕಳೊಂದಿಗೆ ಮೃತ ಮಹಿಳೆ ವಾಸವಿದ್ದರು. ನಗರದ ಖಾಸಗಿ ಅಪಾರ್ಟ್ಮೆಂಟ್ವೊಂದರಲ್ಲಿ ಮಹಿಳೆ ಮನೆಗೆಲಸ ಮಾಡಿಕೊಂಡಿದ್ದಳು. ಗುರುವಾರ ಕೆಲಸ ಮುಗಿಸಿ ಅಪಾರ್ಟ್ಮೆಂಟ್ನಿಂದ ತೆರಳಿದ್ದ ಮಹಿಳೆ, ಮನೆಗೆ ಮರಳಿರಲಿಲ್ಲ. ಬೆಳಗ್ಗೆ ಕಲ್ಕೆರೆ ಸಮೀಪದ ನಿರ್ಜನ ಪ್ರದೇಶದಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ.
ಪ್ರಾಥಮಿಕ ವಿಚಾರಣೆಯಲ್ಲಿ ಈಕೆಯ ಪತಿ ಪಾಸ್ ಪೋರ್ಟ್ ಮೂಲಕವೇ ಭಾರತಕ್ಕೆ ಬಂದಿದ್ದಾರೆ. ಆದರೆ ಈ ಮಹಿಳೆಯು ಪಾಸ್ ಪೋರ್ಟ್ ಇಲ್ಲದೆ, ಅಕ್ರಮವಾಗಿ ಬಂದಿರುವುದು ಗೊತ್ತಾಗಿದೆ. ಪತಿ ನೀಡಿರುವ ದೂರಿನ ಅನ್ವಯ ಲೈಂಗಿಕ ದೌರ್ಜನ್ಯ ಹಾಗೂ ಹತ್ಯೆಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಪೂರ್ವ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದ್ದಾರೆ.







