ಬೆಂಗಳೂರು | ಅಧಿಕ ಬಡ್ಡಿ ವಸೂಲಿ ಆರೋಪ: ದಂಪತಿ ವಿರುದ್ಧ ಎಫ್ಐಆರ್

ಬೆಂಗಳೂರು : 1.60 ಲಕ್ಷ ರೂ. ಸಾಲಕ್ಕೆ ಬಡ್ಡಿ ರೂಪದಲ್ಲಿ 3.80 ಲಕ್ಷ ರೂ. ಪಾವತಿಸಿದ್ದರೂ ಸಹ ಮತ್ತೆ ಬಡ್ಡಿ ನೀಡುವಂತೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ದಂಪತಿ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋ-ಆಪರೇಟೀವ್ ಡೆಪ್ಯೂಟಿ ರಿಜಿಸ್ಟ್ರಾರ್ ಗಂಗಾಧರ್ ಎಂಬವರು ನೀಡಿದ ದೂರಿನ ಮೇರೆಗೆ, ಶಶೀಂದ್ರಾ ಮತ್ತು ಅಶೋಕ್ ದಂಪತಿ ವಿರುದ್ಧ ರಾಜ್ಯ ಅಕ್ರಮ ಹಣ ವರ್ಗಾವಣೆ ಕಾಯ್ದೆ ಮತ್ತು ಅಧಿಕ ಬಡ್ಡಿ ವಸೂಲಿ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಜಯನಗರ ಸಿದ್ಧಾಪುರ ಕೆ.ಎಂ.ಕಾಲೊನಿ ನಿವಾಸಿ ಸಮ್ರೀನ್ ತಾಜ್ ಅವರು ತಮ್ಮ ಸಹೋದರಿಯ ಮದುವೆ ಸಲುವಾಗಿ ಶಶೀಂದ್ರಾ ಎಂಬ ಮಹಿಳೆಯಿಂದ 2021ರ ಜುಲೈನಲ್ಲಿ ಶೇ.5ರಷ್ಟು ಮಾಸಿಕ ಬಡ್ಡಿಗೆ 1.60 ಲಕ್ಷ ರೂ., ಸಾಲ ಪಡೆದಿದ್ದರು. ಸಾಲ ಪಡೆಯುವಾಗ ಸಮ್ರೀನ್ ಒಂದು ಖಾಲಿ ಚೆಕ್ಅನ್ನು ಶಶೀಂದ್ರಾಗೆ ನೀಡಿದ್ದಾರೆ. ಬಳಿಕ ಪ್ರತಿ ತಿಂಗಳು 8 ಸಾವಿರ ರೂ.ನಂತೆ ಒಂದೂವರೆ ವರ್ಷಗಳ ಕಾಲ ಸುಮಾರು 1.44 ಲಕ್ಷ ರೂ. ಹಣವನ್ನು ಶಶೀಂದ್ರಾಗೆ ನೀಡಿದ್ದಾರೆ ಎಂದು ಪೊಲೀಸರಿಗೆ ಕೊಟ್ಟ ದೂರಿನಲ್ಲಿ ತಿಳಿಸಲಾಗಿದೆ.
ಬಳಿಕ ಸಮ್ರೀನ್ಗೆ ಪ್ರತಿ ತಿಂಗಳು ಸರಿಯಾಗಿ ಬಡ್ಡಿ ಕಟ್ಟಲು ಸಾಧ್ಯವಾಗದೆ, ತಡವಾಗಿ ಬಡ್ಡಿ ಕಟ್ಟಿದ್ದಾರೆ. ಬಡ್ಡಿ ಕಟ್ಟುವುದು ವಿಳಂಬವಾದಾಗ ಶಶೀಂದ್ರಾ, ಸಮ್ರೀನ್ಗೆ ಕರೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ದೂರಲಾಗಿದೆ. ಬಳಿಕ ಸಮ್ರೀನ್ ಅವರು ಎರಡು-ಮೂರು ಬಾರಿ ಶಶೀಂದ್ರಾ ಅವರ ಮನೆ ಬಳಿ ಹೋಗಿ ಬಡ್ಡಿ ಕಟ್ಟಲು ಆಗುತ್ತಿಲ್ಲ. ಅಸಲು ಹಣವನ್ನು ಮಾತ್ರ ಕಟ್ಟಿ ತೀರಿಸುವುದಾಗಿ ಮನವಿ ಮಾಡಿದ್ದಾರೆ.
ಈ ವೇಳೆ ಶಶೀಂದ್ರಾ, ಯಾವುದೇ ಕಾರಣಕ್ಕೂ ಬಡ್ಡಿ ಬಿಡುವುದಿಲ್ಲ, ಪ್ರತಿ ತಿಂಗಳು 10 ಸಾವಿರ ರೂ. ಅಸಲು ಮತ್ತು 5 ಸಾವಿರ ರೂ. ಬಡ್ಡಿ ಸೇರಿ 15 ಸಾವಿರ ರೂ. ಕಟ್ಟಲು ಒತ್ತಡ ಹೇರಲಾಗಿದೆ. ಜತೆಗೆ, ಲೇವಾದೇವಿ ನಡೆಸಲು ಈ ದಂಪತಿ ಯಾವುದೇ ಪರವಾನಗಿ ಪಡೆದಿಲ್ಲ ಎಂದು ಆರೋಪಿಸಿರುವ ಸಮ್ರೀನ್, ದಂಪತಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕೋ-ಆಪರೇಟೀವ್ ಡೆಪ್ಯೂಟಿ ರಿಜಿಸ್ಟ್ರಾರ್ಗೆ ದೂರು ನೀಡಿದ್ದರು.
ಈ ಸಂಬಂಧ ಡೆಪ್ಯೂಟಿ ರಿಜಿಸ್ಟ್ರಾರ್ ಅವರು ಸಿಸಿಬಿಗೆ ದೂರು ಸಲ್ಲಿಸಿದ್ದಾರೆ. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.







