ಬೆಂಗಳೂರು | ಕಾರಿನಲ್ಲಿಯೇ ವ್ಯಕ್ತಿ ಅನುಮಾನಾಸ್ಪದ ಸಾವು

ಸಾಂದರ್ಭಿಕ ಚಿತ್ರ
ಬೆಂಗಳೂರು : ಖಾಸಗಿ ಕಂಪೆನಿಯ ಉದ್ಯೋಗಿಯೊಬ್ಬರು ಕಾರಿನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತಿಂಡ್ಲು ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಮತ್ತೀಕರೆಯ ಗೋಕುಲ ಬಡಾವಣೆಯ ನಿವಾಸಿ ಅಶ್ವಿನ್ ಕುಮಾರ್ (42) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಕಳೆದ ರಾತ್ರಿ ಮನೆಯಿಂದ ಕಾರಿನಲ್ಲಿ ಹೊರಟಿದ್ದ ಅಶ್ವಿನ್ ಕುಮಾರ್ ತಡರಾತ್ರಿಯಾದರೂ ಮನೆಗೆ ಬಾರದ ಕಾರಣ ಆತಂಕಗೊಂಡ ಕುಟುಂಬಸ್ಥರು ಅವರ ಮೊಬೈಲ್ಗೆ ಕರೆ ಮಾಡಿದರೂ ಪ್ರತಿಕ್ರಿಯೆ ಸಿಗದಿದ್ದಾಗ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಕೊಡಿಗೇಹಳ್ಳಿ ಠಾಣೆ ಪೊಲೀಸರು ಮೊಬೈಲ್ ನಂಬರ್ ಪಡೆದು ಕಾರ್ಯಾಚರಣೆ ಕೈಗೊಂಡಾಗ ಅಶ್ವಿನ್ ಕುಮಾರ್ ಅವರು ತಿಂಡ್ಲು ಮುಖ್ಯ ರಸ್ತೆಯ ಮೇಲೇತುವೆ ಬಳಿ ಇರುವುದು ಗೊತ್ತಾಗಿ ಸುಮಾರು 11.30ರಲ್ಲಿ ಅಲ್ಲಿಗೆ ಹೋಗಿದ್ದು, ಮಲಗಿದ್ದ ಸ್ಥಿತಿಯಲ್ಲಿದ್ದ ಅಶ್ವಿನ್ ಕುಮಾರ್ ಅವರನ್ನು ಕಾರಿನ ಗಾಜು ತಟ್ಟಿ ಎಬ್ಬಿಸಲು ಪ್ರಯತ್ನಿಸಿದಾಗ ಯಾವುದೇ ಸ್ಪಂದನೆ ಸಿಗಲಿಲ್ಲ. ನಂತರ ಗಾಜು ಒಡೆದು ಪರಿಶೀಲಿಸಿದಾಗ ಅವರು ಮೃತಪಟ್ಟಿರುವುದು ಗೊತ್ತಾಗಿದೆ.
ಸಾವಿನ ಕುರಿತಂತೆ ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ರಾಥಮಿಕ ತನಿಖೆ ವೇಳೆ ಇವರು ಉಸಿರುಗಟ್ಟಿ ಸಾವನ್ನಪ್ಪಿರಬಹುದು ಅಥವಾ ಹೃದಯಾಘಾತವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.ಕೊಡಿಗೇಹಳ್ಳಿ ಠಾಣೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.







