ಬೆಂಗಳೂರು | ಐದು ನಗರ ಪಾಲಿಕೆಗಳಲ್ಲಿ ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಸೂಚನೆ

ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು, ಸೆ.18: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು ಎಂದು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗುರುವಾರ ನಗರ ಪಾಲಿಕೆಗಳ ಅಧಿಕಾರಿಗಳೊಂದಿಗೆ ನಡೆದ ವಚ್ರ್ಯುವಲ್ ಸಭೆಯಲ್ಲಿ ಮಾತನಾಡಿದ ಅವರು, ಐದು ನಗರ ಪಾಲಿಕೆಗಳಿಗೆ ತಲಾ 25 ಕೋಟಿ ರೂ.ಹಣ ಬಿಡುಗಡೆ ಮಾಡಲಾಗಿದ್ದು, ಆ ಅನುದಾನದಲ್ಲಿಯೇ ಹಣವನ್ನು ಹೊಂದಿಸಿಕೊಂಡು ರಸ್ತೆ ಗುಂಡಿಗಳನ್ನು ಮುಚ್ಚಬೇಕು ಎಂದರು.
ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಎಷ್ಟು ರಸ್ತೆಗಳು ಬರಲಿವೆ, ರಸ್ತೆ ಗುಂಡಿಗಳ ಸಂಖ್ಯೆ, ಗುತ್ತಿಗೆದಾರರನ್ನು ನಿಯೋಜಿಸಿರುವ ಬಗ್ಗೆ, ರಸ್ತೆ ಗುಂಡಿಗಳನ್ನು ಮುಚ್ಚಲು ತಗಲುವ ವೆಚ್ಚ, ಕೆಲಸ ಕೈಗೊಳ್ಳುವ ಮಾದರಿಯ ಕುರಿತು ವಿವರಣಾತ್ಮಕ ವರದಿಯನ್ನು ಅಧಿಕಾರಿಗಳು ಸಲ್ಲಿಸಬೇಕು ಎಂದು ಅವರು ತಿಳಿಸಿದರು.
ನಗರದಲ್ಲಿ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿನ ಗುಂಡಿಗಳು ಮತ್ತು ಹಾಳಾದ ಭಾಗಗಳಿಗೆ ಡಾಂಬರೀಕರಣ ಮಾಡಲು ಡಾಂಬರು ಮಿಶ್ರಣ ಘಟಕದಿಂದ ಅವಶ್ಯಕ ಡಾಂಬರನ್ನು ಪಡೆದು ಕಾಲಮಿತಿಯೊಳಗಾಗಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ಈ ಸಂಬಂಧ ಉತ್ತರ ನಗರ ಪಾಲಿಕೆಯಿಂದ ಘಟಕಕ್ಕೆ ನೋಡಲ್ ಅಧಿಕಾರಿಯನ್ನು ನಿಯೋಜಿಸಿ, ಆಯಾ ಪಾಲಿಕೆಗಳಿಂದ ಅವಶ್ಯಕತೆಗೆ ಅನುಸಾರ ಇಂಡೆಂಟ್ ಸಲ್ಲಿಸಿ, ಗುತ್ತಿಗೆದಾರರಿಂದ ಗುಂಡಿಗಳನ್ನು ಮುಚ್ಚಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.
ಕೇಂದ್ರ ನಗರ ಪಾಲಿಕೆಯ ಆಯುಕ್ತ ರಾಜೆಂದ್ರ ಚೋಳನ್ ಮಾತನಾಡಿ, ಕೇಂದ್ರ ನಗರ ಪಾಲಿಕೆಯಲ್ಲಿ ಈಗಾಗಲೇ ರಸ್ತೆಗಳಿಗೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿದ್ದು, ರಸ್ತೆ ಗುಂಡಿಗಳನ್ನು ಸಮಗ್ರ ಯೋಜನೆಯನ್ನು ರೂಪಿಸಿಕೊಳ್ಳಲಾಗಿದೆ. ಅದರಂತೆ, 30ಕ್ಕೂ ಹೆಚ್ಚು ತಂಡಗಳನ್ನು ನಿಯೋಜನೆ ಮಾಡಿಕೊಂಡು, ಪ್ರತಿ ರಸ್ತೆಗೂ ಪ್ರತ್ಯೇಕ ಏಜೆನ್ಸಿಯನ್ನು ನಿಗದಿಪಡಿಸಿ, ಗಡುವನ್ನು ನೀಡಿ ಸಾಮೂಹಿಕವಾಗಿ ರಸ್ತೆ ಗುಂಡಿಗಳನ್ನು ಮುಚ್ಚಲಾಗುವುದು ಎಂದರು.
ಸಭೆಯಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಡಾ. ಕೆ. ಹರೀಶ್ ಕುಮಾರ್, ನಗರ ಪಾಲಿಕೆಗಳ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್, ಡಾ. ರಾಜೇಂದ್ರ ಕೆ.ವಿ ಸೇರಿದಂತೆ ಮುಖ್ಯ ಅಭಿಯಂತರರು ಉಪಸ್ಥಿತರಿದ್ದರು.







