Bengaluru | ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು, ಮೇ 12: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಮಂಗಳವಾರ ನಗರದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಾಯಿತು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರ ಆತಂಕಕ್ಕೆ ಕೇಂದ್ರ ಸರಕಾರವೇ ನೇರ ಹೊಣೆಯಾಗಿದೆ. ಇದನ್ನು ಮುಚ್ಚಿಹಾಕಲು ಪರೀಕ್ಷೆ ರದ್ದುಮಾಡಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.
ಈ ವೇಳೆ ಮಾತನಾಡಿದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ ಎಚ್.ಎಸ್, ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ಮೇ 3ರಂದು ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ಪ್ರಶ್ನೆ ಆರಂಭಕ್ಕೂ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಇದು ಕೇಂದ್ರ ಸರಕಾರದ ವೈಫಲ್ಯವಾಗಿದೆ. ಕೇಂದ್ರ ಸರಕಾರ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನೀಟ್ ಅತ್ಯಂತ ಕಷ್ಟಕರವಾದ ಪರೀಕ್ಷೆಯೆಂದು ವಿದ್ಯಾರ್ಥಿಗಳು ಸಾಕಷ್ಟು ವರ್ಷಗಳಿಂದ ಸಿದ್ಧತೆ ನಡೆಸಿ ಪರೀಕ್ಷೆಗೆ ಹಾಜರಾಗುತ್ತಾರೆ. ಇಂತಹ ಘಟನೆ ಅವರಿಗೆ ಅಘಾತ ಉಂಟು ಮಾಡಿತ್ತು. ಕೇಂದ್ರ ಸರಕಾರ ತನ್ನ ತಪ್ಪುಗಳನ್ನು ಮುಚ್ಚಿಹಾಕಿಕೊಳ್ಳುವ ಉದ್ದೇಶದಿಂದ ನೀಟ್ ಪರೀಕ್ಷೆ ರದ್ದುಗೊಳಿಸಿ ಮರು ಪರೀಕ್ಷೆ ಮಾಡುವುದಾಗಿ ತಿಳಿಸಿದೆ. ಪರೀಕ್ಷೆಯನ್ನು ಶಿಸ್ತುಬದ್ಧವಾಗಿ ನಡೆಸಬೇಕಾಗಿರುವುದು ಕೇಂದ್ರ ಸರಕಾರದ ಕರ್ತವ್ಯ ಎಂದು ತಿಳಿಸಿದರು.
ಈ ರೀತಿ ನಿರ್ಲಕ್ಷತನದಿಂದ ಪರೀಕ್ಷೆ ನಡೆಸಿದರೆ, ವಿದ್ಯಾರ್ಥಿಗಳ ಗತಿ ಏನಾಗಬೇಕು? ಪರೀಕ್ಷೆಯ ವಿಶ್ವಾಸರ್ಹತೆ ಎಲ್ಲಿದೆ?, ಎರಡು ವರ್ಷಗಳ ಹಿಂದೆಯೂ ಇದೇ ರೀತಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಆದರೂ, ಕೇಂದ್ರ ಸರಕಾರ ಎಚ್ಚೆತ್ತುಕೊಳ್ಳುತ್ತಿಲ್ಲ. ಕೆಲವು ರಾಜ್ಯಗಳಲ್ಲಿ ನೀಟ್ ಪರೀಕ್ಷೆ ಎದುರಿಸಲು ಸಾಧ್ಯವಾಗದೇ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಯಾರು ಹೊಣೆ? ಎಂದು ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ರಾಷ್ಟೀಯ ಪ್ರದಾನ ಕಾರ್ಯದರ್ಶಿ ನಿಗಮ್ ಭಂಡಾರಿ, ಪ್ರದಾನ ಕಾರ್ಯದರ್ಶಿ ತಾರಿಕ್ ಭಗವಾನ್ ಮತ್ತಿತರರು ಹಾಜರಿದ್ದರು.






