Bengaluru | ಝಮೀರ್ ಅಹ್ಮದ್ಗೆ ಡಿಸಿಎಂ ಸ್ಥಾನ ನೀಡುವಂತೆ ಆಗ್ರಹಿಸಿ ಧರಣಿ

ಬೆಂಗಳೂರು : ಮಾಜಿ ಸಚಿವ ಬಿ.ಝಡ್.ಝಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನ ನೀಡುವಂತೆ ಝಮೀರ್ ಅಹ್ಮದ್ ಅಭಿಮಾನಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಶನಿವಾರ ನಗರದ ಚಾಮರಾಜಪೇಟೆಯ ಮೈಸೂರು ರಸ್ತೆಯ ಸಿರ್ಸಿ ವೃತ್ತದ ಬಳಿ ಜಮಾವಣೆಗೊಂಡಿದ್ದ ಝಮೀರ್ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಝಮೀರ್ ಅಹ್ಮದ್ ಖಾನ್ ಪರ ಘೋಷಣೆ ಕೂಗಿ, ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.
ಮೊದಲ ಹಂತದ ಸಚಿವರ ಪಟ್ಟಿಯಲ್ಲಿ ಝಮೀರ್ ಅಹ್ಮದ್ ಅವರ ಹೆಸರು ಕೈಬಿಟ್ಟಿರುವುದು ಖಂಡನೀಯ. ಆದರೆ ಎರಡನೇ ಹಂತದ ಪಟ್ಟಿಯಲ್ಲಾದರೂ ಝಮೀರ್ ಅಹ್ಮದ್ ಅವರಿಗೆ ಸಚಿವ ಸಂಪುಟದಲ್ಲಿ ಸೇರ್ಪಡೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಧರಣಿ ನಿರತರು ಎಚ್ಚರಿಕೆ ನೀಡಿದರು.
ಇದೇ ವೇಳೆ ಧರಣಿನಿರತರನ್ನು ಪೊಲೀಸರು ವಶಕ್ಕೆ ಪಡೆದರು. ಧರಣಿಯಲ್ಲಿ ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಚಾಮರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ವಿನಾಯಕ, ಜಗಜೀವನರಾಂ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಗೌಸಿಯಾ ಸೇರಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.




