Bengaluru | ಮಗಳನ್ನು ಕಾಲೇಜಿಗೆ ಕರೆದೊಯ್ಯುತ್ತಿದ್ದ ವೇಳೆ ಅಪಘಾತ: ತಾಯಿ ಮೃತ್ಯು

ಸಾಂದರ್ಭಿಕ ಚಿತ್ರ | PC : Gemini AI
ಬೆಂಗಳೂರು : ದ್ವಿಚಕ್ರ ವಾಹನದಲ್ಲಿ ಮಗಳನ್ನು ಕಾಲೇಜಿಗೆ ಕರೆದೊಯ್ಯುತ್ತಿದ್ದ ವೇಳೆ ಅಪಘಾತ ಸಂಭವಿಸಿ ತಾಯಿಯೊಬ್ಬರು ಮೃತಪಟ್ಟಿರುವ ಘಟನೆ ಮಾರತ್ಹಳ್ಳಿ ಬಳಿ ಶನಿವಾರ ವರದಿಯಾಗಿದೆ.
ಕಾಂತಾ(38) ಎಂಬವರು ಮೃತಪಟ್ಟ ತಾಯಿ ಎಂದು ಗುರುತಿಸಲಾಗಿದೆ. ರಸ್ತೆ ಗುಂಡಿಯಿಂದಾಗಿ ದ್ವಿಚಕ್ರ ವಾಹನದಿಂದ ಆಯತಪ್ಪಿ ಬಿದ್ದ ಕಾಂತಾ ಅವರ ಮೇಲೆ ಶಾಲಾ ಬಸ್ವೊಂದು ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನಾ ಸ್ಥಳಕ್ಕೆ ವೈಟ್ಫೀಲ್ಡ್ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಮಗಳು ನೇಹಾಳನ್ನು ಕಾಲೇಜಿಗೆ ಬಿಡಲು ಕಾಂತಾ ಅವರು ದ್ವಿಚಕ್ರ ವಾಹನದಲ್ಲಿ ಮಾರತ್ಹಳ್ಳಿಯಿಂದ ಸಿದ್ದಾಪುರ ಮಾರ್ಗವಾಗಿ ಹೊರಟಿದ್ದರು. ಜೂ.12ರ ಶುಕ್ರವಾರ ರಾತ್ರಿ ನಗರದಲ್ಲಿ ಸುರಿದ ಮಳೆಯಿಂದ ರಸ್ತೆ ಗುಂಡಿಗಳು ನೀರಿನಿಂದ ಆವೃತ್ತವಾಗಿದ್ದವು. ಅದರಿಂದ ಆಯತಪ್ಪಿ ಕಾಂತಾ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ, ಹಿಂಬದಿಯಿಂದ ಬಂದ ಶಾಲಾ ಬಸ್ ಕಾಂತಾ ಅವರ ಮೇಲೆ ಹರಿದಿದೆ. ತೀವ್ರವಾಗಿ ಗಾಯಗೊಂಡಿದ್ದ ಕಾಂತಾ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.






