Bengaluru | ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು : ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಗ್ಗೆ ವರದಿಯಾಗಿದ್ದು, ವಿದ್ಯಾರ್ಥಿನಿಯು ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಮೃತಳನ್ನು ಚಿಕ್ಕಬಾಣವಾರದ ನಿವಾಸಿ ತೇಜಸ್ವಿನಿ ರಾಜ್.ಪಿ (20) ಎಂದು ಗುರುತಿಸಲಾಗಿದೆ. ಚಿಕ್ಕಬಾಣಾವರ ಸಮೀಪದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿನಿ ಸೋಮವಾರ ಮಧ್ಯಾಹ್ನ ಕಾಲೇಜಿನಿಂದ ಹೊರಟಿದ್ದಳು. ‘ಸದಾಶಿವನಗರದ ಸ್ಯಾಂಕಿ ಕೆರೆ ಬಳಿ ಹೋಗುತ್ತಿದ್ದು, ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಆಕೆಯ ಸ್ನೇಹಿತನಿಗೆ ದೂರವಾಣಿ ಮೂಲಕ ಸಂದೇಶ ಕಳುಹಿಸಿದ್ದಳು.
ಆತ ತೇಜಸ್ವಿನಿಯ ತಾಯಿಯ ದೂರವಾಣಿಗೆ ಸಂದೇಶವನ್ನು ಕಳುಹಿಸಿ, ವಿಷಯ ತಿಳಿಸಿದ್ದಾನೆ. ಕೂಡಲೇ ಆಕೆಯ ತಾಯಿ ಸದಾಶಿವನಗರ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಹಾಗೂ ಕುಟುಂಬಸ್ಥರು ತಡರಾತ್ರಿಯವರೆಗೆ ಹುಡುಕಾಟ ನಡೆಸಿದ್ದರು. ಆದರೆ ಮಂಗಳವಾರ ಬೆಳಗ್ಗೆ ಸ್ಯಾಂಕಿ ಕೆರೆಯಲ್ಲಿ ತೇಜಸ್ವಿನಿಯ ಮೃತದೇಹ ಪತ್ತೆಯಾಗಿದೆ.
ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ ಸೋಮವಾರ ಸಂಜೆ 4 ರಿಂದ 6 ಗಂಟೆಯ ವರೆಗೆ ಕೆರೆ ಆವರಣದಲ್ಲಿ ಓಡಾಡಿಕೊಂಡಿದ್ದ ತೇಜಸ್ವಿನಿ ತಡರಾತ್ರಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡಿರುವ ಸದಾಶಿವನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.






