Bengaluru | ಕನಿಷ್ಠ ವೇತನ ಪರಿಷ್ಕರಣೆಯ ಅಂತಿಮ ಆದೇಶ ಜಾರಿಗೊಳಿಸುವಂತೆ ಆಗ್ರಹಿಸಿ ಧರಣಿ

ಬೆಂಗಳೂರು : ಕರ್ನಾಟಕದಲ್ಲಿ ಕನಿಷ್ಠ ವೇತನ ಪರಿಷ್ಕರಣೆಯ ಅಂತಿಮ ಆದೇಶವನ್ನು ಜಾರಿಗೊಳಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸರಕಾರಿ ಇಲಾಖೆಗಳ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ನಗರದ ಫ್ರೀಡಂ ಪಾರ್ಕ್ನಲ್ಲಿ ಧರಣಿ ನಡೆಸಲಾಯಿತು.
ಕರ್ನಾಟಕ ಸರಕಾರವು ಇತ್ತೀಚಿಗೆ ಮಾಡಲಾದ ಕನಿಷ್ಠ ವೇತನ ಪರಿಷ್ಕರಣೆಯನ್ನು ಮರು ಪರಿಶೀಲಿಸಲು ಮುಂದಾಗಿರುವುದು ತೀವ್ರ ನಿರಾಶೆ ಮತ್ತು ಆಘಾತವನ್ನುಂಟು ಮಾಡಿದೆ. ಕರ್ನಾಟಕದಲ್ಲಿ ಕನಿಷ್ಠ ವೇತನ ಪರಿಷ್ಕರಣೆಯು 2017-18ರಿಂದಲೇ ಬಾಕಿ ಇತ್ತು. ವಾಸ್ತವವಾಗಿ ಕನಿಷ್ಠ ವೇತನದ ಹಿಂದಿನ ಪರಿಷ್ಕರಣೆಯನ್ನು ಕಾಂಗ್ರೆಸ್ ಸರಕಾರದ ನೇತೃತ್ವದಲ್ಲೇ ಮಾಡಲಾಗಿತ್ತು ಎಂದು ಧರಣಿ ನಿರತರು ತಿಳಿಸಿದರು.
2026ರ ಪರಿಷ್ಕರಣೆಯು ಕರ್ನಾಟಕ ಸರಕಾರದ ವಿವಿಧ ಇಲಾಖೆ, ನಿಗಮ ಮಂಡಳಿಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ 2 ಲಕ್ಷಕ್ಕೂ ಹೆಚ್ಚು ಹೊರಗುತ್ತಿಗೆ ನೌಕರರ ಕುಟುಂಬಗಳಿಗೆ ಹೆಚ್ಚಿದ ವೇತನ ಪ್ರಯೋಜನವನ್ನು ನೀಡುತ್ತದೆ. ಆದ್ದರಿಂದ ಕೂಡಲೇ ಕನಿಷ್ಠ ವೇತನ ಪರಿಷ್ಕರಣೆಯ ಅಂತಿಮ ಆದೇಶವನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಹೊರಗುತ್ತಿಗೆ ನೌಕರರ ವೇತನ ಪರಿಷ್ಕರಿಸಿ ಮೇ.22ರಂದು ಹೊರಡಿಸಿರುವ ಆದೇಶವನ್ನು ಜಾರಿಗೊಳಿಸಬೇಕು. ಹೊರಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸುವುದರಿಂದ ಶೇ.18ರಷ್ಟು ಜಿಎಸ್ಟಿ ಸೇವಾ ಶುಲ್ಕ, ಆಡಳಿತಾತ್ಮಕ ವೆಚ್ಚ ಉಳಿತಾಯವಾಗುತ್ತದೆ. ಹೊರಗುತ್ತಿಗೆ ನೌಕರರ ದಕ್ಷತೆ ಮತ್ತು ಉತ್ತರದಾಯಿತ್ವವು ಹೆಚ್ಚಲಿದ್ದು, ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ಪಾವತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಧರಣಿಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ಇಲಾಖೆಗಳ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ, ಕರಾವಳಿ ವಿಭಾಗದ ಸಂಚಾಲಕ ಬಿ.ಕೆ.ಅಣ್ಣಪ್ಪ, ವಲಯ ಅಧ್ಯಕ್ಷ ಕೃಷ್ಣ ಪೂಜಾರಿ, ಚಂದ್ರಣ್ಣ, ಸುದೀಪ್ ಮತ್ತಿತರರು ಹಾಜರಿದ್ದರು.






