ಬೆಂಗಳೂರು : ಕೆಎಸ್ಸಾರ್ಟಿಸಿ ಬಸ್ ಹರಿದು ದ್ವಿಚಕ್ರ ವಾಹನ ಸವಾರ ಮೃತ್ಯು
![ಬೆಂಗಳೂರು : ಕೆಎಸ್ಸಾರ್ಟಿಸಿ ಬಸ್ ಹರಿದು ದ್ವಿಚಕ್ರ ವಾಹನ ಸವಾರ ಮೃತ್ಯು ಬೆಂಗಳೂರು : ಕೆಎಸ್ಸಾರ್ಟಿಸಿ ಬಸ್ ಹರಿದು ದ್ವಿಚಕ್ರ ವಾಹನ ಸವಾರ ಮೃತ್ಯು](https://www.varthabharati.in/h-upload/2024/02/12/1243149-1227842-accident.webp)
ಬೆಂಗಳೂರು: ಕೆಎಸ್ಸಾರ್ಟಿಸಿ ಬಸ್ ಚಕ್ರ ಹರಿದು ದ್ವಿಚಕ್ರ ವಾಹನ ಸವಾರರೊಬ್ಬರು ಮೃತಪಟ್ಟಿರುವ ಘಟನೆ ನಗರದ ಯಶವಂತಪುರ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ವರದಿಯಾಗಿದೆ.
ಬೆಂಗಳೂರಿನ ನಾಗಸಂದ್ರದ ನಿವಾಸಿ ರಾಜೇಂದ್ರ(50) ಎಂಬುವನ್ನು ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ನೆಲಮಂಗಲದ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಜೇಂದ್ರ, ಕೆಲಸದ ನಿಮಿತ್ತ ಬೆಳಗ್ಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಜಿಎಸ್ಟಿ ಕಚೇರಿಗೆ ತೆರಳುತ್ತಿದ್ದರು. ಇದೇ ಸಂದರ್ಭದಲ್ಲಿ ಅವರ ಬಲಬದಿಯಿಂದ ಬಂದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾದ ಪರಿಣಾಮ ಕೆಳಕ್ಕೆ ಬಿದ್ದಿದ್ದರು. ಈ ವೇಳೆ ರಾಜೇಂದ್ರ ಅವರ ತಲೆ ಮೇಲೆ ಬಸ್ನ ಹಿಂಬದಿ ಚಕ್ರ ಹರಿದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಯಶವಂತಪುರ ಸಂಚಾರಿ ಠಾಣಾ ಪೊಲೀಸರು ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದು, ಬಸ್ಸನ್ನು ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದಾರೆ ಎಂದು ಬೆಂಗಳೂರು ಸಂಚಾರ ಉತ್ತರ ವಿಭಾಗದ ಡಿಸಿಪಿ ಸಿರಿಗೌರಿ ಡಿ.ಆರ್ ಮಾಹಿತಿ ನೀಡಿದ್ದಾರೆ.