ಬೆಂಗಳೂರಿನಲ್ಲಿ ಮಳೆ ಅನಾಹುತಗಳಿಗೆ ಸರಕಾರದ ಬೇಜವಾಬ್ದಾರಿತನ ಕಾರಣ: ಆರ್. ಅಶೋಕ್
"ಬ್ರಾಂಡ್ ಬೆಂಗಳೂರು ನಿಜಬಣ್ಣ ಬಯಲು"

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಮಳೆ ಅನಾಹುತದ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯಕ್ಕೆ ತಕ್ಷಣ 1 ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರವಿವಾರ ರಾತ್ರಿ 103 ರಿಂದ 130 ಮಿಲಿ ಮೀಟರ್ ವರೆಗೆ ಮಳೆ ಬಿದ್ದು ಇಡೀ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ತ್ವರಿತಗತಿಯಲ್ಲಿ ಪರಿಹಾರ ಕಾರ್ಯ ಕೈಗೆತ್ತಿಕೊಂಡು ಸಂತ್ರಸ್ತರ ನೆರವಿಗೆ ಧಾವಿಸಬೇಕು. ಮುಂಗಾರು ಪೂರ್ವದ ಒಂದೇ ಒಂದು ಮಳೆ ಕಾಂಗ್ರೆಸ್ ಸರಕಾರದ ‘ಬ್ರಾಂಡ್ ಬೆಂಗಳೂರಿ’ನ ನಿಜಬಣ್ಣ ಬಯಲು ಮಾಡಿದೆ. ಇಂತಹ ಸನ್ನಿವೇಶದಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.
ನಗರದ ನಾನಾ ಪ್ರದೇಶಗಳಿಂದ ತಮಗೆ ದೂರವಾಣಿ ಕರೆಗಳ ಮಹಾಪೂರ ಹರಿದು ಬರುತ್ತಿದೆ. ಅನೇಕ ಬಡಾವಣೆಗಳು ಜಲಾವೃತವಾಗಿವೆ, ನೂರಾರು ವಾಹನಗಳು ಪ್ರವಾಹದಲ್ಲಿ ತೇಲಿ ಹೋಗಿವೆ, ಅನಾಥಾಶ್ರಮಕ್ಕೂ ನೀರು ನುಗ್ಗಿದೆ, ಇಡೀ ರಾತ್ರಿ ಜನರು ಜಾಗರಣೆ ಮಾಡುತ್ತಿದ್ದಾರೆ, ಅವರಿಗೆ ಊಟದ ವ್ಯವಸ್ಥೆ ಇಲ್ಲ, ಇಷ್ಟಾದರೂ ಬಿಬಿಎಂಪಿ ನೆರವಿಗೆ ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೊಣೆಗೇಡಿತನದ ಪರಮಾವಧಿ: ಕಳೆದ ಅವಧಿಯಲ್ಲಿ ಮುಳುಗಡೆಯಾಗಿದ್ದ ಸಾಯಿ ಬಡಾವಣೆ, ನಂದಗೋಕುಲ ಬಡಾವಣೆ ಸೇರಿದಂತೆ ಅನೇಕ ಬಡಾವಣೆಗಳಿಗೆ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಪಾಲಿಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಶಾಶ್ವತ ಪರಿಹಾರದ ಭರವಸೆ ನೀಡಿದ್ದರು. ಆದರೆ, ಅದು ಮಾತಿನಲ್ಲೇ ಉಳಿದು ಈ ಸಲ ಮತ್ತೆ ಆ ಬಡಾವಣೆಗಳು ನೀರಿನಲ್ಲಿ ಮುಳುಗಿವೆ. ಆದರೂ ನಿವಾಸಿಗಳ ಅಳಲು ಕೇಳಲು ಯಾರೂ ಮುಂದಾಗಿಲ್ಲ ಎಂದು ಟೀಕಿಸಿದ್ದಾರೆ.
ಪ್ರವಾಹ: ಹೆಬ್ಬಾಳ, ಕೋರಮಂಗಲ ಮತ್ತು ವೃಷಭಾವತಿ ವ್ಯಾಲಿಯಲ್ಲಿ ಪ್ರವಾಹ ಬಂದಿದೆ. ಇನ್ನೂ ಮೂರು-ನಾಲ್ಕು ದಿನ ಭಾರಿ ಮಳೆ ಬೀಳುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಕ್ಷಣ ತುರ್ತು ಪರಿಹಾರ ಕಾರ್ಯಪಡೆ ರಚಿಸಿ, ಸಹಾಯವಾಣಿ ಆರಂಭಿಸಬೇಕು. ನೀರು ನುಗ್ಗಿರುವ ಮನೆಗಳಿಗೆ ತಲಾ ಕನಿಷ್ಠ 1ಲಕ್ಷ ರೂ. ಪರಿಹಾರ ವಿತರಿಸಬೇಕು. ಆ ಮನೆಯವರಿಗೆ ಊಟ, ತಿಂಡಿ ವ್ಯವಸ್ಥೆ ಮಾಡಿ ಎರಡು ತಿಂಗಳಿಗೆ ಆಗುವಷ್ಟು ಪರಿಹಾರ ವಿತರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಜಾಗತಿಕ ಮಟ್ಟದಲ್ಲಿ ಅಪಮಾನ: ಹಿಂದಿನ ವರ್ಷದ ಲೋಪಗಳಿಂದ ಪಾಠ ಕಲಿಯದ ಸರಕಾರದ ಬೇಜವಾಬ್ದಾರಿತನದಿಂದ ನಗರದಲ್ಲಿ ಅನಾಹುತ ಸಂಭವಿಸಿದೆ. ಮುಂಚಿತವಾಗಿ ಮೋರಿ, ಚರಂಡಿ, ರಾಜ ಕಾಲುವೆಗಳಲ್ಲಿ ಹೂಳು ತೆಗೆಸುವ ಕೆಲಸ ಮಾಡಬೇಕಿತ್ತು. ನಗರದ ಅನೇಕ ಕಡೆ ವೈಟ್ ಟಾಫಿಂಗ್ ಮತ್ತು ರಿಪೇರಿ ಕಾಮಗಾರಿ ನಡೆಯುತ್ತಿದ್ದು ಅಲ್ಲಿನ ಅವಶೇಷಗಳನ್ನು ತೆರವು ಮಾಡಿದಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ ಎಂದಿದ್ದಾರೆ.
ಬಿಬಿಎಂಪಿ ಮುನ್ನೆಚ್ಚರಿಕೆ ವಹಿಸದಿರುವುದೇ ಅನಾಹುತಗಳಿಗೆ ಕಾರಣ ಎಂದು ಖುದ್ದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಉಸ್ತುವಾರಿ ಸಚಿವ ಡಿಕೆಶಿ ಅವರ ವೈಫಲ್ಯಕ್ಕೆ ಇದಕ್ಕಿಂತ ಇನ್ಯಾವುದೇ ಸರ್ಟಿಫಿಕೇಟ್ ಬೇಕಾ?. ಕಳೆದ ವರ್ಷ ವಿಧಾನಸಭೆ ಕ್ಷೇತ್ರಗಳಲ್ಲಿ ಮನೆ ಬಾಗಿಲಿಗೆ ಪರಿಹಾರ ಹೆಸರಿನಲ್ಲಿ ಜನಸಂಪರ್ಕ ಸಭೆಗಳನ್ನು ನಡೆಸಿದ್ದ ಶಿವಕುಮಾರ್, ಸಾರ್ವಜನಿಕರಿಗೆ ಭರವಸೆಗಳ ಮಹಾಪೂರವನ್ನೇ ಹರಿಸಿದ್ದರು. ಈಗ ಅದೆಲ್ಲಾ ಏನಾಯಿತು ಎಂಬ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
‘ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬಂತೆ ವರ್ತಿಸಿರುವ ಶಿವಕುಮಾರ್, ಹಿಂದಿನ ಸರಕಾರದ ಲೋಪ ಅನಾಹುತಕ್ಕೆ ಕಾರಣ ಎಂದಿದ್ದಾರೆ. ಆಗಾದರೆ ಎರಡು ವರ್ಷಗಳ ಕಾಲ ಇವರು ಕಡಿದು ಕಟ್ಟೆ ಹಾಕಿದ್ದೇನು? ಇದೇನಾ ಇವರ ಬ್ರಾಂಡ್ ಬೆಂಗಳೂರು? ಹೆಸರಿಗೆ ಮಾತ್ರ ಗ್ರೇಟರ್, ದಿನವೂ ಜನರಿಗೆ ಟಾರ್ಚರ್ ತಪ್ಪಿಲ್ಲ. ಒಂದೇ ಮಳೆಗೆ ಇವರ ಬ್ರಾಂಡ್ ಬೆಂಗಳೂರು ಕೊಚ್ಚಿ ಹೋಯ್ತು. ಜಾಗತಿಕ ಮಟ್ಟದಲ್ಲಿ ಬೆಂಗಳೂರು ಮಾನ ಹರಾಜಾಗಿದೆ’
-ಆರ್.ಅಶೋಕ್, ವಿಪಕ್ಷ ನಾಯಕ







