ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿದು ಕಾರ್ಮಿಕ ಮೃತ್ಯು

Photo: X/@ANI
ಬೆಂಗಳೂರು: ನಗರದ ಸುದ್ದಗುಂಟೆಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಸೋಮವಾರ ವರದಿಯಾಗಿದೆ.
ಅವಶೇಷದಡಿ ಸಿಲುಕಿದ್ದ ಮೃತ ವ್ಯಕ್ತಿಯನ್ನು ಬಿಹಾರ ಮೂಲದ ಕಾರ್ಮಿಕ ರಂಜನ್ ಎಂದು ಗುರುತಿಸಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಹಾಗೂ pಲೀಸರು ಮೃತ ದೇಹ ಹೊರತೆಗೆದಿದ್ದು, ನಗರದ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಮತ್ತೊಬ್ಬ ಕಾರ್ಮಿಕನನ್ನು ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ಮಾತನಾಡಿದ ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ ಬಾಬ, ಸೋಮವಾರ ಮಧ್ಯಾಹ್ನ 2.30ರ ಸುಮಾರಿಗೆ ಈ ಘಟನೆ ನಡೆದಿದೆ. ಅಪಾರ್ಟ್ ಮೆಂಟ್ ನಿರ್ಮಾಣ ಮಾಡಬೇಕು ಎಂದು ಜೆಸಿಬಿ ಮೂಲಕ ಅಡಿಪಾಯ ಅಗೆಯಲಾಗುತ್ತಿತ್ತು. ಜೆಸಿಬಿ ಜೊತೆಗೆ ಮೂರ್ನಾಲ್ಕು ಜನ ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳಲಾಗಿತ್ತು.
ಈ ವೇಳೆ ಪಕ್ಕದಲ್ಲಿ ಮೂರು ಅಂತಸ್ಥಿನ ಕಟ್ಟಡಕ್ಕೆ ಜೆಸಿಬಿ ತಾಗಿ ಘಟನೆ ಸಂಭವಿಸಿದೆ. ಆ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ಮೇಲೆ ಬಿದ್ದಿದೆ. ಘಟನೆಯಲ್ಲಿ ಬಿಹಾರ ಮೂಲದ ಓರ್ವ ಸಾವನ್ನಪ್ಪಿದ್ದಾನೆ. ಈಗಾಗಲೇ ಮಾಲೀಕ ಯಾರು, ಕಾಂಟ್ರಾಕ್ಟರ್ ಯಾರು ಎನ್ನುವ ಮಾಹಿತಿ ಪಡೆಯಲಾಗುತ್ತಿದೆ. ಸಂಬಂಧಪಟ್ಟವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಬಿಬಿಎಂಪಿಯಿಂದ ಮಾಲಕರು ಅನುಮತಿ ತಗೊಂಡಿದ್ದಾರೆಯೇ ಎನ್ನುವ ಮಾಹಿತಿ ಪಡೆಯಲಾಗುತ್ತಿದೆ ಎಂದರು.





