ವಿಧಾನಸೌಧದಲ್ಲಿ ನಾಳೆ ‘ಶತಕದ ಪಥ, ಪ್ರಗತಿಯ ರಥ’ ವಿಶೇಷ ಕಾರ್ಯಕ್ರಮ

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ನೂರು ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ‘ದೃಢ ಕರ್ನಾಟಕದ ಸಂಕಲ್ಪ-ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಕಾರ್ಯಕ್ರಮವನ್ನು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ನಾಳೆ (ಸೆ.10) ಬೆಳಗ್ಗೆ 10 ಗಂಟೆಗೆ ಜರುಗಲಿರುವ ಈ ವಿಶೇಷ ಕಾರ್ಯಕ್ರಮದ ಉದ್ಘಾಟನೆಯನ್ನು ನಿಕಟಪೂರ್ವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನೆರವೇರಿಸಲಿದ್ದು, ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಸಚಿವ ಸಂಪುಟದ ಎಲ್ಲ ಸಚಿವರು, ಶಾಸಕರು ಮತ್ತು ರಾಜ್ಯಸಭಾ ಸದಸ್ಯರು, ಲೋಕಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ತಿನ ಸದಸ್ಯರು, ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರಕಾರದ ಎಲ್ಲ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಫಲಾನುಭವಿಗಳೊಂದಿಗೆ ಸಿಎಂ ಸಂವಾದ: ಸರಕಾರದ ಮಹತ್ವಾಕಾಂಕ್ಷೆ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ, ಗೃಹಜ್ಯೋತಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಸೇರಿದಂತೆ ವಿವಿಧ ಕ್ಷೇತ್ರದ ಕಾರ್ಮಿಕರನ್ನು ಒಳಗೊಂಡಂತೆ, ಸಮಾಜದ ವಿವಿಧ ವರ್ಗಗಳ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇರವಾಗಿ ಸಂವಾದ ನಡೆಸಲಿದ್ದಾರೆ.
ವಿಶೇಷವಾಗಿ ಈ ಕಾರ್ಯಕ್ರಮದಲ್ಲಿ ಕೃಷಿಕರು, ಆಟೋರಿಕ್ಷಾ ಚಾಲಕರು, ಪೌರಕಾರ್ಮಿಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ಭಾಗವಹಿಸಲಿದ್ದು, ಸರಕಾರದ ಜನಪರ ಯೋಜನೆಗಳು ಜನರ ಜೀವನದಲ್ಲಿ ತಂದಿರುವ ಬದಲಾವಣೆಗಳು ಮತ್ತು ಅಭಿವೃದ್ಧಿಯ ಮುಂದಿನ ಹಾದಿಯ ಕುರಿತು ಸಮಾಲೋಚನೆ ನಡೆಸಲಿದ್ದಾರೆ.
ಘೋಷಣೆಗಳ ಪಟ್ಟಿ ಬಿಡುಗಡೆ: ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್, 72 ಸಾವಿರ ಸರಕಾರಿ ಹುದ್ದೆಗಳ ನೇಮಕಾತಿಗೆ ಕಾಲಮಿತಿ ನಿಗದಿ, ನಗರದ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಲು 2 ಸಾವಿರ ಕೋಟಿ ರೂ.ಗಳ ಯೋಜನೆ, ‘ಪ್ರಜಾ ಸೇವೆ’ ಇಲಾಖೆ ಆರಂಭ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿರುವುದಾಗಿ ಪ್ರಕಟಿಸಿದೆ.
ಅಲ್ಲದೆ, ‘ಸಾಮಾಜಿಕ ಮತ್ತು ಆರ್ಥಿಕ (ಜಾತಿ ಗಣತಿ)ಸಮೀಕ್ಷೆ’ ಜಾರಿಗೊಳಿಸುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಲು ಸರಕಾರ ಬದ್ಧವಾಗಿದೆ ಎಂದು ಘೋಷಿಸಲಾಗಿದೆ. ಎಲ್ಲ ಪಂಚಾಯಿತಿಗಳು ಹಾಗೂ ವಾರ್ಡ್ಗಳಲ್ಲಿ ‘ಭಾರತ್ ಜೋಡೋ ಯುವಕರ ಸಂಘ’ ಸ್ಥಾಪನೆ, 2,500ಚದರ ಅಡಿಯ ವರೆಗಿನ ನೂತನ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಒಸಿ ವಿನಾಯಿತಿ ಸೇರಿದಂತೆ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಗ್ಯಾರಂಟಿಗಳು ಕರ್ನಾಟಕದ ನಿವಾಸಿಗಳಿಗೆ ಮಾತ್ರ ತಲುಪುವಂತೆ ಹಾಗೂ ಸೋರಿಕೆಯನ್ನು ತಡೆಯಲು ಕ್ರಮ ಕೈಗೊಳ್ಳಲಾಗಿದೆ. ರೌಡಿಗಳ ನಿಗ್ರಹಕ್ಕೆ ಜಿಲ್ಲೆಗೊಂದು ವಿಶೇಷ ಪಡೆ ರಚನೆ, ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ದೂರವಾಣಿ ವ್ಯವಸ್ಥೆ ಹಾಗೂ ಸರಕಾರಿ ಕಚೇರಿಗಳಲ್ಲಿ ಬೆಳಗ್ಗೆ 10 ಗಂಟೆಗೆ ಸಿಬ್ಬಂದಿ ಹಾಜರಾತಿ ಖಚಿತಪಡಿಸಲು ಜಿಪಿಎಸ್ ಆಧರಿತ ವ್ಯವಸ್ಥೆ ಜಾರಿಯ ಮೂಲಕ ಆಡಳಿತ ಸುಧಾರಣೆಗೆ ಒತ್ತು ನೀಡಲಾಗಿದೆ.
ಬರ ನಿರ್ವಹಣೆಗೆ ಆದ್ಯತೆ: ರಾಜ್ಯದಲ್ಲಿನ ತೀವ್ರ ಸ್ವರೂಪದ ಬರ ನಿರ್ವಹಣೆಗೆ ಆದ್ಯತೆ ನೀಡಲಾಗಿದೆ. ಅಲ್ಲದೆ, ಜನಸಾಮಾನ್ಯರನ್ನು ಕಾಡಿಸುತ್ತಿದ್ದ ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ನೂತನ ಸಿಎಸ್ಆರ್ ನೀತಿ ರೂಪಿಸಲು ಒತ್ತು ನೀಡಿದ್ದು, ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಘೋಷಿಸಲಾಗಿದೆ.






