ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಒಬ್ಬ ದಕ್ಷ ಆಡಳಿತಗಾರ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ದಕ್ಷ ಆಡಳಿತಗಾರರಾಗಿದ್ದ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಆದರ್ಶಗಳ ಹಾದಿಯಲ್ಲಿ ಸರಕಾರ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
’ಜನರ ಕೆಲಸ ದೇವರ ಕೆಲಸʼ
ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿಯಂದು ಸರಕಾರದ ವತಿಯಿಂದ ಗೌರವ ಸಲ್ಲಿಸಲಾಗುತ್ತಿದೆ. ಕೆಂಗಲ್ ಹನುಮಂತಯ್ಯನವರು ಒಬ್ಬ ದಕ್ಷ ಆಡಳಿತಗಾರರಾಗಿದ್ದು, ಕರ್ನಾಟಕದ ಎರಡನೇ ಮುಖ್ಯಮಂತ್ರಿಯಾಗಿದ್ದರು. ಸ್ವಾತಂತ್ರ್ಯನಂತರವಿದ್ದ ಸಮಸ್ಯೆಗಳನ್ನು ಮುಖ್ಯಮಂತ್ರಿಯಾಗಿ ಸಮರ್ಥವಾಗಿ ಎದುರಿಸಿದರು. ವಿಧಾನಸೌಧದ ಭವ್ಯ ಕಟ್ಟಡ ನಿರ್ಮಾಣಕ್ಕೆ ಅವರು ರೂವಾರಿಯಾಗಿದ್ದರೂ, ಕಟ್ಟಡದ ಉದ್ಘಾಟನೆಯ ವೇಳೆಗೆ ಅವರು ಅಧಿಕಾರದಲ್ಲಿರಲಿಲ್ಲ. ಜನಪ್ರತಿನಿಧಿಯಾಗಿ ಪ್ರಮಾಣಿಕ ಜನರ ಸೇವೆ ಸಲ್ಲಿಸುವುದು ಅತಿಮುಖ್ಯ ಎಂದು ವಿಧಾನಸೌಧದ ಕಟ್ಟಡದ ಪೂರ್ವಭಾಗದಲ್ಲಿ’ಜನರ ಕೆಲಸ ದೇವರ ಕೆಲಸ’ ಎಂದು ಕೆತ್ತಲಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದ ಕೆಂಗಲ್ ಹನುಮಂತಯ್ಯ ಅವರ ಸೇವೆಯನ್ನು ಸರಕಾರ ಸ್ಮರಿಸುತ್ತಿದೆ. ಅವರ ಆದರ್ಶಗಳ ಹಾದಿಯಲ್ಲಿ ನಡೆಯುವ ಪ್ರಯತ್ನವನ್ನು ಸರ್ಕಾರ ಮಾಡಲಿದೆ ಎಂದರು.
ಉಪಮುಖ್ಯಮಂತ್ರಿ ಅವರಿಂದ ಉಪಹಾರ ಕೂಟ :
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಮುಖ್ಯಮಂತ್ರಿಗಳನ್ನು ಮಂಗಳವಾರ ಉಪಹಾರಕ್ಕೆ ಆಹ್ವಾನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ನನ್ನ ಮನೆಯಲ್ಲಿ ಉಪಹಾರದ ಸಂದರ್ಭದಲ್ಲಿ ಉಪಮುಖ್ಯಮಂತ್ರಿಯವರು ಆಗಮಿಸಿದ್ದಾಗ, ಮಂಗಳವಾರ ತಮ್ಮ ನಿವಾಸದಲ್ಲಿ ಬೆಳಗಿನ ಉಪಹಾರಕ್ಕೆ ಆಹ್ವಾನವನ್ನು ನೀಡಿದ್ದಾರೆಯೇ ಹೊರತು, ಈ ಬಗ್ಗೆ ಯಾವುದೇ ದೂರವಾಣಿ ಕರೆ ಬಂದಿಲ್ಲ ಆದರೆ ಉಪಹಾರಕ್ಕೆ ಆಹ್ವಾನ ಬಂದರೆ ,ಮಂಗಳವಾರದ ಉಪಹಾರ ಕೂಟಕ್ಕೆ ತೆರಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣ : ರಾಜಕೀಯವಾಗಿ ಸೇಡು ತೀರಿಸಿಕೊಳ್ಳುತ್ತಿರುವ ಬಿಜೆಪಿ
ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿಯವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ ಕೆಲಸದಲ್ಲಿ ನಿರತವಾಗಿದೆ ಎಂದು ತಿಳಿಸಿದರು.







