Bengaluru | ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ದಲಿತ ಸಂಘಟನೆಗಳಿಂದ ಬೃಹತ್ ಧರಣಿ

ಬೆಂಗಳೂರು : ದಲಿತ ಸಮುದಾಯದ ಹಿರಿಯ ಶಾಸಕರಾದ ಡಾ.ಎಚ್.ಸಿ.ಮಹದೇವಪ್ಪರಿಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ 'ಕರ್ನಾಟಕ ರಾಜ್ಯ ದಲಿತ ಸಂಘಟನೆಗಳ ಒಕ್ಕೂಟ'ದಿಂದ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಕಾಂಗ್ರೆಸ್ ಪಕ್ಷವು, ದಲಿತ ಸಮುದಾಯದ ಮುಖಂಡರಾದ ಬಿ.ಬಸವಲಿಂಗಪ್ಪ, ಕೆ.ಎಚ್.ರಂಗನಾಥ್, ಬಿ.ರಾಚಯ್ಯ, ಎನ್.ರಾಚಯ್ಯ, ಶ್ರೀನಿವಾಸ್ ಪ್ರಸಾದ್ ಸೇರಿದಂತೆ ಹಲವು ನಾಯಕರನ್ನು ಕಡೆಗಣಿಸಿತ್ತು. ಇದೀಗ ಅದೇ ರೀತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್, ಡಾ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ ಸೇರಿದಂತೆ ಸಮುದಾಯದ ಹಿರಿಯರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸದೆ ಅನ್ಯಾಯ ಮಾಡಿದೆ ಎಂದು ಮುಖಂಡರು ದೂರಿದರು.
ಡಾ.ಮಹದೇವಪ್ಪ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳದಿರುವುದು ನಾಡಿನ ದಲಿತ ಸಮುದಾಯಕ್ಕೆ ಮಾಡಿದ ಅನ್ಯಾಯ. ಕೂಡಲೇ ಅವರಿಗೆ ಸಚಿವ ಸ್ಥಾನವನ್ನು ನೀಡದಿದ್ದರೆ ಮುಂಬರಲಿರುವ ಜಿಬಿಎ, ಜಿಲ್ಲಾ, ತಾಲೂಕು ಪಂಚಾಯತ್ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಧರಣಿಯಲ್ಲಿ ಮೈಸೂರಿನ ಉರಿಲಿಂಗ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ, ಮುಖಂಡರಾದ ಸಿದ್ದಲಿಂಗಯ್ಯ, ಪುರುಷೋತ್ತಮ್, ಡಿ.ಜಿ.ಸಾಗರ್, ಗುರುಪ್ರಸಾದ್ ಕೆರಗೋಡು, ಸಿ.ಎಂ. ಮುನಿಯಪ್ಪ, ಎಂ.ವೆಂಕಟಸ್ವಾಮಿ, ವಿ.ನಾಗರಾಜ್, ಅಣ್ಣಯ್ಯ, ಎಚ್. ಮಾರಪ್ಪ, ಕಮಲಮ್ಮ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.






