ಕಾಂಗ್ರೆಸ್ ಗ್ಯಾರಂಟಿ ದೇಶಕ್ಕೆ ಮಾದರಿ, ನಮ್ಮ ಜನಪರ ಯೋಜನೆಗಳನ್ನು ಯಾರೂ ಬದಲಿಸಲು ಸಾಧ್ಯವಿಲ್ಲ : ಡಿ.ಕೆ.ಶಿವಕುಮಾರ್

ಬೆಂಗಳೂರು : “ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿಯಾಗಿ ನೀಡಲಾಗುತ್ತಿರುವ ಅಕ್ಕಿ ದುರ್ಬಳಕೆಯಾಗುತ್ತಿರುವುದನ್ನು ತಪ್ಪಿಸಲು, ಎಣ್ಣೆ, ಬೇಳೆ, ಸಕ್ಕರೆ, ಉಪ್ಪು ಸೇರಿದಂತೆ ಐದಾರು ಪದಾರ್ಥಗಳಿರುವ ಇಂದಿರಾ ಕಿಟ್ ವಿತರಿಸಲು ಸರಕಾರ ಚಿಂತನೆ ನಡೆಸುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ನಡೆದ ವಿಶ್ವ ಆಹಾರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.
ಈ ಸರಕಾರ ಬರುವ ಮುನ್ನ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿಯನ್ನು 10 ಕೆ.ಜಿಗೆ ಏರಿಸುವುದಾಗಿ ಭರವಸೆ ನೀಡಿದೆವು. ನಂತರ ಇದರ ದುರ್ಬಳಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಸಚಿವ ಸಂಪುಟದಲ್ಲಿ ಹೊಸ ತೀರ್ಮಾನಕ್ಕೆ ಬಂದಿದ್ದೇವೆ ಎಂದರು.
“ನಾವು ಯಾರ ಒತ್ತಡಕ್ಕೂ ಒಳಗಾಗಿ ಈ ತೀರ್ಮಾನ ಮಾಡಿಲ್ಲ. ಈ ವಿಚಾರವಾಗಿ ಸಮೀಕ್ಷೆ ನಡೆಸಿ, ಜನಸಾಮಾನ್ಯರು ಹಾಗೂ ಶಾಸಕರ ಜೊತೆ ಚರ್ಚಿಸಿ ತೀರ್ಮಾನ ಮಾಡಿದ್ದೇವೆ. ಸಾಮಾನ್ಯವಾಗಿ ಪ್ರತಿ ಕುಟುಂಬದಲ್ಲಿ ತಿಂಗಳಿಗೆ ವ್ಯಕ್ತಿಗೆ 5-6 ಕೆ.ಜಿಗೆ ಅಕ್ಕಿ ಮಾತ್ರ ಬಳಸುತ್ತಾರೆ. ಹೀಗಾಗಿ ನಾವು ಕೊಟ್ಟ ಮಾತನ್ನೂ ಉಳಿಸಿಕೊಳ್ಳುವುದಕ್ಕೆ ಇಂದಿರಾ ಕಿಟ್ ವಿತರಿಸಲು ಮಾರ್ಗದರ್ಶನ ನೀಡಲಾಗಿದೆ. ಸಿದ್ದರಾಮಯ್ಯ ಅವರ ನೇತೃತ್ವ ಹಾಗೂ ಸಚಿವ ಮುನಿಯಪ್ಪ ಅವರ ಮುಖಂಡತ್ವದಲ್ಲಿ ಈ ಐತಿಹಾಸಿಕ ತೀರ್ಮಾನ ಮಾಡಲಾಗಿದೆ” ಎಂದು ತಿಳಿಸಿದರು.
“ಈ ವಿಚಾರವಾಗಿ ರಾಜಕೀಯ ಚರ್ಚೆ ಮಾಡುತ್ತಾರೆ. ಯಡಿಯೂರಪ್ಪ ಅವರು ಒಂದು ಕಾಳು ಕಡಿಮೆ ಕೊಟ್ಟರು ಹೋರಾಟ ಮಾಡುವುದಾಗಿ ಹೇಳುತ್ತಿದ್ದರು. ಅವರು ಭಾವನೆ ಮೇಲೆ ರಾಜಕಾರಣ ಮಾಡುತ್ತಾರೆ. ನಮ್ಮ ಸರಕಾರ ಸದಾ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ. ಇಡೀ ದೇಶದಲ್ಲಿ ನಮ್ಮ ರಾಜ್ಯದ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ಮಾಡಿ ಅವರ ರಾಜ್ಯಗಳ ಯೋಜನೆ ನಿರ್ಣಯ ಮಾಡುತ್ತಿದ್ದಾರೆ” ಎಂದು ತಿಳಿಸಿದರು.
ಪ್ರತಿ ಅಗುಳಿಗೂ ಪ್ರಾಮುಖ್ಯತೆ ನೀಡಿ:
“ಪ್ರತಿ ಹನಿ ನೀರಿಗೆ ಕೊಡುವ ಪ್ರಾಮುಖ್ಯತೆಯನ್ನು ಪ್ರತಿ ಅಗುಳು ಅನ್ನಕ್ಕೂ ನೀಡಬೇಕು. ನಾವೆಲ್ಲರೂ ಪ್ರಕೃತಿ ನಿಯಮದಲ್ಲಿ ಬದುಕುತ್ತಿದ್ದು, ಗಾಳಿ, ನೀರು, ಸೂರ್ಯನ ಜೊತೆಗೆ ಆಹಾರದ ಮೇಲೆ ಅವಲಂಬಿತವಾಗಿದ್ದೇವೆ. ಪ್ರಕೃತಿ ಆಹಾರದ ಮೂಲಕ ನಮ್ಮನ್ನು ಕಾಪಾಡಿಕೊಂಡು ಬಂದಿದೆ. ಹಸಿದವನಿಗೆ ಮಾತ್ರ ಆಹಾರದ ಬೆಲೆ ಗೊತ್ತಿದೆ. ಎಲ್ಲರೂ ಕಷ್ಟಪಡುವುದೂ ಒಂದು ತುತ್ತು ಆಹಾರ, ಒಂದು ಗೇಣು ಬಟ್ಟೆಗಾಗಿ. ಇದರ ಹೊರತಾಗಿ ನಾವು ಏನೇ ಮಾಡಿದರೂ ಅವು ತಾತ್ಕಾಲಿಕ ಮಾತ್ರ” ಎಂದು ಹೇಳಿದರು.
ಬಡವರ ಬದುಕು ಬದಲಿಸಲು ಕಾಂಗ್ರೆಸ್ ಯೋಜನೆಗಳು:
“ಈ ದೇಶದಲ್ಲಿ ಬಡವರ ಬದುಕಿನಲ್ಲಿ ಬದಲಾವಣೆ ತರಲು ಕಾಂಗ್ರೆಸ್ ಪಕ್ಷ ಹೇಗೆ ತೀರ್ಮಾನ ಮಾಡಿದೆ ಎಂದು ಕಾಂಗ್ರೆಸ್ ಸರಕಾರದ ಪ್ರತಿನಿಧಿಯಾಗಿ ನನಗೆ ಗೊತ್ತಿದೆ. ಇಂದಿರಾ ಗಾಂಧಿ ಹಾಗೂ ದೇವರಾಜ ಅರಸು ಅವರ ಕಾಲದಲ್ಲಿ ಉಳುವವನಿಗೆ ಭೂಮಿ ಕೊಡಲಾಯಿತು. ಬಡವರಿಗೆ ಪಡಿತರ ಜೊತೆಗೆ ಪಡಿತರ ಚೀಟಿ ವ್ಯವಸ್ಥೆ ಮಾಡಲಾಯಿತು. ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಶಾಲೆಗಳಲ್ಲಿ ಮಕ್ಕಳನ್ನು ಆಕರ್ಷಿಸಲು ಮಧ್ಯಾಹ್ನ ಬಿಸಿಯೂಟ ಯೋಜನೆ ಆರಂಭಿಸಲಾಯಿತು. ನಂತರ ಸಿದ್ದರಾಮಯ್ಯ ಅವರು ಬಸವ ಜಯಂತಿ ದಿನ ಅಧಿಕಾರ ಸ್ವೀಕರಿಸಿ ಮೊದಲ ದಿನವೇ ರಾಜ್ಯದಲ್ಲಿ ಯಾರೊಬ್ಬರೂ ಹಸಿವಿನಿಂದ ಇರಬಾರದು ಎಂದು ಅನ್ನಭಾಗ್ಯ ಯೋಜನೆ ಜಾರಿಗೆ ತಂದರು. ನಮ್ಮ ಈ ಕಾರ್ಯಕ್ರಮಗಳನ್ನು ಯಾವುದೇ ಸರಕಾರಗಳು ನಿಲ್ಲಿಸಲು ಸಾಧ್ಯವಾಗಿಲ್ಲ. ನಂತರ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಸೋನಿಯಾ ಗಾಂಧಿ ಅವರ ಮಾರ್ಗದರ್ಶನದಲ್ಲಿ ದೇಶದಲ್ಲಿ ಆಹಾರ ಭದ್ರತೆ ಕಾಯ್ದೆ ಜಾರಿಗೆ ತಂದರು” ಎಂದು ಸ್ಮರಿಸಿದರು.
ಟೀಕೆ ಮಾಡಿದವರೇ ನಮ್ಮ ಗ್ಯಾರಂಟಿ ನಕಲು ಮಾಡುತ್ತಿದ್ದಾರೆ :
“ಈ ಹಿಂದೆ ಉಚಿತ ಗ್ಯಾಸ್ ನೀಡುವ ಯೋಜನೆಗೆ ಮೋದಿ ಫೋಟೋ ಹಾಕಿ ಎಲ್ಲಾ ಪೆಟ್ರೋಲ್ ಬಂಕ್ ಗಳ ಮುಂದೆ ಹಾಕುತ್ತಿದ್ದರು. ಈಗ ಅದನ್ನು ನಿಲ್ಲಿಸಿದ್ದಾರೆ. 400 ರೂಪಾಯಿ ಇದ್ದ ಅಡುಗೆ ಅನಿಲ 1100ಕ್ಕೆ ಏರಿಕೆಯಾಗಿತ್ತು. ಎಲ್ಲದರ ಬೆಲೆಗಳು ಗಗನಕ್ಕೇರಿದೆ, ಆದಾಯ ಪಾತಾಳಕ್ಕೆ ಕುಸಿದಿದೆ ಎಂದು ನಾವು ಗ್ಯಾರಂಟಿ ಯೋಜನೆ ಜಾರಿ ಮಾಡಿದೆವು. ಇದಕ್ಕೆ ಪ್ರತಿ ವರ್ಷ 53 ಸಾವಿರ ಕೋಟಿ ಅನುದಾನ ನೀಡುತ್ತಿದ್ದೇವೆ. ಪ್ರಧಾನಮಂತ್ರಿಗಳು ಹಾಗೂ ಇತರೆ ನಾಯಕರು ನಮ್ಮ ಯೋಜನೆ ಟೀಕೆ ಮಾಡಿದರೂ ಕೊನೆಗೆ ತಮ್ಮ ರಾಜಕೀಯ ಸ್ಥಾನಮಾನ ಉಳಿಸಿಕೊಳ್ಳಲು ನಮ್ಮ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ. ಬಿಹಾರದಲ್ಲಿ ಚುನಾವಣೆಯೇ ಘೋಷಣೆಯೇ ಆಗದಿದ್ದ ವೇಳೆಯಲ್ಲೇ ಆ ರಾಜ್ಯದ ಮಹಿಳೆಯರ ಖಾತೆಗೆ 10 ಸಾವಿರ ಹಾಕುತ್ತಿದ್ದಾರೆ. ಇಲ್ಲಿ ಜನರ ಹೊಟ್ಟೆಪಾಡು ವಿಚಾರ ಬಹಳ ಮುಖ್ಯ ಎಂದು ಸಾಬೀತಾಗುತ್ತದೆ” ಎಂದರು.







