ಮುಂದಿನ ಸಂಪುಟ ಸಭೆಯಲ್ಲಿ ಬರ ಘೋಷಣೆ: ಡಿಸಿಎಂ ಪರಮೇಶ್ವರ್

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ (Photo: X)
ಬೆಂಗಳೂರು, ಆ.26: ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಬರ ಘೋಷಣೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಅವರು ಇಂದು ಸದಾಶಿವ ನಗರದ ಗೃಹಕಚೇರಿ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕೇಂದ್ರ ಸರಕಾರದ ಮಾನದಂಡಗಳಿಗೆ ಅನುಗುಣವಾಗಿ ಬರ ಘೋಷಿಸುತ್ತೇವೆ. ಪ್ರತೀ ವಾರವೂ ಬರ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದರು.
ಬರ ಪರಿಸ್ಥಿತಿಯನ್ನು ಅವಲೋಕಿಸಲು ಬಿಜೆಪಿಯವರು ಕೂಡ ತಂಡ ಮಾಡಿಕೊಂಡು ಹೋಗಿದ್ದರು. ಆದರೆ ಆ ಬಗ್ಗೆ ಸದನದಲ್ಲಿ ಚರ್ಚೆಯೂ ಮಾಡಿಲ್ಲ. ಮುಖ್ಯಮಂತ್ರಿಗಾಗಲಿ, ಕಂದಾಯ ಸಚಿವನಾದ ತನಗಾಗಲಿ ವರದಿ ಅಥವಾ ಪತ್ರ ನೀಡಿಲ್ಲ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ರೈತರಿಗೆ ಬೆಳೆ ನಷ್ಟವಾಗಿದೆ. ವಿರೋಧ ಪಕ್ಷದವರು ಈ ಬಗ್ಗೆ ಚರ್ಚೆಗಳನ್ನು ಮಾಡಿ, ಸಲಹೆಗಳನ್ನು ಕೊಡಬೇಕು. ಆ ಕೆಲಸ ಮಾಡುವ ಬದಲು ಸದನದಲ್ಲಿ ಬರೀ ರಾಜಕೀಯ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪರಮೇಶ್ವರ್ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ಹೈಕಮಾಂಡ್ ಗೆ ಒತ್ತಾಯಿಸಿರುವುದಾಗಿ ಸಿದ್ದರಾಮಯ್ಯರ ಹೇಳಿಕೆಯ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜೀನಾಮೆ ನೀಡುವ ವೇಳೆ ಅವರು ಪರಮೇಶ್ವರ್ ರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಹೇಳಿದ್ದರು. ಅದನ್ನು ಹೈಕಮಾಂಡ್ ಪರಿಗಣನೆಗೆ ತೆಗೆದುಕೊಂಡಿಲ್ಲ. ಉಪ ಮುಖ್ಯಮಂತ್ರಿಯಾಗಿ ನನ್ನನ್ನು ಮಾಡಬೇಕು ಎಂದೂ ಅವರು ಹೇಳಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಹೇಳಿರುವುದು ಸತ್ಯ ಎಂದರು.
ನಾಗೇಂದ್ರರ ರಾಜೀನಾಮೆ ಕುರಿತ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಇಂದು ಅಥವಾ ನಾಳೆ ಮುಖ್ಯಮಂತ್ರಿ ದಿಲ್ಲಿಗೆ ಹೋಗುತ್ತಾರೆ. ಹೈಕಮಾಂಡ್ ಭೇಟಿಯಾದರೆ ಅಲ್ಲಿ ಈ ಬಗ್ಗೆ ಚರ್ಚೆಗಳು ನಡೆಯಬಹುದು. ಸಂಪುಟ ಪುನರ್ ರಚನೆ ಊಹಾಪೋಹವಷ್ಟೇ. ಹೈಕಮಾಂಡ್ ತೀರ್ಮಾನದಂತೆ ಆಗುತ್ತದೆ ಎಂದು ತಿಳಿಸಿದರು.
ಯಾವ ಚಾರ್ಜ್ಶೀಟ್ ನಲ್ಲೂ ನಾಗೇಂದ್ರ ರ ಹೆಸರು ಇಲ್ಲ. ನಾನು ಗೃಹಸಚಿವನಾಗಿದ್ದವನು. ನನಗೆ ಮಾಹಿತಿ ಇದೆ. ಸಿಬಿಐ ತನಿಖೆ ಮಾಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಆಗುತ್ತದೆ. ಈ ವಿಚಾರದಲ್ಲಿ ಬಿಜೆಪಿ ಪಾದಯಾತ್ರೆ ಮಾಡುತ್ತಿರುವುದು ರಾಜಕೀಯವಷ್ಟೇ. ಸದನದಲ್ಲೂ ಪ್ರಶ್ನೆಗಳನ್ನು ಕೇಳಿ ಉತ್ತರಿಸಲು ನಾವು ಸಮರ್ಥರಿದ್ದೇವೆ ಎಂದು ಹೇಳಿದ್ದೆವು. ಆದರೆ ಈಗ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದರು.
ಉದ್ಯಾನವನಗಳ ಶೇ.5ರಷ್ಟು ಜಾಗಗಳ ಬಳಕೆಗೆ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಾರ್ವಜನಿಕ ಉದ್ದೇಶಕ್ಕಾಗಿ ಜಾಗ ಬಳಕೆಯಾಗಲಿದೆ. ಅದು ನಿರ್ದಿಷ್ಟವಾಗಿ ಕಾರ್ಪೊರೇಶನ್ ನವರು ಮಾಡಿದಾಗಲೇ ತಿಳಿಯುತ್ತದೆ ಎಂದು ಹೇಳಿದರು.
ರಸ್ತೆ ಬದಿಯಲ್ಲಿ ನಿಲ್ಲಿಸುವ ವಾಹನಗಳಿಗೆ ಶುಲ್ಕ ಪಾವತಿಸುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಬೆಂಗಳೂರು ಉಸ್ತುವಾರಿ ಸಚಿವನಾಗಿದ್ದ ಸಮಯದಲ್ಲೂ ಈ ಬಗ್ಗೆ ಚರ್ಚೆಗಳನ್ನು ಮಾಡಿದ್ದೆವು. ರಸ್ತೆಗಳು ಇರುವುದು ಜನ ಓಡಾಡುವುದಕ್ಕೆ. ಎರಡೂ ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿದರೆ ರಸ್ತೆಗಳು ಕಾಣುವುದೇ ಇಲ್ಲ. ಹಾಗಾಗಿ ಈ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ತೀರ್ಮಾನ ಗೊತ್ತಾಗಲಿದೆ ಎಂದರು.
ಅಸಮಾನತೆ ತೊಲಗಬೇಕಾದರೆ ಮೀಸಲಾತಿ ಮತ್ತು ಒಳಮೀಸಲಾತಿ ಇರಲೇಬೇಕು ಎಂಬ ಸಿದ್ದರಾಮಯ್ಯರ ಹೇಳಿಕೆಯ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಾ.ಜಿ.ಪರಮೇಶ್ವರ್, ಒಳಮೀಸಲಾತಿ ಈಗ ಮುಗಿದ ಕಥೆ. ಬಹಳ ವರ್ಷಗಳಿಂದ ನಡೆಯುತ್ತಿದ್ದ ಹೋರಾಟದ ಹಿನ್ನೆಲೆಯಲ್ಲಿ ಒಳಮೀಸಲಾತಿಯನ್ನು ನಮ್ಮ ಸರಕಾರ ಜಾರಿಗೊಳಿಸಿದೆ. ಒಟ್ಟು ಮೀಸಲಾತಿಯ ಪ್ರಮಾಣ ಶೇಕಡಾ ಐವತ್ತನ್ನು ಮೀರಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ಇರುವ ಕಾರಣ ಒಳಮೀಸಲಾತಿಯ ಜಾರಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ. ಈ ಇತಿಮಿತಿಯಲ್ಲಿ ಒಳಮೀಸಲಾತಿ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.






