ಯುನಾನಿ, ಹೋಮಿಯೋಪತಿಯ ವೈದ್ಯ ಪದ್ದತಿಗೆ ಒತ್ತು: ದಿನೇಶ್ ಗುಂಡೂರಾವ್

ದಿನೇಶ್ ಗುಂಡೂರಾವ್
ಬೆಂಗಳೂರು : ರಾಜ್ಯ ಸರಕಾರವು ಆಯುಷ್ ಇಲಾಖೆಗೆ ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತಿದ್ದು, ಯುನಾನಿ ಮತ್ತು ಹೋಮಿಯೋಪತಿಯ ವೈದ್ಯ ಪದ್ದತಿಗೆ ಹೆಚ್ಚಿನ ಒತ್ತನ್ನು ನೀಡುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮಂಗಳವಾರ ಇಲ್ಲಿನ ಕೆ.ಎಚ್.ಬಿ. ಕಾಲೋನಿಯ ಸರಕಾರಿ ಯುನಾನಿ ಮತ್ತು ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯಗಳ ‘ಪುರುಷ ವಿದ್ಯಾರ್ಥಿನಿಲಯ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುನಾನಿ ವೈದ್ಯ ಪದ್ಧತಿ ಒಂದು ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಯಾಗಿದ್ದು, ಗ್ರೀಕ್ ಮತ್ತು ಅರೇಬಿಕ್ ವೈದ್ಯಕೀಯ ಚಿಂತನೆಯಿಂದ ಹುಟ್ಟಿಕೊಂಡಿದೆ. ಈಗ ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಹೊಂದಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯದ ಮತ್ತು ಶೈಕ್ಷಣಿಕ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ವೈದ್ಯರಾಗಿ ಹೊರಬಂದು ಸಮಾಜಕ್ಕೆ ತಮ್ಮ ಅಮೂಲ್ಯ ಸೇವೆ ನೀಡಬೇಕು. ರಾಜ್ಯದ ವಿವಿಧ ನಗರ, ಗ್ರಾಮೀಣ ಪ್ರದೇಶದಿಂದ ಹಾಗೂ ಹೊರ ರಾಜ್ಯಗಳಿಂದಲೂ ವಿದ್ಯಾರ್ಥಿಗಳು ವ್ಯಾಸಾಂಗಕ್ಕಾಗಿ ಬಂದಿರುತ್ತಾರೆ. ವ್ಯಾಸಾಂಗಕ್ಕಾಗಿ ಬರುವ ವಿದ್ಯಾರ್ಥಿಗಳಿಗೆ ವಸತಿನಿಲಯದ ಅವಶ್ಯಕತೆಯನ್ನು ಗಮನಿಸಿ ಪುರುಷ ವಿದ್ಯಾರ್ಥಿನಿಲಯವನ್ನು ಉದ್ಘಾಟಿಸಲಾಗಿದೆ ಎಂದು ಅವರು ತಿಳಿಸಿದರು.
ಯುನಾನಿ ಮತ್ತು ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯಗಳ ಪುರುಷ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಒಟ್ಟು 64 ಕೊಠಡಿಗಳ ನೆಲ ಮಹಡಿ, ಮೊದಲನೇ ಮಹಡಿ ಮತ್ತು ಎರಡನೇ ಮಹಡಿ ಹಾಗೂ ಟೆರೆಸ್ ಒಳಗೊಂಡ ಒಟ್ಟು ವಿಸ್ತೀರ್ಣ 3136.45 ಚದರ ಮೀಟರ್ ಕಟ್ಟಡವನ್ನು ನಿರ್ಮಿಸಲಾಗಿದೆ. ಈ ವಿದ್ಯಾರ್ಥಿ ನಿಲಯದ ಉಪಯೋಗವನ್ನು ಸುಮಾರು 188 ಪುರುಷ ವಿದ್ಯಾರ್ಥಿಗಳು ಉಚಿತವಾಗಿ ಉಪಯೋಗಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಕಟ್ಟಡಕ್ಕೆ ಅವಶ್ಯಕವಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಅವರು ತಿಳಿಸಿದರು.
ವಿದ್ಯಾರ್ಥಿಗಳು ಹೊರಗಡೆ ಊಟ ಮಾಡುವುದರಿಂದ ಅವರ ಆರೋಗ್ಯದ ಮೇಲೆ ಪರಿಣಾಮ ಬೀರುವಂತ ಸಾಧ್ಯತೆಗಳನ್ನು ಗಮನದಲ್ಲಿರಿಸಿಕೊಂಡು, ವಿದ್ಯಾರ್ಥಿನಿಲಯದಲ್ಲಿಯೇ ಊಟದ ವ್ಯವಸ್ಥೆ ಮಾಡುವ ಸಲುವಾಗಿ ಮುಂದಿನ ದಿನಗಳಲ್ಲಿ ಕಟ್ಟಡದಲ್ಲಿ ಅಡಿಗೆ ಮನೆ ಮತ್ತು ಊಟದ ಹಾಲ್ನ ವ್ಯವಸ್ಥೆಗೆ ಕ್ರಮ ವಹಿಸಲಾಗುವುದು ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.
ದೈನಂದಿನ ಜೀವನಶೈಲಿಯಲ್ಲಿನ ನಡೆ, ನುಡಿ, ಹವ್ಯಾಸಗಳು ಆರೋಗ್ಯದ ಮೇಲೆ ಪರಿಣಾಮ ಉಂಟು ಮಾಡುತ್ತದೆ. ಆರೋಗ್ಯವನ್ನು ನಾವು ಕಾಪಾಡಿಕೊಳ್ಳಬೇಕು. ಉತ್ತಮ ಜೀವನಶೈಲಿ, ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಕೃಷ್ಣ ಮಾತನಾಡಿ, ವಿದ್ಯಾರ್ಥಿಗಳಿಗಾಗಿ ಸ್ಕೈವಾಕ್ ನಿರ್ಮಿಸಲು ಕೋರಿಕೆ ಬಂದಿದ್ದು, ಕಾನೂನಿನ ಸಮಸ್ಯೆಯಿಂದಾಗಿ ಮಾಡಲಾಗಲಿಲ್ಲ. ಮುಂದಿನ ದಿನಗಳಲ್ಲಿ ಸ್ಕೈವಾಕ್ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯ ಆಯುಕ್ತ ವಿಪಿನ್ ಸಿಂಗ್, ಆಯುಷ್ ಇಲಾಖೆಯ ಜಂಟಿ ನಿರ್ದೇಶಕಿ ಡಾ.ಮಂಜುಳಾ ಎಸ್. ಸೇರಿದಂತೆ ಆಸ್ಪತ್ರೆಯ ಬೋಧಕ ಅಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







