ಬೆಂಗಳೂರು | ಸಾಮಾಜಿಕ ಜಾಲತಾಣದಲ್ಲಿ ಸಿಜೆಐ ಕುರಿತು ಅವಹೇಳನಕಾರಿ ಕಾಮೆಂಟ್: ಐದು ಖಾತೆಗಳ ವಿರುದ್ಧ ಎಫ್ಐಆರ್ ದಾಖಲು

ಸಿಜೆಐ ಬಿ.ಆರ್. ಗವಾಯಿ | Photo Credi : PTI
ಬೆಂಗಳೂರು, ಅ.11: ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ್ದ ಆರೋಪದಡಿ ಐದು ಖಾತೆಗಳ ವಿರುದ್ಧ ಇಲ್ಲಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕೇಸರಿ ನಂದನ್, ಶ್ರೀಧರ್ ಕುಮಾರ್, ನಾಗೇಂದ್ರ ಪ್ರಸಾದ್, ರಮೇಶ್ ನಾಯ್ಕ್ ಹಾಗೂ ಮಂಜುನಾಥ್ ಎಂ.ಸಿ. ಮಂಜು ಹೆಸರಿನ ಖಾತೆಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯ 67, 66 ಹಾಗೂ 66(ಸಿ), ಭಾರತೀಯ ನ್ಯಾಯ ಸಂಹಿತೆ 352ರಡಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚಿನ ಪ್ರಕರಣವೊಂದರ ಕುರಿತು ಪೋಸ್ಟ್ ಗೆ ಪ್ರತಿಕ್ರಿಯಿಸಿದ್ದ ಆರೋಪಿಗಳು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಕುರಿತು ಕೆಟ್ಟದಾಗಿ ಹಾಗೂ ಬೆದರಿಕೆಯೊಡ್ಡುವಂಥಹ ಕಾಮೆಂಟ್ ಪ್ರಕಟಿಸಿದ್ದರು. ಇದನ್ನು ಗಮನಿಸಿದ್ದ ಸೈಬರ್ ಕ್ರೈಂನ ಸಾಮಾಜಿಕ ಜಾಲತಾಣ ವಿಭಾಗದ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.





