ಮಾರ್ಷಲ್ಗಳ ಅಗತ್ಯ ಕುರಿತು ಪರಿಶೀಲಿಸಲು ಸಮಿತಿ ರಚನೆ
ಬೆಂಗಳೂರು, ಡಿ.5: ಬಿಬಿಎಂಪಿಯಲ್ಲಿ ಮಾರ್ಷಲ್ಗಳನ್ನು ಮುಂದುವರೆಸುವ ಕುರಿತು ಅವಶ್ಯಕತೆ ಇದೆಯೇ ಅಥವಾ ಇಲ್ಲವೇ ಎನ್ನುವ ಬಗ್ಗೆ ಪರಿಶೀಲಿಸಿ ಸಮಗ್ರ ವರದಿ ನೀಡುವಂತೆ ಪಾಲಿಕೆಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ ಆದೇಶಿಸಿದ್ದಾರೆ.
ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಮತ್ತು ಇಂದಿರಾ ಕ್ಯಾಂಟೀನ್ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾರ್ಷಲ್ ಸಿಬ್ಬಂದಿಗಳ ಸೇವೆಯನ್ನು ಮುಂದುವರೆಸುವ ಅವಶ್ಯಕತೆ ಇದೆಯೇ ಅಥವಾ ಇಲ್ಲವೇ ಎನ್ನುವ ಬಗ್ಗೆ ಸಮಿತಿಯು ಪರಶೀಲನೆ ನಡೆಸಲಿದೆ. ಸಮಿತಿಯಲ್ಲಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರು ಅಧ್ಯಕ್ಷರಾಗಿದ್ದರೆ, ಬಿಬಿಎಂಪಿಯ ಆಡಳಿತ, ಹಣಕಾಸು, ಯೋಜನೆ, ಘನತ್ಯಾಜ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಆಡಳಿತ ವಿಭಾಗದ ಉಪ ಆಯುಕ್ತರು ಸಮನ್ವಯ ಅಧಿಕಾರಿಯಾಗಿರುತ್ತಾರೆ.
ಬಿಬಿಎಂಪಿಯಲ್ಲಿ 750 ಮಾರ್ಷಲ್ ಗಳನ್ನು ಬಳಸಿಕೊಂಡು ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಮತ್ತು ಇಂದಿರಾ ಕಾಂಟೀನ್ಗಳಲ್ಲಿ, ವರ್ತೂರು ಮತ್ತು ಬೆಳ್ಳಂದೂರು ಕೆರೆಗಳಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಸುಳ್ಳು ದಾಖಲೆ ಸೃಷ್ಟಿ ಮಾಡಿ, ಪ್ರತಿ ವರ್ಷ ಕೋಟ್ಯಂತರ ರೂಪಾಯಿ ವಂಚನೆ ಮಾಡಲಾಗುತ್ತಿತ್ತು. ಈ ಕುರಿತು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ರಮೇಶ್ ಎನ್.ಆರ್. ಸರಕಾರಕ್ಕೆ ದೂರು ನೀಡಿದ್ದರು.