ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆ ‘ನನ್ನ ಇ-ಖಾತಾ, ನನ್ನ ಹಕ್ಕು’ ಅಭಿಯಾನ ರದ್ದು : ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ, ನಾಳೆ(ಜು.11) ನಡೆಯಬೇಕಿದ್ದ “ನನ್ನ ಇ-ಖಾತಾ, ನನ್ನ ಹಕ್ಕು” ಅಭಿಯಾನವನ್ನು ರದ್ದುಪಡಿಸಲಾಗಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕಂದಾಯ ಅಧಿಕಾರಿಗಳು ಮತದಾರ ನೋಂದಣಾಧಿಕಾರಿಗಳಾಗಿ, ಸಹಾಯಕ ಕಂದಾಯ ಅಧಿಕಾರಿಗಳು ಸಹಾಯಕ ಮತದಾರ ನೋಂದಣಾಧಿಕಾರಿಗಳಾಗಿ ಹಾಗೂ ಕಂದಾಯ ಮೌಲ್ಯ ಮಾಪಕರು, ಕಂದಾಯ ಪರಿವೀಕ್ಷಕರು ಮತ್ತು ಕಂದಾಯ ವಸೂಲಿಗಾರರು ಬಿಎಲ್ಒಗಳ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮಹೇಶ್ವರ್ ರಾವ್ ಹೇಳಿದ್ದಾರೆ.
ಆದ್ದರಿಂದ, ಖಾತಾ ಅಭಿಯಾನ ನಡೆಸುವುದು ಅಸಾಧ್ಯವಾಗಿದ್ದು, ಅಭಿಯಾನವನ್ನು ಪುನರಾರಂಭಿಸುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಮಹೇಶ್ವರ್ ರಾವ್ ತಿಳಿಸಿದ್ದಾರೆ.




