ಹುಬ್ಬಳ್ಳಿ ಗಲಭೆ ಸಹಿತ 43 ಪ್ರಕರಣಗಳ ವಾಪಸ್ ಪಡೆದ ವಿಚಾರ | ಸರಕಾರದ ಆದೇಶ ರದ್ದು ಮಾಡಿದ ಹೈಕೋರ್ಟ್

ಬೆಂಗಳೂರು : ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಕರ್ನಾಟಕ ರಾಜ್ಯ ಸರಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಆದೇಶಿದೆ.
ಸಂಘಟನಾ ಹೋರಾಟಗಾರರು, ರಾಜಕಾರಣಿಗಳು ಸೇರಿದಂತೆ 43 ಪ್ರಕರಣಗಳನ್ನು ಅಕ್ಟೋಬರ್ 10, 2024ರಂದು ರಾಜ್ಯ ಸರಕಾರ ರದ್ದುಗೊಳಿಸಿ ತೀರ್ಮಾನ ಕೈಗೊಂಡಿತು.ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ಸಿಜೆ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಹೈಕೋರ್ಟ್ ದ್ವಿಸದಸ್ಯ ಪೀಠ, ಸರಕಾರದ ಆದೇಶವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಪಿಐಎಲ್ ವಿಚಾರಣೆಯ ಸಂದರ್ಭದಲ್ಲೇ ಕೋರ್ಟ್, ಸಚಿವ ಸಂಪುಟದ ಕ್ರಮ ನಿಯಮಬಾಹಿರವಾಗಿದ್ದರೆ ಒಪ್ಪುವುದಿಲ್ಲ, ಪ್ರಕರಣಗಳನ್ನು ಹಿಂಪಡೆಯಲು ಅನುಮತಿ ನೀಡುವುದಿಲ್ಲ ಎಂದು ಹೇಳಿತ್ತು. ಅಲ್ಲದೇ ಅರ್ಜಿದಾರರ ಪರ ವಕೀಲರು ಪ್ರಭಾವಿ ವ್ಯಕ್ತಿಗಳೂ ಸೇರಿದಂತೆ ಕೆಲವು ರಾಜಕಾರಣಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಅಪರಾಧ ದಂಡ ಸಂಹಿತೆ ಸೆಕ್ಷನ್ 321ಕ್ಕೆ ವಿರುದ್ಧವಾಗಿ ಸರಕಾರ ಹಿಂಪಡೆದಿದೆ ಎಂದು ಹೇಳಿರುವುದು ಮೇಲ್ನೋಟಕ್ಕೆ ಸಮರ್ಥನೀಯವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.
ಹಿನ್ನೆಲೆ: ಗುಜರಾತ್ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಕೇಂದ್ರ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವು ರಾಜಕೀಯ ನಾಯಕರು ಹಾಗೂ ರೈತ ಮತ್ತು ಕನ್ನಡ ಪರ ಸಂಘಟನೆಗಳ ಪ್ರಮುಖರ ವಿರುದ್ಧ ರಾಜ್ಯದ ನಾನಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 43 ಕ್ರಿಮಿನಲ್ ಪ್ರಕರಣಗಳನ್ನು ಅಭಿಯೋಜನೆಯಿಂದ ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ನಿರ್ಣಯಿಸಿತ್ತು.
ಪೊಲೀಸ್ ಹಾಗೂ ಕಾನೂನು ಇಲಾಖೆಗಳ ಅಭಿಪ್ರಾಯ ಪಡೆದು ಸಚಿವ ಸಂಪುಟ ಉಪಸಮಿತಿ ಶಿಫಾರಸು ಆಧರಿಸಿ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ ಈ ತೀರ್ಮಾನ ಕೈಗೊಂಡಿತ್ತು.
ಬಿಜೆಪಿಯ ಮಾಜಿ ಸಚಿವ ಎಂಪಿ ರೇಣು ಕಾಚಾರ್ಯ, ಬಿಜೆಪಿ ಮಾಜಿ ಶಾಸಕ ವೀರಣ್ಣ ಚರಂತಿಮಠ, ಎಂಎಲ್ಸಿ ಸಿ.ಟಿ.ರವಿ, ಹಿರೇಕೆರೂರು ಶಾಸಕ ಯು.ಬಿ.ಬಣಕಾರ್, ಮಾಜಿ ಸಚಿವ ಬಿ.ಆರ್.ಯಾವಗಲ್, ಮಾಜಿ ಶಾಸಕರಾದ ಅನಿಲ್ ಎಸ್.ಬೆನಕೆ, ಬಿ.ಎಂ.ಸುಕುಮಾರ ಶೆಟ್ಟಿ ವಿರುದ್ಧದ ಪ್ರಕರಣಗಳನ್ನೂ ಹಿಂಪಡೆಯಲಾಗಿತ್ತು. ಶಾಸಕ ರಮೇಶ್ ಜಾರಕಿಹೊಳಿ ಅವರ ಬೆಂಗಳೂರಿನ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಬಳಗದ ಅಧ್ಯಕ್ಷ ಎಂ.ಎಸ್.ಅಂಗಡಿ ವಿರುದ್ಧ 2023ರ ಜ.31ರಂದು ಸದಾಶಿವನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆಯಲಾಗಿದೆ.
ಕನ್ನಡಪರ ಸಂಘಟನೆಗಳ ನಾಯಕರು ರೋಲ್ಕಾಲ್ ಗಿರಾಕಿಗಳು ಎಂಬ ಟೀಕಿಸಿದ್ದಾರೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರತಿಭಟನೆ ನಡೆಸಿದ್ದ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ವಿರುದ್ಧ ಬಾಗಲಕೋಟೆ ನವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನೂ ಅಭಿಯೋಜನೆಯಿಂದ ವಾಪಸ್ ಪಡೆಯಲು ನಿರ್ಧರಿಸಲಾಗಿತ್ತು.
2018ರ ಮೇ 3ರಂದು ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಜಿಗ್ನೇಶ್ ಮೇವಾನಿ ವಿರುದ್ಧ ಚುನಾವಣಾ ನೀತಿ ಸಂಹಿತೆಗೆ ವಿರುದ್ಧವಾಗಿ ಅನುಮತಿ ಇಲ್ಲದೆ ಸಭೆ ನಡೆಸಿದ್ದಕ್ಕಾಗಿ ದಾಖಲಾಗಿದ್ದ ಪ್ರಕರಣವನ್ನು ವಾಪಸ್ ಪಡೆಯಲಾಗಿದೆ. ರೈಲ್ವೆಯಲ್ಲಿ ‘ಡಿ’ ಗ್ರೂಪ್ ನೇಮಕದಲ್ಲಿ ಕನ್ನಡಿಗರಿಗೆ ಪ್ರಾಶಸ್ತ್ಯಕ್ಕಾಗಿ ಹೋರಾಟ ನಡೆಸಿದ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತು ಕೇಂದ್ರ ಸಚಿವ ವಿ.ಸೋಮಣ್ಣ ವಿರುದ್ಧ ಯಶವಂತಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯಲಾಗಿತ್ತು.
2015ರಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಕರೆಯಂತೆ ಚಿಕ್ಕಬಳ್ಳಾಪುರ, ಕೋಲಾರ ಅವಳಿ ಜಿಲ್ಲೆ ಬಂದೋಬಸ್ತ್ ವೇಳೆ ನಡೆದ ಕಾನೂನು ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ಎಂಎಲ್ಸಿ ಸಿ.ಟಿ.ರವಿ ವಿರುದ್ಧ ಬಾಗೇಪಲ್ಲಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳನ್ನು ವಾಪಸ್ ತೆಗೆದುಕೊಳ್ಳಲು ನಿರ್ಧರಿಸಲಾಗಿತ್ತು.







