ಹೈಕೋರ್ಟ್ ಕಟ್ಟಡ ವಿಸ್ತರಣೆ: ಸಿಜೆ ಮುಂದೆ ಪ್ರಸ್ತಾವ ಇಡಲು ಸೂಚನೆ

ಬೆಂಗಳೂರು: ನಗರದಲ್ಲಿ ಹೈಕೋರ್ಟ್ ಕಟ್ಟಡ ವಿಸ್ತರಣೆಗೆ ಹೆಚ್ಚಿನ ಸ್ಥಳಾವಕಾಶ ಕಲ್ಪಿಸುವ ವಿಚಾರದಲ್ಲಿ, ರಾಜ್ಯ ಸರಕಾರ ಸಲ್ಲಿಸಿರುವ ಪ್ರಸ್ತಾವನೆಗಳನ್ನು ಹೈಕೋರ್ಟ್ನ ಕಟ್ಟಡ ಸಮಿತಿ ಪರಿಶೀಲಿಸಿ ತನ್ನ ಅಭಿಪ್ರಾಯವನ್ನು ಮುಖ್ಯ ನ್ಯಾಯಮೂರ್ತಿಗಳ ಮುಂದೆ ಮಂಡಿಸಲು ಸೂಚಿಸಲಾಗಿದೆ.
ಬೆಂಗಳೂರಿನ ಹೈಕೋರ್ಟ್ ಕಟ್ಟಡದ ನೆಲಮಹಡಿಯಲ್ಲಿ ಇರುವ ಕಚೇರಿಗಳನ್ನು ಸ್ಥಳಾಂತರಿಸಲು ಸೂಕ್ತ ಆದೇಶ ಹೊರಡಿಸುವಂತೆ ಕೋರಿ ವಕೀಲ ಎಲ್.ರಮೇಶ್ ನಾಯಕ್ ಮತ್ತು ಹೈಕೋರ್ಟ್ ಕಟ್ಟಡ ಸಂಕೀರ್ಣಕ್ಕೆ ಬೆಂಗಳೂರಿನ ಕೇಂದ್ರ ಭಾಗದಲ್ಲಿ 30ಕ್ಕೂ ಅಧಿಕ ಎಕರೆ ಜಮೀನು ಮಂಜೂರು ಮಾಡಲು ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಶರಣ ದೇಸಾಯಿ ಎಂಬುವವರು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಗಳು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆಗೆ ಬಂದಿದ್ದವು. ಸರಕಾರ ಸಲ್ಲಿಸಿರುವ ಪ್ರಸ್ತಾವನೆಗಳು ಹೈಕೋರ್ಟ್ ಕಟ್ಟಡ ಸಮಿತಿ ಪರಿಶೀಲನೆ ನಡೆಸಿಸುತ್ತಿದೆ. ಪರಿಶೀಲನೆ ನಡೆಸಿದ ನಂತರ ತನ್ನ ಅಭಿಪ್ರಾಯ ಏನೆಂಬುದನ್ನು ಸಮಿತಿಯು ಮಂಡಿಸಬೇಕು ಎಂದು ಸೂಚಿಸಿ, ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿತು.





