ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದರೆ ಸೇವೆಯಿಂದ ವಜಾ: ಪೊಲೀಸರಿಗೆ ಗೃಹಸಚಿವ ಎಚ್ಚರಿಕೆ

ಗೃಹ ಸಚಿವ ಡಾ.ಜಿ.ಪರಮೇಶ್ವರ್ (Photo: PTI)
ಬೆಂಗಳೂರು: ಅಪರಾಧ ಚಟುವಟಿಕೆಗಳಲ್ಲಿ ಪೊಲೀಸರು ಭಾಗಿಯಾಗುವುದು ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು. ಇಲಾಖೆಯ ಸೇವೆಯಿಂದ ವಜಾಗೊಳಿಸುವುದು ಸೇರಿದಂತೆ ಮುಲಾಜಿಲ್ಲದೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹಸಚಿವ ಡಾ. ಜಿ.ಪರಮೇಶ್ವರ ಎಚ್ಚರಿಕೆ ನೀಡಿದ್ದಾರೆ.
ಎಟಿಎಂ ಹಣ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಸದಾಶಿವ ನಗರದ ನಿವಾಸದಲ್ಲಿ, ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಜಂಟಿ ಪೊಲೀಸ್ ಆಯುಕ್ತ ಅಜಯ್ ಹಿಲೋರಿ, ವಂಶಿಕೃಷ್ಣರೊಂದಿಗೆ ಪ್ರಕರಣದ ತನಿಖೆಯ ಕುರಿತು ಚರ್ಚಿಸಿದ ಬಳಿಕ ಗೃಹಸಚಿವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಪೊಲೀಸ್ ಇಲಾಖೆಯಲ್ಲಿ ಎಚ್ಚರಿಕೆ ವಹಿಸುವಂತೆ ಹಿರಿಯ ಅಧಿಕಾರಿಗಳಿಗೆ ಕೆಲ ಸೂಚನೆಗಳನ್ನು ಕೊಟ್ಟಿದ್ದೇನೆ ಎಂದು ಪರಮೇಶ್ವರ ಹೇಳಿದರು.
7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಏಳು ಆರೋಪಿಗಳನ್ನು ಬೆಂಗಳೂರು ನಗರ ಪೊಲೀಸರು ಹಿಡಿದಿದ್ದಾರೆ. ಇನ್ನು ಕೆಲವರು ಸಿಗಬೇಕಿದೆ. ಪ್ರಕರಣದಲ್ಲಿ ಇಲಾಖೆಯ ಒಬ್ಬ ವ್ಯಕ್ತಿ ಭಾಗಿಯಾಗಿದ್ದ. ಮೂರು ವಿಶೇಷ ತಂಡಗಳು ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ನಗರ ಪೊಲೀಸ್ ಆಯುಕ್ತರು ಸೇರಿದಂತೆ ಪ್ರಕರಣದ ಜವಾಬ್ದಾರಿ ವಹಿಸಿಕೊಂಡ ಇಬ್ಬರು ಜಂಟಿ ಪೊಲೀಸ್ ಆಯುಕ್ತರಿಗೆ, ಇಬ್ಬರು ಡಿಸಿಪಿಗಳು ಮತ್ತು 200ಕ್ಕೂ ಹೆಚ್ಚು ಸಿಬ್ಬಂದಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಇಂಥ ಘಟನೆಯಾದಾಗ ಯಾರು ಕೂಡ ನಂಬಲು ಸಾಧ್ಯವಾಗಿರಲಿಲ್ಲ. ಬೆಂಗಳೂರಿಗೆ ಕೆಟ್ಟ ಹೆಸರು ಬರುವ ರೀತಿ ಕೃತ್ಯ ಅಗಿತ್ತು. ಈ ಘಟನೆ ಪೊಲೀಸ್ ಇಲಾಖೆಗೂ ಸವಾಲಾಗಿತ್ತು. 6.29 ಕೋಟಿ ರೂ. ಸಿಕ್ಕಿದೆ. ಬಾಕಿ ಹಣ ಪತ್ತೆಹಚ್ಚುತ್ತಾರೆ. ಈ ಪ್ರಕರಣ ಪೊಲೀಸ್ ಇಲಾಖೆಗೆ ಸವಾಲಾಗಿತ್ತು. ತಾಂತ್ರಿಕವಾಗಿ, ಬಹಳ ಎಚ್ಚರಿಕೆಯಿಂದ ಬುದ್ಧಿ ಉಪಯೋಗಿಸಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಕೆಲಸ ಮಾಡಿ ಪ್ರಕರಣವನ್ನು ಭೇದಿಸಿದ್ದಾರೆ. ದರೋಡೆ ಮಾಡಿದವರು ಬಹಳ ಎಚ್ಚರಿಕೆಯಿಂದ ಕೃತ್ಯ ಎಸಗಿದ್ದರು. ಅದೆಲ್ಲವೂ ಕೂಡ ಈಗ ತನಿಖೆಯಿಂದ ಗೊತ್ತಾಗುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಇನ್ನುಮುಂದೆ ಇಲಾಖೆಯಲ್ಲಿ ಎಚ್ಚರಿಕೆಯಿಂದ ಇರಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈ ರೀತಿಯ ಕೃತ್ಯದಲ್ಲಿ ಯಾರಾದರು ಭಾಗಿಯಾಗುವುದು ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು. ಇಲಾಖೆಯ ಸೇವೆಯಿಂದ ವಜಾಗೊಳಿಸುವುದು ಸೇರಿದಂತೆ ಮುಲಾಜಿಲ್ಲದೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ನಿನ್ನೆ ಕೋರಮಂಗಲದಲ್ಲಿಯೂ ಘಟನೆ ನಡೆದಿದೆ. ಅರೆಸ್ಟ್ ಮಾಡಿದ್ದಾರೆ ಎಂದು ಗೃಹ ಸಚಿವರು ತಿಳಿಸಿದರು.
ಏಜೆನ್ಸಿಯವರು ಆರ್ಬಿಐ ಮಾರ್ಗಸೂಚಿಗಳನ್ನು ಪಾಲಿಸಿದ್ದಾರೆಯೇ, ಇಲ್ಲವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಇದಕ್ಕೆ ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಪಕ್ಷದಲ್ಲಿ ಮತ್ತು ಸರಕಾರದಲ್ಲಿ ಸಮಸ್ಯೆಯೇ ಇಲ್ಲ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಖರ್ಗೆಯವರನ್ನು ಭೇಟಿ ಮಾಡಿರುವ ಬಗ್ಗೆ ಮಾತನಾಡಿದ, ಪಕ್ಷದಲ್ಲಿ ಮತ್ತು ಸರಕಾರದಲ್ಲಿ ಸಮಸ್ಯೆಯೇ ಇಲ್ಲ. ಯಾರ ಮನೆಗೆ ಹೋದರೆ ಸುದ್ದಿ ಮಾಡ್ತೀರ. ಕೆಲಸ ಇರುತ್ತೆ ಹೋಗಿರುತ್ತಾರೆ. ಸತೀಶ್ ಜಾರಕಿಹೊಳಿ ಮನೇಲಿ ನಾವು ಐವರು ಸೇರಿ ಊಟ ಮಾಡಿದ್ದೆವು. ಅದು ತಪ್ಪಾ? ಭೇಟಿ ವೇಳೆ ರಾಜಕೀಯನೂ ಮಾತನಾಡಿರುತ್ತೇವೆ. ಸರಕಾರದಲ್ಲಿ ಮಂತ್ರಿಗಳಿರುವುದರಿಂದ ಇಲಾಖೆಯಲ್ಲಿ ಏನೆಲ್ಲ ಕೆಲಸಗಳಾಗಬೇಕು ಅದರ ಬಗ್ಗೆನೂ ಚರ್ಚೆ ಮಾಡ್ತಿವಿ. ಭೇಟಿಯಾದಾಗ ಏನು ಮಾತನಾಡಬಾರದೆ? ಯಾಕೆ ನಿಮಗೆ ಇಷ್ಟೊಂದು ಆಸಕ್ತಿ ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಬಿಟ್ಟು ಏನು ತೀರ್ಮಾನಗಳಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಹೈಕಮಾಂಡ್ ನವರು ಇಲ್ಲಿವರೆಗೂ ಲೀಡರ್ಶಿಪ್ ಬದಲಾವಣೆ ಆಗುತ್ತೆ, ಸಂಪುಟ ಪುನರ್ ರಚನೆ ಆಗುತ್ತೆ ಅಂತ ಯಾರಾದರು ಹೇಳಿದ್ದಾರೆಯೇ ಎಂದರು.
ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಎಐಸಿಸಿಯಿಂದ ವೀಕ್ಷಕರು ಬಂದಿದ್ದರು. ಸಿಎಲ್ಪಿ ಸಭೆಯಲ್ಲಿ ಅವರ ಮುಂದೆ ನಡೆದಿದೆ. ಸಿದ್ದರಾಮಯ್ಯ ಎರಡೂವರೆ ವರ್ಷ ಸಿಎಂ ಅಂತ ಹೇಳಿರಲಿಲ್ಲ. ಮಧ್ಯದಲ್ಲಿ ಬದಲಾಯಿಸುತ್ತಾರೆ ಎಂಬುದು ಹೈಕಮಾಂಡ್ಗೆ ಬಿಟ್ಟದ್ದು. ನಾವು ಬದಲಾವಣೆ ಮಾಡಲು ಆಗುತ್ತದೆಯೇ. ಆ ಸಂದರ್ಭ ಬಂದಾಗ ಹೈಕಮಾಂಡ್ ನವರು ಮಾಡುತ್ತಾರೆ. ಹಿಂದೆ ಎಲ್ಲ ಮಾಡಿಲ್ಲವೇ? ಬಂಗಾರಪ್ಪರನ್ನು ಬದಲಾಯಿಸಿ ವೀರಪ್ಪ ಮೊಯ್ಲಿಯವರನ್ನು ಮಾಡಿದ್ದರು. ಈಗ ಆ ಸಂದರ್ಭ ಬಂದಿದೆ ಅಂತ ನನಗೆ ಅನ್ನಿಸುತ್ತಿಲ್ಲ ಎಂದು ಹೇಳಿದರು.







