ಔದ್ಯೋಗಿಕ ಪ್ರಪಂಚಕ್ಕೆ ಬೇಕಾದ ತಾಂತ್ರಿಕ ಕೌಶಲ್ಯಗಳು ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿಲ್ಲ: ನ್ಯಾ.ನಾಗಮೋಹನ್ ದಾಸ್

ಬೆಂಗಳೂರು, ಮೇ 9: ದೇಶದಲ್ಲಿ ಪ್ರತಿವರ್ಷ ಸುಮಾರು 50 ಲಕ್ಷ ಪದವೀಧರರು ಹೊರಬರುತ್ತಿದ್ದು ಅದರಲ್ಲಿ ಕೇವಲ ಶೇ.30ರಷ್ಟು ಪದವೀಧರರು ಮಾತ್ರ ಉದ್ಯೋಗಕ್ಕೆ ಅರ್ಹರಾಗುತ್ತಿದ್ದಾರೆ. ಉಳಿದವರು ನಿರುದ್ಯೋಗಿಗಳಾಗಿದ್ದಾರೆ. ಇದಕ್ಕೆಲ್ಲ ಕಾರಣ ಇಂದಿನ ಔದ್ಯೋಗಿಕ ಪ್ರಪಂಚಕ್ಕೆ ಬೇಕಾದ ತಾಂತ್ರಿಕ ಕೌಶಲ್ಯಗಳು ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಇಲ್ಲದಿರುವುದು ಎಂದು ಹೈಕೋರ್ಟ್ನ ನಿವೃತ್ತ ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ಕಳವಳ ವ್ಯಕ್ತಪಡಿಸಿದರು.
ಶನಿವಾರ ನಗರದ ಕೆ.ಆರ್.ಪುರದಲ್ಲಿರುವ ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಎಂಬಿಎ, ಎಂಸಿಎ ಮತ್ತು ಎಂಟೆಕ್ ಸ್ನಾತಕೋತ್ತರ ಪದವಿ ಪೂರೈಸಿದ ಸುಮಾರು 250 ವಿದ್ಯಾರ್ಥಿಗಳಿಗೆ ಪದವಿಗಳನ್ನು ಪ್ರದಾನ ಮಾಡಿ ಅವರು ಮಾತನಾಡಿದರು.
ಇಂದಿನ ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲಿ ಅಸಂಖ್ಯಾತ ಉದ್ಯೋಗಗಳು ಲಭ್ಯವಿವೆ. ಆದರೆ ಅದಕ್ಕೆ ಬೇಕಾದ ಕೌಶಲ್ಯಗಳು ಇಂದಿನ ಪದವೀಧರರಲ್ಲಿ ಇಲ್ಲವಾಗಿದೆ. ಆದುದರಿಂದ, ನಮ್ಮ ಶಿಕ್ಷಣ ವ್ಯವಸ್ಥೆ ಬದಲಾಗಬೇಕಾಗಿದೆ. ಹಾಗೆ ವಿದ್ಯಾರ್ಥಿಗಳು ತಮ್ಮ ಶಿಕ್ಷಣದೊಂದಿಗೆ ಅಗತ್ಯ ಕೌಶಲ್ಯಗಳನ್ನು ಕಲಿಯಬೇಕೆಂದು ಕರೆ ನೀಡಿದರು.
ಕೇಂಬ್ರಿಡ್ಜ್ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಿ.ಕೆ.ಮೋಹನ್ ಮಾತನಾಡಿ, ನಮ್ಮ ಸಂಸ್ಥೆಯು ಅಂತರ್ರಾಷ್ಟ್ರೀಯ ಮಟ್ಟದ ಸೌಲಭ್ಯಗಳನ್ನು ಹೊಂದಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು ಎಂಬ ಮಹದಾಸೆಯನ್ನು ಹೊಂದಿದೆ. ನಮ್ಮಲ್ಲಿ ಕಲಿತ ವಿದ್ಯಾರ್ಥಿಗಳು ಕೇವಲ ಉದ್ಯೋಗಸ್ಥರಾಗದೆ ಉದ್ಯೋಗದಾತರಾಗಿ ನೂರಾರು ಜನರಿಗೆ ಉದ್ಯೋಗ ನೀಡುವಂತವರಾಗಬೇಕು ಎಂದು ಹಾರೈಸಿದರು.
ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಬಿ.ವಿ.ರವಿಶಂಕರ್ ಮಾತನಾಡಿ, ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯವು ಶಿಕ್ಷಣವಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗೆ ಮುಂದೆ ತಮ್ಮದೆ ಸಂಸ್ಥೆಗಳನ್ನು ಸ್ಥಾಪಿಸಲು ಬೇಕಾದ ಸಲಹೆ, ಸಹಕಾರ ಮತ್ತು ನೆರವನ್ನು ನೀಡಲಾಗುವುದು. ಇದಕ್ಕಾಗಿ, ಸಂಸ್ಥೆಯ ಆವರಣದಲ್ಲಿ ಹತ್ತಾರು ನವೋದ್ಯಮ ಆ್ಯಪ್ಗಳು ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಅಗತ್ಯವಾದ ತರಬೇತಿ ನೀಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದ ಸಲಹೆಗಾರ ಡಾ.ಕೆ.ಎನ್.ಬಾಲಸುಬ್ರಹ್ಮಣ್ಯ ಮೂರ್ತಿ, ಸಹಾಯಕ ನಿರ್ದೇಶಕಿ ಡಾ.ಇಂದುಮತಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ನಿತಿನ್ ಮೋಹನ್, ಪ್ರಾಂಶುಪಾಲ ಡಾ.ನಾಗೇಶ್, ಡೀನ್ ಡಾ.ಸುಬ್ರಹ್ಮಣ್ಯ ಕಟ್ಟೆ, ಡಾ.ಶಿವಪಂಚಾಕ್ಷರಿ, ಪರೀಕ್ಷಾ ನಿಯಂತ್ರಕ ಡಾ.ಮಂಜುನಾಥ ರೆಡ್ಡಿ ಮತ್ತು ಎಲ್ಲ ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.






