ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡವನ್ನು ಕಾಪಾಡಬೇಕು : ಡಿಸಿಎಂ ಡಿ.ಕೆ.ಶಿವಕುಮಾರ್

PC | X@DKShivakumar
ಬೆಂಗಳೂರು : ಇಡೀ ನವೆಂಬರ್ ತಿಂಗಳಲ್ಲಿ ಖಾಸಗಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡದ ಧ್ವಜ ಹಾರಿಸುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಶಾಲಾ ಮಕ್ಕಳ ಪಥಸಂಚಲನದಲ್ಲಿ ವಂದನೆ ಸ್ವೀಕರಿಸಿ ಹಾಗೂ ಇದಕ್ಕೂ ಮೊದಲು ವಿಧಾನಸೌಧದ ಭುವನೇಶ್ವರಿ ಪ್ರತಿಮೆ ಬಳಿ ಮಾಧ್ಯಮಗಳ ಜತೆ ಮಾತನಾಡಿದರು.
ಕರ್ನಾಟಕ ಕೇವಲ ನಾಡಲ್ಲ, ಸಂಸ್ಕೃತಿಯ ಬೀಡು. ಕನ್ನಡ ಕೇವಲ ನುಡಿಯಲ್ಲ, ನಮ್ಮ ಅಂತರಂಗದ ಮಾತು. ಕಲಿತವರಿಗೆ ಅಮೃತ, ನಡೆದವರಿಗೆ ನೆರಳು, ದಾರಿದೀಪ. ಕನ್ನಡ ಎನ್ನುವುದು ಜೀವನದ ವಿಧಾನ. ಇಂತಹ ಕನ್ನಡವನ್ನು ಇಂಗ್ಲಿಷ್ ಹಾಗೂ ಹಿಂದಿ ಭಾಷೆಯ ದಾಳಿಯಿಂದ ನಾವೆಲ್ಲರೂ ಕಾಪಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಮ್ಮ ಉಸಿರು ಕನ್ನಡ, ನಮ್ಮ ಹೆಸರು ಕನ್ನಡ, ನಮ್ಮ ಕಸುಬು ಕನ್ನಡ, ಕನ್ನಡವಿದು ಕನ್ನಡ, ಬನ್ನಿ ನಮ್ಮ ಸಂಗಡ" ಎಂದು ಗೋಪಾಲಕೃಷ್ಣ ಅಡಿಗರ ಕವನವನ್ನು ವಾಚಿಸಿದರು. ಆದಿಕವಿ ಪಂಪನಿಂದ ಹಿಡಿದು ಬಸವಣ್ಣ, ಅಲ್ಲಮಪ್ರಭು, ಕನಕದಾಸರು, ಪುರಂದರದಾಸರು, ಕುವೆಂಪು, ಬೇಂದ್ರೆ, ಮಾಸ್ತಿ ಹೀಗೆ ಸಾಹಿತ್ಯದ ದೊಡ್ಡ ಪರಂಪರೆಯನ್ನು ನಾವು ಹೊಂದಿದ್ದೇವೆ. ಈ ಎಲ್ಲಾ ಸಾಹಿತ್ಯ ಭಂಡಾರವನ್ನು ಮಕ್ಕಳು ಬಾಚಿಕೊಳ್ಳಬೇಕು ಎಂದು ಕರೆ ನೀಡಿದರು.
ಎಲ್ಲಾ ಕನ್ನಡಿಗರನ್ನು ಒಗ್ಗೂಡಿಸಬೇಕು. ಕನ್ನಡಿಗರ ತ್ಯಾಗ, ಬಲಿದಾನ, ಶ್ರಮವನ್ನು ನಾವುಗಳು ಮರೆಯಬಾರದು. ಅನೇಕ ಹಿರಿಯರು ಈ ಭಾಷೆ, ನೆಲ, ಜಲ, ಬಾವುಟದ ಗೌರವವನ್ನು ಕಾಪಾಡಿದ್ದಾರೆ. ದೇಶದ ಯಾವ ರಾಜ್ಯವೂ ಧ್ವಜ, ನಾಡಗೀತೆ ಹೊಂದಿಲ್ಲ. ಆದರೆ ನಾವು ಇವೆರಡನ್ನೂ ಹೊಂದಿದ್ದೇವೆ. ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪ್ರತಿಮೆ ಸ್ಥಾಪಿಸಿದ್ದೇವೆ. ಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಕಡ್ಡಾಯಗೊಳಿಸಿದ್ದೇವೆ. ಬೆಂಗಳೂರಿನಲ್ಲಿರುವ ಉದ್ದಿಮೆಗಳು, ಕಾರ್ಖಾನೆಗಳು, ವಾಣಿಜ್ಯ ಕೇಂದ್ರಗಳಲ್ಲಿ ರಾಜ್ಯೋತ್ಸವ ಆಚರಣೆ ಕಡ್ಡಾಯ ಮಾಡಿದ್ದೇವೆ ಎಂದರು.
ಈ ವರ್ಷ ಸಮೃದ್ಧಿಯಿಂದ ಕೂಡಿದೆ. ಮಳೆ ಇಳೆಯನ್ನು ತಂಪುಗೊಳಿಸಿದೆ. ಕೆಆರ್ ಎಸ್ ಒಂದೇ ವರ್ಷದಲ್ಲಿ ಮೂರು ಬಾರಿ ತುಂಬಿದೆ ಎಂದು ಹೇಳಿದರು.
ಜಾಗತಿಕ ಮಟ್ಟಕ್ಕೆ ಕನ್ನಡ, ಕರ್ನಾಟಕವನ್ನು ಕೊಂಡೊಯ್ಯಬೇಕು :
ಕುವೆಂಪು ಅವರು ಹೇಳಿರುವಂತೆ ಕರ್ನಾಟಕ ಶಾಂತಿಯ ತೋಟ. ನಾವೆಲ್ಲರೂ ಜಾತಿ, ಧರ್ಮಗಳನ್ನು ಬಿಟ್ಟು ಸಹಬಾಳ್ವೆಯಿಂದ ಕರ್ನಾಟಕದ ಏಳಿಗೆಗೆ ದುಡಿಯಬೇಕು. ಜಾಗತಿಕವಾಗಿ ಬೆಂಗಳೂರು ಬೆಳಗುತ್ತಿದೆ. ಪ್ರಪಂಚದ ಜನರು ನಮ್ಮನ್ನು ಗಮನಿಸುತ್ತಿದ್ದಾರೆ. ಕನ್ನಡ, ಕರ್ನಾಟಕವನ್ನು ಜಾಗತಿಕ ಮಟ್ಟಕ್ಕೆ ನಾವೆಲ್ಲರೂ ಕೊಂಡೊಯ್ಯಬೇಕು. ಭುವನೇಶ್ವರಿ ತಾಯಿ ಇಡೀ ಭೂಮಿಗೆ ಒಡತಿ. ಕರ್ನಾಟಕದ ನಾಡದೇವತೆ ಎಂದರು.
ಶಾಲಾ ಮಕ್ಕಳ ಪಥಸಂಚಲನ ನೋಡುತ್ತಿದ್ದರೆ ನನಗೂ ಸಹ ನನ್ನ ಬಾಲ್ಯದ ದಿನಗಳು ನೆನಪಾಗುತ್ತದೆ. ನಾನು ಸಹ ಇದೇ ರೀತಿ ಸಮವಸ್ತ್ರ ಧರಿಸಿ ಶಿಸ್ತಿನಿಂದ ನಡೆಯುತ್ತಿದ್ದೆ. ಬೇಸ್ ಡ್ರಮ್ ನುಡಿಸುವವನಾಗಿ ಹೆಜ್ಜೆ ಹಾಕಿದ್ದೆ. ಇದೇ ಕ್ರೀಡಾಂಗಣದಲ್ಲಿ ನಾನು ನಡೆದಾಡಿದ್ದು ನೆನಪಾಯಿತು ಎಂದು ಶಾಲಾ ದಿನವನ್ನು ಮೆಲುಕು ಹಾಕಿದರು.
ಸಾಮ್ರಾಟ್ ಅಶೋಕ ಚಕ್ರವರ್ತಿಯ ಕಾಲದಿಂದಲೂ ಕನ್ನಡದ ಹಿರಿಮೆಯಿದೆ. ಕನ್ನಡ ಹಾಗೂ ಕರ್ನಾಟಕದ ಇತಿಹಾಸವನ್ನು ಮಾಧ್ಯಮಗಳು ಅತ್ಯುತ್ತಮವಾಗಿ ವರದಿ ಮಾಡಿವೆ. ಕರ್ನಾಟಕದ ಸಮಸ್ತ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸುತ್ತೇನೆ ಎಂದರು.







