ಕರವೇ ನಾರಾಯಣಗೌಡ ಮತ್ತೆ ಪೊಲೀಸ್ ವಶಕ್ಕೆ

ಬೆಂಗಳೂರು: ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ವೇಳೆ ಕೆಲವು ಮಾಲ್ಗಳು, ಅಂಗಡಿಗಳ ನಾಮಫಲಕ ಧ್ವಂಸಗೊಳಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂಬ ಆರೋಪದ ಮೇರೆಗೆ ಬಂಧನಕ್ಕೊಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಾಣಗೌಡ ಅವರು ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಮರುಕ್ಷಣವೇ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ.
2017ರ ಹಳೆ ಪ್ರಕರಣ ಸಂಬಂಧ ಮತ್ತೆ ವಶಕ್ಕೆ ಪಡೆದಿರುವ ಪೊಲೀಸರು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. 2017ರಲ್ಲಿ ಕರವೇ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಮೆಟ್ರೋ ನಾಮಫಲಕಕ್ಕೆ ಮಸಿ ಬಳಿದ ಹಿನ್ನೆಲೆಯಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ಅವರ ವಿರುದ್ಧ ದೂರು ದಾಖಲಾಗಿತ್ತು.
ಈ ಸಂಬಂಧ ಜಾಮೀನು ರಹಿತ ವಾರೆಂಟ್ ಸಹ ಜಾರಿ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಇದೀಗ ನಾರಾಯಣಗೌಡ ಅವರನ್ನು ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.





