ಕೋರ್ಟ್ ಕಟ್ಟಡ, ನ್ಯಾಯಾಧೀಶರ ವಸತಿ ಗೃಹಕ್ಕಾಗಿ 175 ಕೋಟಿ ರೂ.

ಬೆಂಗಳೂರು : ನ್ಯಾಯಾಂಗ ವ್ಯವಸ್ಥೆಯನ್ನು ಸುಧಾರಣೆಗೊಳಿಸಲು ಮೂಲಭೂತ ಸೌಕರ್ಯಗಳಾದ ಕೋರ್ಟ್ ಕಟ್ಟಡ ಹಾಗೂ ನ್ಯಾಯಾಧೀಶರಿಗೆ ವಸತಿ ಗೃಹ ನಿರ್ಮಾಣಕ್ಕಾಗಿ 175 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕಳೆದ ಸಾಲಿನಲ್ಲಿ ವಿಶೇಷ ಲೋಕ್ ಅದಾಲತ್ಗಳನ್ನು ನಡೆಸಿ 2.82 ಕೋಟಿ ಸಿವಿಲ್ ಪ್ರಕರಣಗಳನ್ನು ಮತ್ತು 1,113 ಭೂಸ್ವಾಧೀನ ಪ್ರಕರಣಗಳನ್ನು ಅನುಕ್ರಮವಾಗಿ 9,978 ಕೋಟಿ ರೂ. ಮತ್ತು 132 ಕೋಟಿ ರೂ.ಗಳ ಪರಿಹಾರದ ಮೊತ್ತದೊಂದಿಗೆ ಇತ್ಯರ್ಥಪಡಿಸಲಾಗಿದೆ. ಜತೆಗೆ, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಜಿಲ್ಲಾ ನ್ಯಾಯಾಲಯ ಸಂಕೀರ್ಣವನ್ನು ನಿರ್ಮಾಣ ಮಾಡಲಾಗುವುದು ಎಂದು ಉಲ್ಲೇಖಿಸಿದರು.
ಕಾಗದರಹಿತ, ಸಮರ್ಥ ಮತ್ತು ನಾಗರಿಕ-ಕೇಂದ್ರಿತ ನ್ಯಾಯಾಂಗವನ್ನು ಜಾರಿಗೊಳಿಸಲು ಬೆಂಗಳೂರು, ಧಾರವಾಡ, ಕಲಬುರಗಿ ಮತ್ತು ಮೈಸೂರು ನಗರಗಳಲ್ಲಿ ಪ್ರಾಯೋಗಿಕವಾಗಿ ʻಇ-ಕೋರ್ಟ್ʼ ಗಳನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಅಡ್ವೋಕೇಟ್ ಜನರಲ್ ಕಚೇರಿಗೆ ಗ್ರಂಥಾಲಯ, ವಿ.ಸಿ. ಸೌಲಭ್ಯ ಒದಗಿಸಲು ಹಾಗೂ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಕಚೇರಿಗಳಲ್ಲಿನ ಸಿಸಿಎಂಎಸ್ ಮತ್ತು ಇ-ಫೈಲಿಂಗ್ ಗೆ ಅಗತ್ಯವಿರುವ ಮೂಲ ಸೌಕರ್ಯವನ್ನು ಉನ್ನತೀಕರಿಸಲು 5 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದರು.
ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಮಧ್ಯಸ್ಥಿಕೆ ಮೂಲಕ ಇತ್ಯರ್ಥಗೊಳಿಸಿ ಕಡಿಮೆ ಮಾಡಬಹುದಾಗಿದ್ದು, ಮಧ್ಯಸ್ಥಿಕೆಯಲ್ಲಿ ಆಸಕ್ತಿ ಇರುವ ನ್ಯಾಯಾಧೀಶರು ಮತ್ತು ವಕೀಲರಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಸರಕಾರದಿಂದ ರಚಿಸಲ್ಪಡುವ ಎಲ್ಲ ಕಾನೂನುಗಳನ್ನು ಕನ್ನಡದಲ್ಲಿ ಸಿದ್ಧಪಡಿಸಲಾಗುವುದು. ಅಲ್ಲದೇ, ಕೇಂದ್ರ ಸರಕಾರವು ಇಲ್ಲಿಯವರೆಗೂ ಅಧಿನಿಯಮಿಸಿದ ಎಲ್ಲ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರಿಸಲಾಗುವುದು ಎಂದು ಅವರು ಪ್ರಕಟಿಸಿದರು.
ಎಸ್ಟಿ ಆಯೋಗ ರಚನೆ, 50 ಕೋಟಿ ವೆಚ್ಚದಲ್ಲಿ ಮಹರ್ಷಿ ವಾಲ್ಮೀಕಿ ಆಡಳಿತ ಸೌಧ
ಪರಿಶಿಷ್ಟ ಪಂಗಡದ ಸಮುದಾಯದವರ ಹಕ್ಕುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅವರ ದೂರು ಮತ್ತು ಸಮಸ್ಯೆಗಳನ್ನು ಆಲಿಸಲು ಪ್ರತ್ಯೇಕವಾಗಿ ಪರಿಶಿಷ್ಟ ಪಂಗಡಗಳ ಆಯೋಗ ರಚಿಸಲಾಗುವುದು. ಜತೆಗೆ, ಪರಿಶಿಷ್ಟ ಪಂಗಡಗಳ ಇಲಾಖೆ ಮತ್ತು ನಿರ್ದೇಶನಾಲಯದಡಿ ಬರುವ ನಿಗಮ ಮತ್ತು ಇತರೆ ಕಚೇರಿಗಳಿಗಾಗಿ ಬೆಂಗಳೂರಿನ ಸುಮನಹಳ್ಳಿಯಲ್ಲಿ “ಶ್ರೀ ಮಹರ್ಷಿ ವಾಲ್ಮೀಕಿ ಆಡಳಿತ ಸೌಧ” ಸಂಕೀರ್ಣವನ್ನು 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
2026-27ನೆ ಸಾಲಿನಲ್ಲಿ ಪರಿಶಿಷ್ಟ ಪಂಗಡದ 150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಹೊಸದಾಗಿ ಪ್ರಾರಂಭಿಸಲಾಗುವುದು. ಪರಿಶಿಷ್ಟ ಪಂಗಡಗಳ ನಿರುದ್ಯೋಗಿ ಯುವಕ, ಯುವತಿಯರಿಗೆ ಫಾಸ್ಟ್ ಫುಡ್ ಟ್ರಕ್ ಟ್ರೈಲರ್, ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್ ಸೌಲಭ್ಯಗಳನ್ನು ನಿಗಮಗಳ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಘಟಕ ವೆಚ್ಚದ ಶೇ.75 ರಷ್ಟು ಅಥವಾ ಗರಿಷ್ಠ ನಾಲ್ಕು ಲಕ್ಷ ರೂ.ಗಳ ಸಹಾಯಧನ ನೀಡಲಾಗುವುದು ಎಂದರು.
ಪರಿಶಿಷ್ಟ ಪಂಗಡದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಆಶ್ರಮ ಶಾಲೆಗಳಲ್ಲಿನ ವಿದ್ಯಾರ್ಥಿಗಳ ಆರೈಕೆಗಾಗಿ 119 ಮಹಿಳಾ ಕೇರ್ಟೇಕರ್ ಹುದ್ದೆಗಳನ್ನು ಮಂಜೂರು ಮಾಡಲಾಗುವುದು. ಇದಕ್ಕಾಗಿ 3 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದೂ ಅವರು ಉಲ್ಲೇಖಿಸಿದರು.
ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪನೆ:
ಅರಣ್ಯ ಮತ್ತು ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಇರುಳ, ಸೋಲಿಗ, ಜೇನುಕುರುಬ, ಕಾಡುಕುರುಬ, ಕುಡಿಯ, ಸಿದ್ದಿ ಮತ್ತು ಇತರೆ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ʻಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮʼವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.







