ಕೋಗಿಲು ಬಡಾವಣೆ ಒತ್ತುವರಿ ಪ್ರಕರಣ: ನಾಲ್ವರ ವಿರುದ್ಧ ಎಫ್ಐಆರ್ ದಾಖಲು

ಕೋಗಿಲು ಬಡಾವಣೆ ಒತ್ತುವರಿ ಪ್ರಕರಣ
ಬೆಂಗಳೂರು : ಕೋಗಿಲು ಬಡಾವಣೆಯಲ್ಲಿ ಸರಕಾರಿ ಜಾಗ ಒತ್ತುವರಿ ಮಾಡಿ ಮನೆಗಳ ನಿರ್ಮಾಣಕ್ಕೆ ಪ್ರಚೋದನೆ ನೀಡಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಿದ ಆರೋಪದಡಿ ನಾಲ್ವರ ವಿರುದ್ಧ ಇಲ್ಲಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್(ಬಿಎಸ್ಡಬ್ಲ್ಯೂಎಂಎಲ್)ನ ಇಂಜಿನಿಯರ್ ಸಂತೋಷ್ ಕುಮಾರ್ ಅವರು ನೀಡಿದ ದೂರಿನನ್ವಯ ವಿಜಯ್, ವಾಸಿಂ ಉಲ್ಲಾ ಬೇಗ್, ಮುನಿ ಆಂಜಿನಪ್ಪ ಹಾಗೂ ರಾಬಿನ್ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಹಿನ್ನೆಲೆ: ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶದ ಪ್ರಕಾರ ಯಲಹಂಕದ ಕೋಗಿಲು ಬಡಾವಣೆಯ ಸರ್ವೆ ನಂಬರ್ 99ರಲ್ಲಿರುವ 14 ಎಕರೆ 36 ಗುಂಟೆ ಜಮೀನನ್ನು ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆಗೆ ಹಸ್ತಾಂತರಿಸಲಾಗಿತ್ತು. ಆ ಜಾಗದಲ್ಲಿ ಬಯೋ ಮೆಥನೈಸೆಷನ್ ಘಟಕ, ಎಳನೀರು ಚಿಪ್ಪು ಸಂಸ್ಕರಣೆ ಹಾಗೂ ಪ್ರಾಣಿ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ನಿರ್ಮಿಸಲು 2023ರಲ್ಲಿಯೇ ಟೆಂಡರ್ ಪ್ರಕ್ರಿಯೆ ಮುಗಿದು ಕಾರ್ಯಾದೇಶ ನೀಡಲಾಗಿತ್ತು.
ಆದರೆ, ಆ ಜಾಗದ ಸುಮಾರು 4 ಎಕರೆ ಪ್ರದೇಶವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಅಲ್ಲಿ ನಿರ್ಮಿಸಲಾಗಿದ್ದ ಸುಮಾರು 160ಕ್ಕೂ ಹೆಚ್ಚು ಮನೆಗಳನ್ನು ಡಿಸೆಂಬರ್ 20 ರಂದು ಜಿಲ್ಲಾಡಳಿತ ಮತ್ತು ಬಿಎಸ್ಡಬ್ಲ್ಯೂಎಂಎಲ್ ಜಂಟಿ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದ್ದವು.
ಆರೋಪಿಗಳು ಸ್ಥಳೀಯರಿಂದ ಹಣ ಪಡೆದು ಸರಕಾರಿ ಜಾಗದಲ್ಲಿ ಅನಧಿಕೃತ ಮನೆಗಳನ್ನು ನಿರ್ಮಿಸಲು ಮತ್ತು ಅವುಗಳನ್ನು ನಿರ್ವಹಿಸಲು ಸಹಕಾರ ನೀಡುತ್ತಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ನಾಲ್ವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ, ಯಲಹಂಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿರುವುದಾಗಿ ತಿಳಿಸಿದ್ದಾರೆ.







