ಬಿಡಾಡಿ ವಾಹನಗಳ ತೆರವು ಕಾರ್ಯಕ್ಕೆ ಸಮಗ್ರ ಆಕ್ಷನ್ ಪ್ಲಾನ್ ರೂಪಿಸಿ : ಕೃಷ್ಣಬೈರೇಗೌಡ

ಬೆಂಗಳೂರು : ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿರುವ ಬಿಡಾಡಿ ವಾಹನಗಳ ತೆರವು ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಸಮಗ್ರ ಆಕ್ಷನ್ ಪ್ಲಾನ್ ರೂಪಿಸಿ, ಪಾಲಿಕೆವಾರು ಕಾರ್ಯಾಚರಣೆ ವೇಳಾಪಟ್ಟಿಯನ್ನು ಸಿದ್ಧಪಡಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ನಗರದಲ್ಲಿ ಬಿಡಾಡಿ ವಾಹನಗಳ ತೆರವು ಕಾರ್ಯಾಚರಣೆ, ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಮಂಗಳವಾರ ಅಧಿಕಾರಿಗಳೊಂದಿಗೆ ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಡಾಡಿ ವಾಹನಗಳ ತೆರವು ಕಾರ್ಯವನ್ನು ಮತ್ತಷ್ಟು ವೇಗಗೊಳಿಸಲು ನಗರ ಪಾಲಿಕೆ ಅಧಿಕಾರಿಗಳು ಸಮಗ್ರ ಕಾರ್ಯಯೋಜನೆ ರೂಪಿಸಿ, ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಬಿಡಾಡಿ ವಾಹನಗಳ ತೆರವು ಕಾರ್ಯಕ್ಕೆ ಸಂಬಂಧಿಸಿದಂತೆ ಕೆಳಹಂತದ ಅಧಿಕಾರಿಗಳ ಕಾರ್ಯಕ್ಷಮತೆಯ ಮೇಲೆ ಹಿರಿಯ ಅಧಿಕಾರಿಗಳು ನಿರಂತರ ಮೇಲ್ವಿಚಾರಣೆ ನಡೆಸಬೇಕು. ಕಾರ್ಯಗಳ ಪ್ರಗತಿಯನ್ನು ನಿಯಮಿತವಾಗಿ ಪರಿಶೀಲಿಸಿ, ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೃಷ್ಣ ಬೈರೇಗೌಡ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಿಡಾಡಿ ವಾಹನಗಳ ತೆರವು ಕಾರ್ಯದಲ್ಲಿ ಪೊಲೀಸ್ ಹಾಗೂ ನಗರ ಪಾಲಿಕೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಈವರೆಗೆ ಗುರುತಿಸಿರುವ, ದಂಡ ಪಾವತಿಸಿ ಬಿಡುಗಡೆ ಮಾಡಿರುವ ಹಾಗೂ ಟೋಯಿಂಗ್ ಮಾಡಿರುವ ವಾಹನಗಳ ಕುರಿತು ನಿಖರ ಮಾಹಿತಿಯನ್ನು ಸಲ್ಲಿಸಬೇಕು. ನೋಟಿಸ್ ಅಂಟಿಸಿ ಟೋಯಿಂಗ್ ಮಾಡಿದ ನಂತರ 15 ದಿನಗಳು ಕಳೆದಿರುವ ಬಿಡಾಡಿ ವಾಹನಗಳನ್ನು ಹರಾಜು ಮಾಡುವ ಸಲುವಾಗಿ ಪತ್ರಿಕಾ ಪ್ರಕಟನೆ ನೀಡುವಂತೆ ನಗರ ಪಾಲಿಕೆ ಆಯುಕ್ತರಿಗೆ ಕೃಷ್ಣ ಬೈರೇಗೌಡ ಸೂಚನೆ ನೀಡಿದರು.
ಬಿಡಾಡಿ ವಾಹನಗಳ ತೆರವು ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಪ್ರತಿ ಸಂಚಾರಿ ಪೊಲೀಸ್ ಠಾಣೆಗೆ ಈ ಕಾರ್ಯಕ್ಕಾಗಿ ಪ್ರತ್ಯೇಕವಾಗಿ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು. ಅಲ್ಲದೆ, ಪೊಲೀಸ್ ಇಲಾಖೆ ಗುರುತಿಸಿರುವ ಬಿಡಾಡಿ ವಾಹನಗಳಿಗೆ ನೋಟಿಸ್ ಅಂಟಿಸುವ ಕಾರ್ಯದಲ್ಲಿ ವಾರ್ಡ್ ಅಧಿಕಾರಿಗಳೊಂದಿಗೆ ಮಾರ್ಷಲ್ಗಳನ್ನು ಸಹ ನಿಯೋಜಿಸುವಂತೆ ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ನಿರ್ದೇಶನ ನೀಡಿದರು.
ನಗರದಲ್ಲಿ ಇದುವರೆಗೆ 773 ಕಿ.ಮೀ. ಪಾದಚಾರಿ ಮಾರ್ಗಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸುವವರ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸಬೇಕು. ತೆರವುಗೊಳಿಸಿದ ನಂತರ ಮರು ಅತಿಕ್ರಮಣ ನಡೆಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದರ ಜೊತೆಗೆ, ನಿಯಮಾನುಸಾರ ದಂಡ ವಿಧಿಸುವಂತೆ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.
ಪಾದಚಾರಿ ಮಾರ್ಗಗಳಲ್ಲಿ ಒತ್ತುವರಿ ತೆರವುಗೊಳಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ಪಾರ್ಕ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಕಡಿವಾಣ ಹಾಕಬೇಕು. ಅಗತ್ಯಕ್ಕಿಂತ ಹೆಚ್ಚು ಅಗಲವಿರುವ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸುಂದರೀಕರಣ ಹಾಗೂ ನಾಗರಿಕ ಸ್ನೇಹಿ ಮೂಲಸೌಕರ್ಯ ಅಭಿವೃದ್ಧಿಗೆ ಅವಕಾಶ ಕಲ್ಪಿಸುವ ಕುರಿತು ಪರಿಶೀಲನೆ ನಡೆಸುವಂತೆ ಕೃಷ್ಣ ಬೈರೇಗೌಡ ಸೂಚನೆ ನೀಡಿದರು.
ಬೆಂಗಳೂರು ಪೊಲೀಸ್ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಮಾತನಾಡಿ, ನಗರದಲ್ಲಿ ಪೊಲೀಸ್ ಇಲಾಖೆಯಿಂದ 2,533 ಹಾಗೂ ನಾಗರಿಕರಿಂದ 4,043 ಸೇರಿ ಒಟ್ಟು 6,576 ಬಿಡಾಡಿ ವಾಹನಗಳನ್ನು ಗುರುತಿಸಲಾಗಿದೆ. ಈ ಪೈಕಿ 1,605 ವಾಹನಗಳಿಗೆ ನೋಟಿಸ್ ಅಂಟಿಸಲಾಗಿದ್ದು, 263 ವಾಹನಗಳನ್ನು ಟೋಯಿಂಗ್ ಮಾಡಲಾಗಿದೆ. ನೋಟಿಸ್ ಅಂಟಿಸಿದ ಹಾಗೂ ಟೋಯಿಂಗ್ ಮಾಡಿದ ವಾಹನಗಳ ಮಾಲೀಕರು 2.16 ಲಕ್ಷ ರೂ. ದಂಡ ಪಾವತಿಸಿ ತಮ್ಮ ವಾಹನಗಳನ್ನು ಬಿಡುಗಡೆ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯಾಚರಣೆ ನಡೆಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ನಗರ ಪಾಲಿಕೆ ಆಯುಕ್ತರಾದ ರಮೇಶ್ ಡಿ.ಎಸ್., ಪೆÇಮ್ಮಲ ಸುನೀಲ್ ಕುಮಾರ್, ರಮೇಶ್ ಕೆ.ಎನ್., ಡಾ.ರಾಜೇಂದ್ರ ಕೆ.ವಿ. ಹಾಗೂ ಜಿ. ಜಗದೀಶ್, ಅಪರ ಆಯುಕ್ತರು, ಮುಖ್ಯ ಇಂಜಿನಿಯರ್ಗಳು, ಕಾರ್ಯಪಾಲಕ ಇಂಜಿನಿಯರ್ಗಳು, ವಿದ್ಯುತ್ ವಿಭಾಗದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ವರ್ಚುವಲ್ ಮೂಲಕ ಭಾಗವಹಿಸಿದ್ದರು.






