2028ರಲ್ಲಿ ಪುನಃ ಕಾಂಗ್ರೆಸ್ ಅಧಿಕಾರಕ್ಕೆ ತರುವುದೆ ನಮಗೆ ಮುಖ್ಯ : ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ಸದ್ಯದ ರಾಜಕೀಯ ಬೆಳವಣಿಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಅದೇನಿದ್ದರೂ ಹೈಕಮಾಂಡ್ ಗೆ ಬಿಟ್ಟ ವಿಚಾರ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವುದೆ ನಮಗೆಲ್ಲರಿಗೂ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಮಂಗಳವಾರ ನಗರದ ಅರಮನೆ ಮೈದಾನದಲ್ಲಿ ನ.28ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸಿದ ಬಳಿಕ ಮಾಧ್ಯಮಗಳ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.
ನಾನು ಕಾರ್ಯಕ್ರಮದ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದೇನೆ. ಬೆಳಗ್ಗೆ ಮುಖ್ಯಮಂತ್ರಿಗೆ ಆಮಂತ್ರಣ ನೀಡಿ ಬಂದೆ, ಈಗ ಉಪ ಮುಖ್ಯಮಂತ್ರಿಗೆ ಆಹ್ವಾನ ನೀಡಿದ್ದೇನೆ. ಹಾಗಾಗಿ ಬೇರೆ ವಿಷಯಗಳ ಬಗ್ಗೆ ನಾನೇನು ಮಾತನಾಡಲಾರೆ ಎಂದು ಅವರು ಹೇಳಿದರು.
ಇದೇ ಶುಕ್ರವಾರ ಅರಮನೆ ಮೈದಾನದಲ್ಲಿ ನಡೆಯುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಸಂದರ್ಭದಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ಉದ್ಘಾಟನೆ, ಅಕ್ಕಪಡೆಗೆ ಚಾಲನೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳ ಆರಂಭ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ಮಾಹಿತಿ ನೀಡಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ನಾಯಕರು ಭಾಗವಹಿಸಲಿದ್ದಾರೆ. ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಲಾಗಿದ್ದು, ಅವರ ಆಗಮನದ ಕುರಿತು ಇನ್ನಷ್ಟೇ ಖಚಿತವಾಗಬೇಕಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.







