ಬಿಜೆಪಿಯವರಿಗೆ ಪಾದಯಾತ್ರೆ ಮಾಡುವ ನೈತಿಕ ಹಕ್ಕಿಲ್ಲ : ಲಕ್ಷ್ಮಣ್ ಸವದಿ

ಬೆಂಗಳೂರು : ಭ್ರಷ್ಟಾಚಾರ ವಿರುದ್ಧ ಬಿಜೆಪಿ ನಾಯಕರು ಪಾದಯಾತ್ರೆ ಮಾಡುತ್ತಿರುವುದು ನೋಡಿದರೆ ನಗು ಬರುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ಮಂಗಳವಾರ ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಪಾದಯಾತ್ರೆ ಮಾಡುವ ನೈತಿಕ ಹಕ್ಕಿಲ್ಲ. ಪಾದಯಾತ್ರೆ ಮಾಡುತ್ತಿರುವವರು ನೂರು ಪಟ್ಟು ಇವರಿಗಿಂತ ಅಕ್ರಮ ಮಾಡಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳಿದ್ದಾರೆ. ಹಿಂದೆ ಅಧಿಕಾರದಲ್ಲಿದ್ದಾಗ ಬಿಜೆಪಿಯವರು ಏನು ಮಾಡಿದ್ದರು ಎಂಬುದು ಗೊತ್ತಿದೆ ಎಂದು ಟೀಕಿಸಿದರು.
ಒಂದು ಬೆರಳು ತೋರಿಸಿದಾಗ ನಾಲ್ಕು ಬೆರಳು ನಮ್ಮ ಕಡೆ ತೋರಿಸುತ್ತಿರುತ್ತವೆ. ಬಿಜೆಪಿಯವರ ಘೋxಣೆ, ಆರೋಪ ನೋಡಿದರೆ ನಗು ಬರುತ್ತಿದೆ ಎಂದ ಅವರು, ಸಂಪುಟ ಪುನರ್ರಚನೆ ಹೈಕಮಾಂಡ್ ಮತ್ತು ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದರು.
ಮುಡಾ ಪ್ರಕರಣವೂ 20 ವರ್ಷಗಳ ಹಳೆಯದಾಗಿದೆ. ಹಿಂದುಳಿದ ವರ್ಗದ ಪ್ರಭಾವಿಯಾಗಿರುವ ಸಿದ್ದರಾಮಯ್ಯನವರ ವರ್ಚಸ್ಸು ಕುಗ್ಗಿಸಲು ಸಂಚು ನಡೆದಿದೆ.ಅಲ್ಲದೆ, ರಾಜ್ಯಪಾಲರು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆಂದು ಜನರೇ ಮಾತನಾಡಿಕೊಳ್ಳುತ್ತಿದ್ದಾರೆ. ರಾಜ್ಯಪಾಲರು ಅನುಭವಿಗಳು. ಕೇಂದ್ರದಲ್ಲಿ ಅನೇಕ ವರ್ಷಗಳ ಕಾಲ ಮಂತ್ರಿಯಾಗಿ ಕೆಲಸ ಮಾಡಿದವರು. ನಾನು ಅವರನ್ನು ಹತ್ತಿರದಿಂದ ನೋಡಿದ್ದೇನೆ. ಹಾಗಾಗಿ ಪ್ರಾಸಿಕ್ಯೂಷನ್ಗೆ ಅನುಮತಿ ಕೊಡಲ್ಲ ಅನ್ನುವ ವಿಶ್ವಾಸ ಇದೆ ಎಂದು ಹೇಳಿದರು.







