ವಿಧಾನ ಪರಿಷತ್ ಚುನಾವಣೆ : 12 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಬೆಂಗಳೂರು : ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಜೂ.13ರಂದು ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸಹಿತ ಒಟ್ಟು 12 ಅಭ್ಯರ್ಥಿಗಳಿಂದ 27 ನಾಮಪತ್ರಗಳು ಸಲ್ಲಿಕೆಯಾಗಿವೆ.
ಸೋಮವಾರ ವಿಧಾನಸೌಧದಲ್ಲಿ ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ಆಡಳಿತರೂಢ ಕಾಂಗ್ರೆಸ್ ಪಕ್ಷದಿಂದ 7, ಪ್ರತಿಪಕ್ಷ ಬಿಜೆಪಿಯಿಂದ 3 ಹಾಗೂ ಜೆಡಿಎಸ್ ಪಕ್ಷದಿಂದ ಒಬ್ಬ ಅಭ್ಯರ್ಥಿ ಇಂದು ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಅಭ್ಯರ್ಥಿಗಳಾಗಿ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಎರಡು ನಾಮಪತ್ರ, ಸಚಿವ ಎನ್.ಎಸ್. ಭೋಸರಾಜು ಮೂರು ನಾಮಪತ್ರ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು ಎರಡು ನಾಮಪತ್ರ, ಎ.ವಸಂತ ಕುಮಾರ್ ಮೂರು ನಾಮಪತ್ರ, ವಿಧಾನಪರಿಷತ್ ಮಾಜಿ ಸದಸ್ಯ ಐವಾನ್ ಡಿ’ಸೋಜ ಮೂರು ನಾಮಪತ್ರ, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷೆ ಬಲ್ಕೀಸ್ ಬಾನು ಎರಡು ನಾಮಪತ್ರ ಮತ್ತು ಜಗದೇವ್ ಗುತ್ತೇದಾರ್ ಒಂದು ನಾಮಪತ್ರ ಸಲ್ಲಿಕೆ ಮಾಡಿದರು.
ಬಿಜೆಪಿ ಅಭ್ಯರ್ಥಿಗಳಾಗಿ ಮಾಜಿ ಸಚಿವ ಸಿ.ಟಿ.ರವಿ ಎರಡು ನಾಮಪತ್ರ, ವಿಧಾನಪರಿಷತ್ ಮಾಜಿ ಸದಸ್ಯ ಎನ್.ರವಿಕುಮಾರ್ ಎರಡು ನಾಮಪತ್ರ ಮತ್ತು ಎಂ.ಜಿ.ಮುಳೆ ಮಾರುತಿರಾವ್ ಎರಡು ನಾಮಪತ್ರ ಸಲ್ಲಿಸಿದರು.
ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಟಿ.ಎನ್.ಜವರಾಯಿ ಗೌಡ ಮೂರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಯಶವಂತಪುರ ಕ್ಷೇತ್ರದಿಂದ ಕಳೆದ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜವರಾಯಿ ಗೌಡ ಪರಾಭವಗೊಂಡಿದ್ದರು. ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಸೋಮವಾರ ಬೆಳಗ್ಗೆ ವಿಧಾನಸೌಧದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಸಿ, ಜವರಾಯಿಗೌಡ ಹೆಸರನ್ನು ಅಂತಿಮಗೊಳಿಸಲಾಯಿತು. ಆನಂತರ, ಅವರು ನಾಮಪತ್ರ ಸಲ್ಲಿಸಿದರು.
ನಾಳೆ ನಾಮಪತ್ರ ಪರಿಶೀಲನೆ: ಮೇ 31ರಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಸಿಫ್ ಪಾಷಾ ಆರ್.ಎಂ. ಎಂಬವರು ಒಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮಂಗಳವಾರ(ಜೂ.4)ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಆಸಿಫ್ ಪಾಷಾ ಸಲ್ಲಿಸಿರುವ ನಾಮಪತ್ರಕ್ಕೆ ಯಾವುದೆ ಸೂಚಕರಿಲ್ಲದೆ ಇರುವುದರಿಂದ ನಾಮಪತ್ರ ತಿರಸ್ಕೃತಗೊಳ್ಳುವ ಸಾಧ್ಯತೆಯಿದೆ. ಜೂ.6ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂ.13ರಂದು ಚುನಾವಣೆ ನಡೆಯಲಿದೆ.
ಅವಿರೋಧ ಆಯ್ಕೆ ಸಾಧ್ಯತೆ?: ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ 12 ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದು, ಸೂಚಕರಿಲ್ಲದೆ ಆಸಿಫ್ ಪಾಷಾ ನಾಮಪತ್ರ ತಿರಸ್ಕೃತಗೊಳ್ಳುವ ಸಾಧ್ಯತೆಗಳಿರುವುದರಿಂದ 11 ಸ್ಥಾನಗಳಿಗೂ ಚುನಾವಣೆಯಿಲ್ಲದೆ ಅವಿರೋಧ ಆಯ್ಕೆಯಾಗುವ ಸಾಧ್ಯತೆಯಿದೆ. ಜೂ.6ರ ಬಳಿಕ ಅವಿರೋಧ ಆಯ್ಕೆಯನ್ನು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆಗಳಿವೆ.