ಸವಳು-ಜವಳು ಭೂಮಿಗೆ ಶೀಘ್ರದಲ್ಲಿ ಅನುದಾನ ಬಿಡುಗಡೆ: ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು, ಜ.28: ಸವಳು-ಜವಳು ಬಾಧಿತ ಭೂಪ್ರದೇಶ ಅಭಿವೃದ್ಧಿಗೆ ಶೀಘ್ರದಲ್ಲಿಯೇ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಭರಮಗೌಡ ಕಾಗೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿತ ಕೇಂದ್ರದಲ್ಲಿರುವ ದತ್ತಾಂಶದನ್ವಯ ಸುಮಾರು 77646.6 ಹೆಕ್ಟೇರ್ ಮಳೆಯಾಶ್ರಿತ ಪ್ರದೇಶವು ಸವಳು-ಜವಳು ಬಾದಿತವಾಗಿದೆ. ಇದರಲ್ಲಿ ಉತ್ತರ ಕರ್ನಾಟಕದ ಒಟ್ಟು 13 ಜಿಲ್ಲೆಗಳಲ್ಲಿ ಸವಳು-ಜವಳು ಬಾಧಿತ ಪ್ರದೇಶ 56621.34 ಹೆಕ್ಟೇರ್ಗಳಿದೆ ಎಂದರು.
ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ಮಳೆಯಾಶ್ರಿತ ಪ್ರದೇಶದಲ್ಲಿ(ಅಚ್ಚುಕಟ್ಟು ಪ್ರದೇಶವನ್ನು ಹೊರತುಪಡಿಸಿ) ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ-ಸಮಸ್ಯಾತ್ಮಕ ಮಣ್ಣುಗಳ ಸುಧಾರಣೆ ಕಾರ್ಯಕ್ರಮದಡಿ 2016-17ನೆ ಸಾಲಿನಿಂದ 2025-26ನೆ ಸಾಲಿನವರೆಗೆ ಒಟ್ಟು 31.43 ಕೋಟಿ ರೂ.,ಗಳ ವೆಚ್ಚದಲ್ಲಿ ಸವಳು-ಜವಳು ಬಾಧಿತ ಪ್ರದೇಶಗಳಲ್ಲಿ ಬಸಿ ಕಾಲುವೆ ನಿರ್ಮಾಣ ಮೂಲಕ ಮಣ್ಣಿನ ಸುಧಾರಣೆಗೆ ಒಟ್ಟು 4208.19 ಹೆಕ್ಟೇರ್ ಪ್ರದೇಶದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
2024-25ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ಘೋಷಿಸಿದ್ದಂತೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ಒಟ್ಟು 53.98 ಹೆಕ್ಟೇರ್ ಸವಳು-ಜವಳು ಪ್ರದೇಶವನ್ನು 20.03 ಲಕ್ಷ ರೂ., ವೆಚ್ಚದೊಂದಿಗೆ ಉಪಚರಿಸಿದ್ದು, 5,992 ಮಾನವ ದಿನಗಳನ್ನು ಸೃಜಿಸಲಾಗಿರುತ್ತದೆ ಎಂದು ಉಲ್ಲೇಖಿಸಿದರು.
2025-26ನೆ ಸಾಲಿನಲ್ಲಿ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ-ಸಮಸ್ಯಾತ್ಮಕ ಮಣ್ಣುಗಳ ಸುಧಾರಣೆ ಕಾರ್ಯಕ್ರಮಕ್ಕೆ ಈಗಾಗಲೇ ಕೇಂದ್ರ ಸಚಿವರನ್ನು ಸಹ ಭೇಟಿ ಮಾಡಿ ಅನುದಾನ ಕೋರಲಾಗಿದೆ. 4.18 ಕೋಟಿ ರೂ. ಹೆಚ್ಚುವರಿ ಅನುದಾನಕ್ಕೆ ಅನುಮೋದನೆ ದೊರೆತಿದ್ದು, ಅನುದಾನವನ್ನು ನಿರೀಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದರು.







