‘ರಾಜ್ಯದಲ್ಲಿ ಉರ್ದು ಮಾಧ್ಯಮ ಶಿಕ್ಷಣದ ಸ್ಥಿತಿಗತಿ: ಅಧ್ಯಯನ ವರದಿ-2025’ ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯದಲ್ಲಿ ಉರ್ದು ಮಾಧ್ಯಮದಲ್ಲಿ ಶಿಕ್ಷಣದ ಸ್ಥಿತಿಗತಿ, ಸಮಸ್ಯೆಗಳು ಹಾಗೂ ಅಗತ್ಯ ಸುಧಾರಣೆಗಳಿಗೆ ಸಂಬಂಧಿಸಿದಂತೆ ಸಿದ್ಧಪಡಿಸಿರುವ ‘ಅಧ್ಯಯನ ವರದಿ-2025’ ಅನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸ್ವೀಕರಿಸಿದರು.
ರಾಜ್ಯದ ಅಂಜುಮನ್ ತರಖ್ಖಿ ಉರ್ದು(ಹಿಂದ್) ಸಂಸ್ಥೆ ವತಿಯಿಂದ ಸಿದ್ಧಪಡಿಸಲಾಗಿರುವ ಅಧ್ಯಯನ ವರದಿಯನ್ನು ವಿಧಾನಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರ ಕಚೇರಿಯಲ್ಲಿ ಸಚಿವರಿಗೆ ಹಸ್ತಾಂತರಿಸಲಾಯಿತು.
ರಾಜ್ಯದಲ್ಲಿ ಉರ್ದು ಮಾಧ್ಯಮದ ಶಿಕ್ಷಣದ ಪ್ರಸ್ತುತ ಸ್ಥಿತಿಗತಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳು, ಶೈಕ್ಷಣಿಕ ಗುಣಮಟ್ಟ ಸುಧಾರಣೆ ಸೇರಿದಂತೆ ವಿವಿಧ ಅಂಶಗಳನ್ನು ಒಳಗೊಂಡ ಈ ವರದಿಯನ್ನು ನಿವೃತ್ತ ಐಎಎಸ್ ಅಧಿಕಾರಿಗಳ ತಂಡವು ಅಂಜುಮನ್ ತರಖ್ಖಿ ಉರ್ದು(ಹಿಂದ್) ಸಂಸ್ಥೆಯ ಉಸ್ತುವಾರಿಯಲ್ಲಿ ಎರಡು ವರ್ಷಗಳ ಕಾಲ ರಾಜ್ಯಾದ್ಯಂತ ಪ್ರವಾಸ ಮಾಡಿ ಅಧ್ಯಯನ ನಡೆಸಿ ಸಿದ್ಧಪಡಿಸಿದೆ.
ವರದಿಯನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಮಧು ಬಂಗಾರಪ್ಪ, ರಾಜ್ಯ ಸರಕಾರವು ಶಿಕ್ಷಣಕ್ಕೆ ಆದ್ಯತೆ ನೀಡಿದೆ. ಸರಕಾರಿ ಉರ್ದು ಶಾಲೆಗಳ ಅಭಿವೃದ್ಧಿ, ಮೂಲಸೌಕರ್ಯ ಸುಧಾರಣೆ, ಶಿಕ್ಷಕರ ನೇಮಕಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಭಾಪತಿ ಸಲೀಂ ಅಹ್ಮದ್ ಮಾತನಾಡಿ, ಉರ್ದು ಮಾಧ್ಯಮ ಶಾಲೆಗಳಲ್ಲಿ ತಾಂತ್ರಿಕ ಆಧಾರಿತ ಸ್ಮಾರ್ಟ್ ಕ್ಲಾಸ್ ಶಿಕ್ಷಣ ಒದಗಿಸುವುದು ಸೇರಿದಂತೆ ವಿವಿಧ ಶಿಫಾರಸ್ಸುಗಳನ್ನು ಪರಾಮರ್ಶಿಸಿ ಅನುಷ್ಠಾನಕ್ಕೆ ತರಲು ಸರಕಾರಕ್ಕೆ ಅಗತ್ಯ ನಿರ್ದೇಶನ ನೀಡಲಾಗುವುದು ಎಂದು ತಿಳಿಸಿದರು.
ಉರ್ದು ಮಾಧ್ಯಮ ಸ್ಥಿತಿಗತಿ ಕುರಿತು 2025ರಲ್ಲಿ ಅಝೀಝುಲ್ಲಾ ಬೇಗ್ ಅಧ್ಯಕ್ಷತೆಯಲ್ಲಿ ಮುಹಮ್ಮದ್ ಸಲಾಹುದ್ದೀನ್, ಎಂ.ಎ.ಖಾಲಿದ್, ಮೀರ್ ಅನೀಸ್ ಅಹ್ಮದ್, ಅದೋನಿ ಸೈಯದ್ ಸಲೀಂ ಅವರನ್ನೊಳಗೊಂಡ ಐವರು ನಿವೃತ್ತ ಐಎಎಸ್ ಅಧಿಕಾರಿಗಳ ಸಮಿತಿಯು ಎರಡು ವರ್ಷಗಳಿಂದ ನಿರಂತರವಾಗಿ ಅಧ್ಯಯನ ನಡೆಸಿ ಈ ವರದಿ ಸಿದ್ಧಪಡಿಸಿದೆ ಎಂದು ಸಲೀಂ ಅಹ್ಮದ್ ಹೇಳಿದರು.
ಉರ್ದು ಮಾಧ್ಯಮಕ್ಕೆ ಸಂಬಂಧಿಸಿದಂತೆ ವಿಶೇಷವಾಗಿ ತಾಂತ್ರಿಕ ಶಿಕ್ಷಣ, ಸಂಪನ್ಮೂಲ ವ್ಯಕ್ತಿಗಳ ಕೊರತೆ ಮೊದಲಾದ ವಿಷಯಗಳ ಮೇಲೆ ಬೆಳಕು ಚೆಲ್ಲಿ ಮಹತ್ವದ ಶಿಫಾರಸ್ಸುಗಳನ್ನು ಮಾಡಿದ್ದು, ಈ ಎಲ್ಲ ಶಿಫಾರಸ್ಸುಗಳನ್ನು ಪರಾಮರ್ಶಿಸಿ ಸರಕಾರದ ಮಟ್ಟದಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ಅವರು ನುಡಿದರು.
ಸಮಿತಿಯ ಸದಸ್ಯರು ವಿಶೇಷವಾಗಿ ಉರ್ದು ಶಾಲೆಗಳಲ್ಲಿ ತಾಂತ್ರಿಕ ಶಿಕ್ಷಣ ಹಾಗೂ ಸ್ಮಾರ್ಟ್ ಕ್ಲಾಸ್ಗಳ ಕೊರತೆ ಅತಿಯಾಗಿ ಎದ್ದು ಕಾಣುತ್ತಿದೆ, ಉಳಿದ ಭಾಷಾ ಮಾಧ್ಯಮಗಳಿಗೆ ಹೋಲಿಕೆ ಮಾಡಿದಾಗ ಉರ್ದು ಮಾಧ್ಯಮದಲ್ಲಿ ಭಾಷಾ ಸಂಪನ್ಮೂಲ ವ್ಯಕ್ತಿಗಳ ಕೊರತೆಯೂ ಅಧಿಕವಾಗಿದೆ, ಉರ್ದು ಮಾಧ್ಯಮದಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳ ಪಾಲಕರು ಶೇ.75 ರಷ್ಟು ಎಸ್ಎಸ್ಎಲ್ಸಿಗಿಂತ ಕಡಿಮೆ ವಿದ್ಯಾರ್ಹತೆ ಹೊಂದಿವರಾಗಿದ್ದಾರೆ ಎಂದು ಗಮನ ಸೆಳೆದಿದ್ದಾರೆ ಎಂದು ಸಲೀಂ ಅಹ್ಮದ್ ತಿಳಿಸಿದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ.ಖಾದರ್, ವಸತಿ ಸಚಿವ ಝಮೀರ್ ಅಹ್ಮದ್ ಖಾನ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಝ್ವಾನ್ ಅರ್ಶದ್, ಬಿಡಿಎ ಅಧ್ಯಕ್ಷ ಎನ್.ಎ.ಹಾರಿಸ್, ರಾಜ್ಯಸಭಾ ಸದಸ್ಯ ಮನ್ಸೂರ್ ಅಲಿ ಖಾನ್, ಶಾಸಕರಾದ ಯಾಸೀರ್ ಅಹ್ಮದ್ ಖಾನ್ ಪಠಾಣ್, ಕನೀಝ್ ಫಾತಿಮಾ, ವಿಧಾನಪರಿಷತ್ ಸದಸ್ಯೆ ಬಲ್ಕೀಸ್ ಬಾನು, ಅಂಜುಮನ್ ತರಖ್ಖಿ ಉರ್ದು(ಹಿಂದ್) ರಾಜ್ಯಾಧ್ಯಕ್ಷ ಮುಹಮ್ಮದ್ ಉಬೇದುಲ್ಲಾ ಶರೀಫ್, ಉಪಾಧ್ಯಕ್ಷ ಸೈಯದ್ ಅಶ್ರಫ್, ಪ್ರಧಾನ ಕಾರ್ಯದರ್ಶಿ ಮುಬೀನ್ ಮುನವ್ವರ್, ಅಧ್ಯಯನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.






