ಮುಂಗಾರು ಅಧಿವೇಶನ: ವಿಧಾನಸಭೆ ಬಾಗಿಲು, ಸಿಎಂ ಪೀಠಕ್ಕೆ ನಮಸ್ಕರಿಸಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ನೂತನ ಸರಕಾರದ ಮೊದಲ ವಿಧಾನಮಂಡಲದ ಅಧಿವೇಶನ ಇಂದಿನಿಂದ ಆರಂಭವಾಯಿತು. ಮಾಜಿ ಸಿಎಂ ಸಿದ್ದರಾಮಯ್ಯ ವಿಧಾನಸಭೆಯ ಮೊದಲ ದಿನದ ಕಲಾಪಕ್ಕೆ ಗೈರಾಗಿರುವುದು ಗಮನ ಸೆಳೆಯಿತು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಸಭೆ ಪ್ರವೇಶಿಸುವ ಮುನ್ನ ಬಾಗಿಲಿಗೆ ಹಾಗೂ ಮುಖ್ಯಮಂತ್ರಿಯವರ ಪೀಠಕ್ಕೆ ನಮಸ್ಕರಿಸಿದರು.
ಅಧಿವೇಶನದ ಕಲಾಪದಲ್ಲಿ ಭಾಗವಹಿಸಲು ವಿಧಾನಸೌಧಕ್ಕೆ ಆಗಮಿಸಿದ ಅವರು, ಸದನದ ಒಳ ಪ್ರವೇಶಿಸುವ ಬಾಗಿಲಿಗೆ ನಮಸ್ಕರಿಸಿದರು. ಬಳಿಕ ಮುಖ್ಯಮಂತ್ರಿಯವರಿಗೆ ಮೀಸಲಾದ ಆಸನದ ಬಳಿಗೆ ತೆರಳಿ, ಆ ಪೀಠಕ್ಕೆ ನಮಸ್ಕರಿಸಿದರು.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ʼಕೋಟ್ಯಾಂತರ ಕನ್ನಡಿಗರ ಆಶೀರ್ವಾದದೊಂದಿಗೆ, ಪ್ರಜಾಪ್ರಭುತ್ವದ ಆಶಯಕ್ಕೆ ಶಿರಬಾಗಿ ಸದನಕ್ಕೆ ಮುಖ್ಯಮಂತ್ರಿಯಾಗಿ ನನ್ನ ಮೊದಲ ಹೆಜ್ಜೆʼ ಎಂದು ಬರೆದುಕೊಂಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಗೈರು: ಹೊಸ ಸರಕಾರದ ಮೊದಲ ವಿಧಾನಸಭೆ ಅಧಿವೇಶನದ ಮೊದಲ ದಿನದ ಕಲಾಪದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಗೈರಾಗಿರುವುದು ಕುತೂಹಲ ಮೂಡಿಸಿದೆ.






