ಪ್ರಧಾನಿ ಟೀಕಿಸುವ ಭರದಲ್ಲಿ ಜಾತಿನಿಂದನೆ: ಸಚಿವ ಕಾಶಪ್ಪನವರ್ ವಿರುದ್ಧ ಮೇಲ್ಮನೆಯಲ್ಲಿ ಪ್ರತಿಭಟನೆ

ಬೆಂಗಳೂರು : ಪ್ರಧಾನಿಯನ್ನು ಟೀಕಿಸುವ ಭರದಲ್ಲಿ ಜಾತಿನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವ ವಿಜಯಾನಂದ ಕಾಶಪ್ಪನವರ್ ವಿರುದ್ಧ ಮೇಲ್ಮನೆಯಲ್ಲಿ ಪ್ರತಿಪಕ್ಷ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಪ್ರಧಾನಿಯನ್ನು ಟೀಕಿಸುವ ಸಂದರ್ಭದಲ್ಲಿ ಸಣ್ಣ ಕೈಗಾರಿಕೆ ಸಚಿವ ಕಾಶಪ್ಪನವರ್ ದಲಿತ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಚಿವರು ಸದನದಲ್ಲಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಕಾಶಪ್ಪನವರ್ ಸದನಕ್ಕೆ ಆಗಮಿಸುತ್ತಿದ್ದಂತೆ ಪ್ರತಿಪಕ್ಷ ಸದಸ್ಯರು ಅವರ ವಿರುದ್ಧ ಘೋಷಣೆ ಕೂಗಿ ರಾಜೀನಾಮೆಗೆ ಒತ್ತಾಯಿಸಿದರು ಹಾಗೂ ಕಾಶಪ್ಪನವರ್ ಅವರ ಬಂಧನಕ್ಕೆ ಆಗ್ರಹಿಸಿದರು. ಇದಕ್ಕೆ ಆಡಳಿತ ಪಕ್ಷದ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸದನದಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.
ಪ್ರಶ್ನೋತ್ತರ ಕಲಾಪದ ವೇಳೆ ಪ್ರತಿಪಕ್ಷಗಳ ಘೋಷಣೆ ಹಾಗೂ ಪ್ರತಿಭಟನೆಗೆ ಸಚಿವ ಕೃಷ್ಣಬೈರೇಗೌಡ ಅಸಮಾಧಾನ ವ್ಯಕ್ತಪಡಿಸಿ, ಕಾಶಪ್ಪನವರ್ ಪರವಾಗಿ ಕಾಂಗ್ರೆಸ್ ಸದಸ್ಯರು ಪ್ರತಿಪಕ್ಷಗಳ ನಡೆಯನ್ನು ಖಂಡಿಸಿದರು.
ಈ ವೇಳೆ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪ್ರತಿಕ್ರಿಯಿಸಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಪಮಾನ ಮಾಡಿದವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಆಗ ಛಲವಾದಿ ನಾರಾಯಣಸ್ವಾಮಿ, ಖರ್ಗೆ ಅವರಿಗೆ ತಾವು ಯಾವುದೇ ಅಪಮಾನ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.






