ಒತ್ತುವರಿ ಆರೋಪ: ಅರಣ್ಯ ಪ್ರದೇಶಕ್ಕೆ ಸೇರಿದ ಜಮೀನಿನ ಮೇಲಿನ ಅಧಿಕಾರ ಬೇರೆಯವರಿಗೆ ಘೋಷಿಸದಂತೆ ಹೈಕೋರ್ಟ್ ನಿರ್ಬಂಧ

ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತಿರುವ ಭುವನಹಳ್ಳಿ ಅರಣ್ಯ ಪ್ರದೇಶಕ್ಕೆ ಸೇರಿದೆ ಎನ್ನಲಾದ 8 ಎಕರೆ 35 ಗುಂಟೆ ಜಮೀನ ಮೇಲಿನ ಅಧಿಕಾರವನ್ನು ಯಾವುದೇ ಮೂರನೇ ವ್ಯಕ್ತಿಗೆ ಘೋಷಿಸದಂತೆ ನಿರ್ಬಂಧಿಸಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಈ ಕುರಿತಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಮತ್ತು ದೇವನಹಳ್ಳಿ ತಾಲೂಕು ವಲಯ ಅರಣ್ಯ ಅಧಿಕಾರಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ.
ವಿಚಾರಣೆ ವೇಳೆ ರಾಜ್ಯ ಸರಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಕಿರಣ್ ಎಂ.ರೋಣ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಕಸಬಾ ಹೋಬಳಿಯಲ್ಲಿ ಚಿಕ್ಕಸಣ್ಣೆ ಮತ್ತು ಭುವನಹಳ್ಳಿಯನ್ನು ಒಳಗೊಂಡ 59 ಎಕರೆ 8 ಗುಂಟೆ ಪ್ರದೇಶವನ್ನು ರಾಜ್ಯದ ಅರಣ್ಯ ಪ್ರದೇಶ ಎಂದು ಮೈಸೂರು ಅರಣ್ಯ ನಿಯಂತ್ರಣ ಕಾಯಿದೆಯ ಸೆಕ್ಷನ್ 17ರ ಅನುಸಾರ 1921ರ ಜ.8ರಲ್ಲೇ ಅಧಿಸೂಚನೆ ಹೊರಡಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.
ಭುವನಹಳ್ಳಿ ರಾಜ್ಯ ಅರಣ್ಯ ಬ್ಲಾಕ್ನಲ್ಲಿರುವ ಚಿಕ್ಕಸಣ್ಣೆಯ ಸರ್ವೇ ನಂಬರ್ 69ರಲ್ಲಿ (ಹಳೆಯ ಸರ್ವೇ ನಂಬರ್ 67) ವ್ಯಾಜ್ಯಕ್ಕೆ ಒಳಪಟ್ಟಿರುವ 8 ಎಕರೆ 35 ಗುಂಟೆ ಜಮೀನು ಕೂಡಾ ಸೇರಿದೆ. ಇದರಲ್ಲಿ ಮೇಲ್ಮನವಿಯ ಪ್ರತಿವಾದಿಗಳು ಮತ್ತು ಅವರ ಕಡೆಯವರು ವ್ಯಾಜ್ಯ ಪ್ರದೇಶದಲ್ಲಿ ಲೇಔಟ್ ನಿರ್ಮಾಣ ಮಾಡಿದ್ದು, ಅರಣ್ಯ ಪ್ರದೇಶದ ಮೇಲೆ ಮೂರನೇ ವ್ಯಕ್ತಿ ಸ್ವತ್ತಿನ ಅಧಿಕಾರ ಹೊಂದಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆಕ್ಷೇಪಿಸಿದರು.
ವಕೀಲರ ವಾದ ಆಲಿಸಿದ ನ್ಯಾಯಪೀಠವು ಪ್ರತಿವಾದಿಯಾಗಿರುವ ಚಿಕ್ಕಸಣ್ಣೆ ಗ್ರಾಮದ ಸಗಟು ಹಣ್ಣಿನ ವ್ಯಾಪಾರಿ ಎಂ.ಎ.ಮೊಹಮದ್ ಸನಾವುಲ್ಲಾ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.







